
ಬೆಂಗಳೂರು: ದುಡ್ಡು ಮಾಡೋಕೆ ಎಲೆಕ್ಷನ್ ಅಡ್ಡ ಬರಲ್ಲ, ಆದ್ರೆ ಜನರ ಕೆಲಸ ಮಾಡೋಕೆ ಮಾತ್ರ ಎಲೆಕ್ಷನ್ ಅಡ್ಡ ಬರುತ್ತಾ..? ಕೋರ್ಟ್ನಲ್ಲಿ ಬಾಕಿ ಇರುವ ತಕರಾರು ಪ್ರಕರಣಗಳನ್ನು ಇತ್ಯರ್ಥಗೊಳಿಸಿ ಅಂದ್ರೆ ಎಲೆಕ್ಷನ್ ಕೆಲಸ ಇತ್ತು ಅಂತ ಸಬೂಬು ಹೇಳ್ತೀರ ಎಂದು ಉಪ ವಿಭಾಗಾಧಿಕಾರಿ (ಎಸಿ)ಗಳ ಮೇಲೆ ಸಚಿವ ಕೃಷ್ಣ ಬೈರೇಗೌಡ ಹರಿಹಾಯ್ದರು.

ಎಸಿ ನ್ಯಾಯಾಲಯಗಳಲ್ಲಿ ಹೆಚ್ಚು ಸಂಖ್ಯೆಯಲ್ಲಿ ತಕರಾರು ಪ್ರಕರಣಗಳನ್ನು ಇತ್ಯರ್ಥಗೊಳಿಸದೆ ಬಾಕಿ ಉಳಿಸಿಕೊಂಡಿರುವ ಮಂಡ್ಯ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ತುಮಕೂರು, ಕೊಪ್ಪಳ, ಮೈಸೂರು, ಮಂಗಳೂರು ಹಾಗೂ ಬೆಳಗಾವಿ ಜಿಲ್ಲೆಗಳ ಆಯ್ದ 30 ಉಪ-ವಿಭಾಧಿಕಾರಿಗಳು ಹಾಗೂ ವಲಯ ಆಯುಕ್ತರ ಜೊತೆ ಇಂದು ವಿಕಾಸಸೌಧದಲ್ಲಿ ಶುಕ್ರವಾರ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಲಾಯಿತು.
ಈ ವೇಳೆ ಉಪ-ವಿಭಾಗಾಧಿಕಾರಿಗಳ ನ್ಯಾಯಾಲಯದಲ್ಲಿ ಬಾಕಿ ಇರುವ ತಕರಾರು ಪ್ರಕರಣಗಳ ಇತ್ಯರ್ಥಕ್ಕೆ ಮುಂದಾಗದ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಅವರು, ಹಲವು ವರ್ಷಗಳಿಂದ ಎಸಿ ನ್ಯಾಯಾಲಯಗಳಿಗೆ ಅಲೆದಾಡಿ ಜನ ಬಸವಳಿದಿದ್ದಾರೆ.
ಹೀಗಾಗಿ ಬಾಕಿ ಇರುವ ಎಲ್ಲಾ ಪ್ರಕರಣಗಳನ್ನು ಶೀಘ್ರ ಇತ್ಯರ್ಥಗೊಳಿಸಬೇಕು ಎಂದು ನಾವು ಕಳೆದ ಒಂದು ವರ್ಷದಿಂದ ರಾಜ್ಯಾದ್ಯಂತ ಓಡಾಡಿ ಸಭೆ ನಡೆಸಿ ಎಲ್ಲಾ ಅಧಿಕಾರಿಗಳಿಗೂ ಗುರಿ ನಿಗದಿ ಮಾಡಲಾಗಿದೆ. ಆದರೆ, ಕಳೆದ ಮಾರ್ಚ್ನಿಂದ ಪ್ರಕರಣ ವಿಲೇವಾರಿ ಕೆಲಸ ಮತ್ತೆ ನಿಂತ ನೀರಾಗಿದೆ ಎಂದು ತೀವ್ರ ಅಸಮಾಧಾನ ಹೊರಹಾಕಿದರು.
ರಾಜ್ಯಾದ್ಯಂತ ಎಸಿ ನ್ಯಾಯಾಲಯಗಳಲ್ಲಿ ಒಟ್ಟಾರೆ 36,430 ಪ್ರಕರಣಗಳು ಬಾಕಿ ಇವೆ. ಈ ಪೈಕಿ ಅತ್ಯಧಿಕ ಬೆಂಗಳೂರು ಉತ್ತರ ವಲಯದಲ್ಲಿ 5419 ಹಾಗೂ ಬೆಂ.ದಕ್ಷಿಣ ವಲಯದಲ್ಲಿ 4351 ಪ್ರಕರಣಗಳು ಬಾಕಿ ಇವೆ.
ಇನ್ನೂ ತುಮಕೂರು ಜಿಲ್ಲೆಯ ಎಸಿ ಕೋರ್ಟ್ನಲ್ಲಿ ಕಳೆದ ಮಾರ್ಚ್ನಲ್ಲಿ 1373 ಪ್ರಕರಣಗಳು ದಾಖಲಾಗಿದ್ದರೆ, ಮಧುಗಿರಿಯಲ್ಲಿ 898 ಪ್ರಕರಣಗಳು ದಾಖಲಾಗಿದೆ. ಆದರೆ, ಇಷ್ಟೂ ಪ್ರಕರಣಗಳ ಪೈಕಿ ಕಳೆದ ಐದು ತಿಂಗಳಿನಿಂದ ಯಾವೊಂದು ಪ್ರಕರಣದಲ್ಲೂ ಮಧುಗಿರಿ ಉಪ-ವಿಭಾಗಾಧಿಕಾರಿ ಶಿವಪ್ಪ ಹಾಗೂ ತುಮಕೂರು ಉಪ-ವಿಭಾಗಾಧಿಕಾರಿ ಗೌರವ್ ಶೆಟ್ಟಿ ಯಾವುದೇ ಕ್ರಮ ಜರಿಗಿಸಿಲ್ಲ. ಇವರ ವಿರುದ್ಧವೂ ಸಭೆಯಲ್ಲಿ ಕೃಷ್ಣ ಬೈರೇಗೌಡ ತೀವ್ರ ಅಸಮಾಧಾನ ಹೊರಹಾಕಿದರು.
ಅಲ್ಲದೆ, ಎಸಿ ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳ ಇತ್ಯರ್ಥಕ್ಕೆ ಮುಂದಾಗದ ಅಧಿಕಾರಿಗಳಿಗೆ ನೋಟೀಸ್ ಜಾರಿಗೊಳಿಸಿ ಕಠಿಣ ಕ್ರಮ ಜರುಗಿಸುವಂತೆಯೂ ಕಂದಾಯ ಇಲಾಖೆಯ ಸರಕಾರದ ಪ್ರಧಾನ ಕಾರ್ಯದರ್ಶಿ ರಾಜೇಂದ್ರ ಕುಮಾರ್ ಕಟಾರಿಯಾ ಅವರಿಗೆ ಕೃಷ್ಣ ಬೈರೇಗೌಡ ಸೂಚಿಸಿದರು.
ಸಭೆಯಲ್ಲಿ ಇಲಾಖೆ ಕಂದಾಯ ಇಲಾಖೆಯ ಸರಕಾರದ ಪ್ರಧಾನ ಕಾರ್ಯದರ್ಶಿ ರಾಜೇಂದ್ರ ಕುಮಾರ್ ಕಟಾರಿಯಾ, ಕಂದಾಯ ಆಯುಕ್ತ ಸುನೀಲ್ ಕುಮಾರ್, ಪ್ರಾದೇಶಿಕ ಆಯುಕ್ತ ಆದಿತ್ಯ ಬಿಸ್ವಾಸ್ ಹಾಗೂ ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು.