ಮರಾಠ ಅಭಿವೃದ್ಧಿ ಪ್ರಾಧಿಕಾರ ಬೆನ್ನಲ್ಲೀಗ ವೀರಶೈವ-ಲಿಂಗಾಯತ ಅಭಿವೃದ್ಧಿ ನಿಗಮ ಸ್ಥಾಪನೆಗೆ ಒಪ್ಪಿಗೆ ನೀಡಿ ಸಿಎಂ ಬಿಎಸ್ ಯಡಿಯೂರಪ್ಪ ನೇತೃತ್ವದ ರಾಜ್ಯ ಬಿಜೆಪಿ ಸರ್ಕಾರ ಆದೇಶ ಹೊರಡಿಸಿದೆ. ಒಂದೆಡೆ ಮರಾಠ ಅಭಿವೃದ್ಧಿ ಪ್ರಾಧಿಕಾರ ರಚನೆ ಕುರಿತು ಪರ-ವಿರೋಧ ಚರ್ಚೆಗಳು ನಡೆಯುತ್ತಿದ್ದರೆ, ಇನ್ನೊಂದೆಡೆ ವೀರಶೈವ-ಲಿಂಗಾಯತ ಅಭಿವೃದ್ಧಿ ನಿಗಮದ ರೀತಿಯಲ್ಲೇ ಒಕ್ಕಲಿಗ ಸಮುದಾಯದ ಅಭಿವೃದ್ಧಿ ನಿಗಮಕ್ಕೂ ಸಿಎಂ ಒಪ್ಪಿಗೆ ನೀಡಲಿ ಎಂದು ಸರ್ಕಾರದ ಮುಂದೆ ಬೇಡಿಕೆ ಇಟ್ಟಿದ್ದಾರೆ.
ಮೊದಲಿಗೆ ಸಿಎಂ ಬಿಎಸ್ ಯಡಿಯೂರಪ್ಪ ಮರಾಠ ಅಭಿವೃದ್ಧಿ ಪ್ರಾಧಿಕಾರ ರಚನೆಗೆ ಒಪ್ಪಿಗೆ ನೀಡಿ ಆದೇಶಿಸಿದ್ದರು. ಇದರ ಬೆನ್ನಲ್ಲೇ ಕನ್ನಡ ಪರ ಸಂಘಟನೆಗಳು ಸರ್ಕಾರದ ನಿರ್ಧಾರಕ್ಕೆ ವಿರೋಧ ವ್ಯಕ್ತಪಡಿಸಿದರು. ಹೀಗಿರುವಾಗಲೇ ವೀರಶೈವ-ಲಿಂಗಾಯಿತರ ಸಮಗ್ರ ಅಭಿವೃದ್ಧಿಗಾಗಿ ಕರ್ನಾಟಕ ರಾಜ್ಯ ವೀರಶೈವ ಲಿಂಗಾಯಿತ ಅಭಿವೃದ್ಧಿ ಮಂಡಳಿ/ ನಿಗಮ ಸ್ಥಾಪಿಸಿ ಎಂದು ಯಡಿಯೂರಪ್ಪಗೆ ಡಿಸಿಎಂ ಲಕ್ಷ್ಮಣ ಸವದಿ ಮನವಿ ಸಲ್ಲಿಸಿದ್ದರು.

ಪ್ರತಿಧ್ವನಿಯನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ
ಕರ್ನಾಟಕ ವೀರಶೈವ-ಲಿಂಗಾಯತ ಅಭಿವೃದ್ಧಿ ನಿಗಮ ಸ್ಥಾಪನೆಗೆ ಸಿಎಂ ಒಪ್ಪಿಗೆ ನೀಡುತ್ತಿದ್ದಂತೆಯೇ ಒಕ್ಕಲಿಗರು ಸೇರಿದಂತೆ ವಿವಿಧ ಸಮುದಾಯದ ಮುಖಂಡರು ತಮ್ಮ ಸಮಾಜದವರಿಗೂಂದು ಅಭಿವೃದ್ಧಿ ನಿಗಮ ಸ್ಥಾಪನೆ ಮಾಡಿ ಎಂದು ಸಾಮಾಜಿಕ ಜಾಲತಾಣದಲ್ಲಿ ಅಭಿಯಾಶ ಶುರು ಮಾಡಿದ್ದಾರೆ. ಸಿಎಂ ಯಡಿಯೂರಪ್ಪನವರ ರಾಜಕೀಯ ಕಾರ್ಯದರ್ಶಿ ಮತ್ತು ಯಲಹಂಕ ಶಾಸಕರಾದ ಎಸ್. ಆರ್. ವಿಶ್ವನಾಥ್, ಡಿಸಿಎಂ ಅಶ್ವಥ್ ನಾರಾಯಣ್, ಆರ್. ಅಶೋಕ್ ಸೇರಿದಂತೆ ಹಲವು ಬಿಜೆಪಿ ರಾಜ್ಯ ನಾಯಕರೇ ಒಕ್ಕಲಿಗ ಸಮುದಾಯದ ಅಭಿವೃದ್ಧಿ ನಿಗಮ ಸ್ಥಾಪನೆಗೆ ಒತ್ತಡ ಹಾಕಿದ್ದಾರೆ.
ಜಾತಿಗೊಂದು ಪ್ರಾಧಿಕಾರ ರಚನೆ ಮಾಡುತ್ತಾ ಹೋದರೆ ಅದಕ್ಕೆ ಮಿತಿಯೇ ಇರುವುದಿಲ್ಲ. ಎಲ್ಲಾ ಸಮಾಜದಲ್ಲಿ ಸಾಮಾಜಿಕವಾಗಿ, ಶೈಕ್ಷಣಿಕವಾಗಿ, ಆರ್ಥಿಕವಾಗಿ ಹಿಂದುಳಿದವರು ಇದ್ದಾರೆ. ಅಂಥವರಿಗೆ ಹೆಚ್ಚು ಒತ್ತು ಕೊಡುವ ಕೆಲಸ ಮಾಡಬೇಕೆ ಹೊರತು ಹೀಗೆ ಜಾತಿಗೊಂದು ನಿಗಮ ಸ್ಥಾಪಿಸಿ ಸಮಾಜ ಹೊಡೆಯುವುದಲ್ಲ ಎಂದು ಹಲವರು ಸಾಮಾಜಿಕ ಜಾಲತಾಣದಲ್ಲಿ ವಿರೋಧ ವ್ಯಕ್ತಪಡಿಸಿದ್ದಾರೆ.
Also Read: ಬಸವಕಲ್ಯಾಣದ ಮರಾಠ ಮತದಾರರ ಓಲೈಕೆಗಾಗಿ ಪ್ರಾಧಿಕಾರ ರಚನೆ- ಸಿದ್ದರಾಮಯ್ಯ
ಆರ್ಥಿಕವಾಗಿ ಹಿಂದುಳಿದವರಿಗೆ ಉದ್ಯೋದಲ್ಲಿ ಅವಕಾಶ ಕೊಡುವ ವ್ಯವಸ್ಥೆ ಕಲ್ಪಿಸಬೇಕು. ಒಂದು ಜಾತಿಗೆ ನೀವು ಪ್ರಾಧಿಕಾರ ಮಾಡಿದರೆ ಇನ್ನೊಂದು ಜಾತಿಯವರಿಂದಲೂ ಇದೇ ಬೇಡಿಕೆ ಬರುತ್ತದೆ. ಸರ್ಕಾರದ ಈ ನಿರ್ಧಾರದಿಂದ ಕೂಡಲೇ ಹಿಂದೆ ಸರಿಯಲಿ ಎನ್ನುತ್ತಾರೆ ಇನ್ನು ಹಲವರು.
ಕರ್ನಾಟಕವೂ ಮಾರಕ ಕರೋನಾ ವೈರಸ್ ಮತ್ತು ಭೀಕರ ಪ್ರವಾಹದಿಂದ ತತ್ತರಿಸಿರುವಾಗ, ರಾಜ್ಯದ ಆರ್ಥಿಕತೆ ಕುಸಿಯುತ್ತಿರುವಾಗ ಸಿಎಂ ಬಿಎಸ್ ಯಡಿಯೂರಪ್ಪ ಸರ್ಕಾರ ತೆಗೆದುಕೊಂಡಿರುವ ಎಷ್ಟರ ಮಟ್ಟಿಗೆ ಸರಿ ಎಂಬ ಚರ್ಚೆಯೂ ಶುರುವಾಗಿದೆ. ಜಾತಿಗೊಂದು ಪ್ರಾಧಿಕಾರ ಮಾಡುತ್ತಾ ಹೋದರೆ, ಇದಕ್ಕೆ ಹಣ ಹೊಂದಿಸಲು ಕರೋನಾ ಬಿಕ್ಕಟ್ಟಿನ ಸಂದರ್ಭದಲ್ಲಿ ರಾಜ್ಯ ಸರ್ಕಾರ ಎಲ್ಲಿಗೆ ಹೋಗಬೇಕು ಎಂಬುದು ಕನ್ನಡಿಗರ ಪ್ರಶ್ನೆ.






