ದೇಶದಲ್ಲಿ ನಿರುದ್ಯೋಗ ಸಮಸ್ಯೆ ಏರುತ್ತಿರುವ ಹಿನ್ನಲೆಯಲ್ಲಿ ಭಾರತೀಯ ಯುವ ಕಾಂಗ್ರೆಸ್ ಆಗಸ್ಟ್ 9ರಿಂದ ದೇಶಾದ್ಯಂತ ’ಕೆಲಸ ನೀಡಿ’ ಅಭಿಯಾನವನ್ನು ಹಮ್ಮಿಕೊಂಡಿದೆ. ಶ್ರೀನಿವಾಸ್ ಬಿ.ವಿ. ನೇತೃತ್ವದಲ್ಲಿ ದೇಶದುದ್ದಗಲಕ್ಕೂ ಕೆಲಸ ನೀಡಿ (ರೋಜ್ಗಾರ್ ದೋ) ಎಂಬ ಅಭಿಯಾನವನ್ನು ಆರಂಭಿಸಲಾಗಿದೆ.
ರಾಷ್ಟ್ರ ರಾಜಧಾನಿ ದೆಹಲಿಯಿಂದ ರಾಜ್ಯ, ಜಿಲ್ಲಾ, ತಾಲೂಕು ಮತ್ತು ಗ್ರಾಮಗಳ ಮಟ್ಟದಲ್ಲಿ ನಿರುದ್ಯೋಗ ಸಮಸ್ಯೆಯ ಬಗ್ಗೆ ಅರಿವು ಮೂಡಿಸುವುದು ಹಾಗೂ ನಿರುದ್ಯೋಗ ಸಮಸ್ಯೆ ಕುರಿತು ಕೇಂದ್ರ ಸರ್ಕಾರವನ್ನು ಎಚ್ಚರಿಸುವುದು ಈ ಅಭಿಯಾನದ ಮುಖ್ಯ ಉದ್ದೇಶ ಎಂದು ಭಾರತೀಯ ಯೂತ್ ಕಾಂಗ್ರೆಸ್ ಹೇಳಿದೆ.
ದೇಶದಲ್ಲಿ ಈಗ 30 ಕೋಟಿ ಯುವಕರು ನಿರುದ್ಯೋಗಿಗಳಾಗಿದ್ದಾರೆ. ನಿರುದ್ಯೋಗ ಸಮಸ್ಯೆಯಿಂದ ಆತ್ಮಹತ್ಯೆಗೂ ಶರಣಾಗುತ್ತಿದ್ದಾರೆ. ಬಿಜೆಪಿ ಪ್ರತಿ ವರ್ಷ 2 ಕೋಟಿ ಜನರಿಗೆ ಉದ್ಯೋಗ ನೀಡುವುದಾಗಿ ಪ್ರಣಾಳಿಕೆಯಲ್ಲಿ ವಾಗ್ದಾನ ಮಾಡಿ ಅಧಿಕಾರಕ್ಕೆ ಬಂದಿತ್ತು. ಅದರ ಪ್ರಕಾರ 6 ವರ್ಷಗಳಲ್ಲಿ 12 ಕೋಟಿ ಜನರಿಗೆ ಉದ್ಯೋಗ ಸಿಗಬೇಕಿತ್ತು. ಆದರೆ ಕೋವಿಡ್ 19 ಸಂದರ್ಭವೊಂದರಲ್ಲೇ ಸುಮಾರು 12 ಕೋಟಿ ಜನ ಉದ್ಯೋಗ ಕಳೆದುಕೊಂಡಿದ್ದಾರೆ. ಆದ್ದರಿಂದ ಯುವ ಕಾಂಗ್ರೆಸ್ ‘ಕೆಲಸ ನೀಡಿ’ ಎಂಬ ಅಭಿಯಾನ ಕೈಗೆತ್ತಿಕೊಳ್ಳುತ್ತಿದೆ ಎಂದು ಭಾರತೀಯ ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಶ್ರೀನಿವಾಸ್ ಬಿ.ವಿ. ತಿಳಿಸಿದ್ದಾರೆ.
-
ಕೂಡಲೇ ಖಾಲಿ ಇರುವ ಸರ್ಕಾರಿ ಹುದ್ದೆಗಳನ್ನು ಭರ್ತಿ ಮಾಡಬೇಕು.
-
ಕೂಡಲೇ ರೈಲ್ವೆ ಮತ್ತು ಇತರೆ ಸರ್ಕಾರಿ ಸಂಸ್ಥೆಗಳ ಖಾಸಗೀಕರಣವನ್ನು ನಿಲ್ಲಿಸಬೇಕು.
-
ಕರೋನಾ ಸಂದರ್ಭದಲ್ಲಿ ಉದ್ಯೋಗ ಕಳೆದುಕೊಂಡವರಿಗೆ ಆರ್ಥಿಕ ನೆರವು ನೀಡಬೇಕು.
-
ಸರ್ಕಾರಿ ಇಲಾಖೆಗಳಲ್ಲಿ ಇರುವ ಹುದ್ದೆಗಳನ್ನು ರದ್ದುಗೊಳಿಸಬಾರದು.
-
ನೇಮಕಾತಿ ಬಗ್ಗೆ ನ್ಯಾಯಾಲಯದಲ್ಲಿರುವ ಪ್ರಕರಣಗಳನ್ನು ಶೀಘ್ರವೇ ಇತ್ಯರ್ಥ ಆಗುವಂತೆ ಮಾಡಬೇಕು.
ಮೊದಲಾದ ಬೇಡಿಕೆಗಳನ್ನು ಯುವ ಕಾಂಗ್ರೆಸ್ ಈ ಅಭಿಯಾನದ ಮೂಲಕ ಕೇಂದ್ರ ಸರ್ಕಾರದ ಮುಂದಿಟ್ಟಿದೆ.