ತಮಿಳುನಾಡಿನ ಆಡಳಿತಾರೂಢ AIADMK ಮುಂದಿನ ವರ್ಷ ನಡೆಯಲಿರುವ ವಿಧಾನಸಭಾ ಚುನಾವಣೆಗೆ ಬಿಜೆಪಿಯೊಂದಿಗೆ ಮೈತ್ರಿ ಮುಂದುವರಿಸಲಿದೆ ಎಂದು ಮುಖ್ಯಮಂತ್ರಿ ಎಡಪ್ಪಾಡಿ ಪಳನಿಸ್ವಾಮಿ ಮತ್ತು ಅವರ ಉಪಮುಖ್ಯಮಂತ್ರಿ ಒ ಪನ್ನರ್ಸೆಲ್ವಂ ಖಚಿತಪಡಿಸಿದ್ದಾರೆ. ಸುಮಾರು ಆರು ತಿಂಗಳಲ್ಲಿ ತಮಿಳುನಾಡಿನಲ್ಲಿ ಚುನಾವಣೆ ನಡೆಯಲಿದೆ.
ಕೇಂದ್ರ ಗೃಹ ಸಚಿವ ಅಮಿತ್ ಶಾ ಭಾಗವಹಿಸಿದ ಸರ್ಕಾರಿ ಸಮಾರಂಭದಲ್ಲಿ ಈ ಘೋಷಣೆ ಮಾಡಲಾಗಿದ್ದು, ಎಐಎಡಿಎಂಕೆ-ಬಿಜೆಪಿ ಮೈತ್ರಿ ಹೆಚ್ಚಿನ ಸ್ಥಾನಗಳನ್ನು ಗೆಲ್ಲುತ್ತದೆ ಮತ್ತು ರಾಜ್ಯದಲ್ಲಿ ಅಧಿಕಾರವನ್ನು ಉಳಿಸಿಕೊಳ್ಳಲಿದೆ ಎಂಬ ವಿಶ್ವಾಸವಿದೆ ಎಂದು ಸಿಎಂ ಪಳನಿಸ್ವಾಮಿ ಹೇಳಿದ್ದಾರೆ.
2019 ರ ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಎಐಎಡಿಎಂಕೆ ರಾಜ್ಯದಲ್ಲಿ ಕೆಟ್ಟ ಪ್ರದರ್ಶನ ನೀಡಿದ ನಂತರ ಬಿಜೆಪಿಯೊಂದಿಗೆ ದೂರವಿರಬಹುದೆಂಬ ಎಲ್ಲಾ ಊಹಾಪೋಹಗಳಿಗೆ ಈ ಪ್ರಕಟಣೆಯು ಅಂತ್ಯ ಹಾಡಿದೆ ಮತ್ತು ಇತ್ತೀಚಿನ ವೆಟ್ರಿವೆಲ್ ಯಾತ್ರಾ ವಿವಾದದಿಂದಾಗಿ ಎರಡೂ ಶಿಬಿರಗಳ ನಾಯಕರು ಪರಸ್ಪರ ಆರೋಪ-ಪ್ರತ್ಯಾರೋಪ ಹೊರಿಸಿದ್ದರು.
67,378 ಕೋಟಿ ರೂ. ಮೌಲ್ಯದ ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸುವ ಎರಡು ದಿನಗಳ ಭೇಟಿಯ ಅಂಗವಾಗಿ ಅಮಿತ್ ಶಾ ಶನಿವಾರ ಚೆನ್ನೈಗೆ ಬಂದಿಳಿದಿದ್ದಾರೆ. ಸಭೆಯನ್ನುದ್ದೇಶಿಸಿ ಮಾತನಾಡಿದ ಅಮಿತ್ ಶಾ, ಪಳನಿಸ್ವಾಮಿ ಮತ್ತು ಪನೀರ್ ಸೆಲ್ವಂ ನೇತೃತ್ವದಲ್ಲಿ ತಮಿಳುನಾಡು ಉತ್ತಮ ಪ್ರಗತಿ ಸಾಧಿಸುತ್ತಿದೆ ಎಂದು ಹೇಳಿದ್ದಾರೆ.