ಕೇಂದ್ರ ಸರ್ಕಾರ ಪರಿಚಯಿಸಿರುವ ನೂತನ ಕೃಷಿ ಕಾನೂನು ಹಿಂಪಡೆಯುವಂತೆ ಒತ್ತಾಯಿಸಿ ದೆಹಲಿಯಲ್ಲಿ ನಡೆಯುತ್ತಿರುವ ರೈತರ ಪ್ರತಿಭಟನೆ ಐದನೇ ದಿನಕ್ಕೆ ಕಾಲಿಟ್ಟಿದೆ.
ರೈತ ವಿರೋಧಿ ಕೃಷಿ ಕಾನೂನುಗಳನ್ನು ವಿರೋಧಿಸಿ ʼದೆಹಲಿ ಚಲೋʼ ಅಭಿಯಾನ ಪ್ರಾರಂಭಿಸಿರುವ ರೈತರನ್ನು ದೆಹಲಿಗೆ ತಲಪದಂತೆ ಸರ್ಕಾರ ಶತಾಯಗತಾಯ ಪ್ರಯತ್ನ ಪಡುತ್ತಿದೆ.
Also Read: ತಮ್ಮನ್ನು ಹಿಂಸಿಸಿದ ಪೊಲೀಸರಿಗೇ ಆಹಾರ, ನೀರು ನೀಡಿದ ಪ್ರತಿಭಟನಾನಿರತ ರೈತರು
ರಾಷ್ಟ್ರ ರಾಜಧಾನಿಯಲ್ಲಿ ಸಾವಿರಾರು ರೈತರು ಪ್ರತಿಭಟನೆ ನಡೆಸುತ್ತಿದ್ದು, ರಾಷ್ಟ್ರ ರಾಜಧಾನಿ ಪ್ರವೇಶದ ಐದು ಪ್ರವೇಶದ್ವಾರಗಳನ್ನು ಬಂದ್ ಮಾಡುವುದಾಗಿ ಪ್ರತಿಭಟನಾ ನಿರತ ರೈತರು ಕೇಂದ್ರ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

ಪ್ರತಿಧ್ವನಿಯನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ
ರೈತರ ಪ್ರತಿಭಟನೆಯ ತೀವ್ರತೆಗೆ ದೆಹಲಿಗೆ ಸಾಗಬೇಕಿದ್ದ ಸರಕುಗಳು ದೆಹಲಿಗೆ ತಲುಪದೆ ವಸ್ತುಗಳ ಅಭಾವ ತಲೆದೋರಿದೆಯೆಂದು ವರದಿಯಾಗಿದೆ.
ದೇಶದ ವಿವಿಧ ಮೂಲಗಳಿಂದ ದೆಹಲಿಯತ್ತ ಧಾವಿಸಿದ್ದ ರೈತರು ನವೆಂಬರ್ 26 ರಂದು ದೆಹಲಿಯ ರಾಮಲೀಲಾ ಮೈದಾನದಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಂಡಿದ್ದರು. ಈ ಪ್ರತಿಭಟನೆಗೆ ಮೊದಲು ಒಪ್ಪಿಗೆ ನೀಡಿದ್ದ ಪೊಲೀಸರು ಕರೋನಾ ಕಾರಣವೊಡ್ಡಿ ಒಪ್ಪಿಗೆಯನ್ನು ಹಿಂಪಡೆದುಕೊಂಡಿದ್ದರು. ಪ್ರತಿಭಟನೆ ಹತ್ತಿಕ್ಕಲೆಂದೇ ಪೊಲೀಸರು ಕರೋನಾ ನೆಪ ಹೂಡಿದ್ದಾರೆಂದು ಆರೋಪಿಸಿರುವ ರೈತರು, ಪ್ರತಿಭಟನೆಯನ್ನು ಮುಂದುವರೆಸಿದ್ದಾರೆ.
Also Read: ʼರೈತರನ್ನು ಭಯೋತ್ಪಾದಕರಂತೆ ಕಾಣಬೇಡಿʼ; ಬಿಜೆಪಿಯೇತರ ನಾಯಕರ ಆಗ್ರಹ
ಅಲ್ಲದೆ ರೈತರು ದೆಹಲಿಯನ್ನು ಪ್ರವೇಶಿಸದಂತೆ ಗಡಿಯಲ್ಲೇ ತಡೆದಿದ್ದರು. ಸದ್ಯ ದೆಹಲಿಯ ಗಡಿಯಲ್ಲಿರುವ ರೈತರು ತಾವಿದ್ದ ಸ್ಥಗಳಲ್ಲಿಯೇ ಪ್ರತಿಭಟನೆಯನ್ನು ಮುಂದುವರೆಸಿದ್ದಾರೆ.
ಈ ನಡುವೆ ರೈತರ ಪ್ರತಿಭಟನೆಗೆ ದೇಶಾದ್ಯಂತ ರೈತರೂ ಬೆಂಬಲ ವ್ಯಕ್ತಪಡಿಸುತ್ತಿದ್ದಾರೆ. ಹರಿಯಾಣ, ರಾಜಸ್ಥಾನ, ಪಂಜಾಬ್ ಮತ್ತು ಉತ್ತರಪ್ರದೇಶಗಳಿಂದ ಸಾವಿರಾರು ಸಂಖ್ಯೆಯಲ್ಲಿ ರೈತರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದಾರೆ. ಈ ಹಿನ್ನೆಲೆಯಲ್ಲಿ ದೆಹಲಿ ಪೊಲೀಸರು ಹರಿಯಾಣ, ರಾಜಸ್ಥಾನ, ಪಂಜಾಬ್ ಮತ್ತು ಉತ್ತರ ಪ್ರದೇಶಗಳಿಂದ ಬರುವ ರಸ್ತೆಗಳಲ್ಲಿ ರೈತರನ್ನು ತಡೆಹಿಡಿದಿದ್ದಾರೆ.
ಸಿಖ್ ಸಮುದಾಯದ ಪುಣ್ಯದಿನವಾದ ಗುರುನಾನಕ್ ಜಯಂತಿಯಂದೂ ಪ್ರತಿಭಟನೆ ಕೈಬಿಡದ ಪಂಜಾಬ್ ಮತ್ತು ಹರಿಯಾಣದ ರೈತರು ದೆಹಲಿ ಪ್ರವೇಶಿಸುವ ಸಿಂಘು ಗಡಿ ಪ್ರದೇಶದಿಂದಲೇ ಪ್ರಾರ್ಥನೆ ಸಲ್ಲಿಸಿದ್ದಾರೆ.

ಸಿಂಘು ಗಡಿಯನ್ನು ಬಂದ್ ಮಾಡಿರುವ ಪೊಲೀಸರು ಅಲ್ಲಿನ ಸಂಚಾರ ವ್ಯವಸ್ಥೆಗೆ ಬೇರೆಡೆಗೆ ವರ್ಗಾಯಿಸಿದ್ದಾರೆ. ಇದಲ್ಲದೆ ಟಿಕ್ರಿ ಗಡಿ ಪ್ರದೇಶದಲ್ಲೂ ಸಂಚಾರ ವ್ಯವಸ್ಥೆಯನ್ನು ಬೇರೆಡೆಗೆ ವರ್ಗಾಯಿಸಿದ್ದಾರೆ.
ಶಾಂತಿಯುತ ರೀತಿಯಲ್ಲಿ ಪ್ರತಿಭಟನೆ ನಡೆಯುತ್ತಿದ್ದು, ರೈತ ಮುಖಂಡರೊಂದಿಗೆ ಮಾತುಕತೆ ನಡೆಸಿದ್ದೇವೆ. ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವುದು ನಮ್ಮ ಉದ್ದೇಶವಾಗಿದೆ. ಪ್ರತಿಭಟನಾ ಸ್ಥಳದಲ್ಲಿ ಸಾಕಷ್ಟು ಭದ್ರತಾ ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ ಎಂದು ಜಂಟಿ ಪೊಲೀಸ್ ಆಯುಕ್ತ ಸುರೇಂದ್ರ ಯಾದವ್ ಅವರು ತಿಳಿಸಿದ್ದಾರೆ.