ಕೇರಳ ಪೊಲೀಸ್ ಕಾಯ್ದೆ 2011 ರ ತಿದ್ದುಪಡಿಯ ಬಗ್ಗೆ ಸಾಕಷ್ಟು ವಿರೋಧ ವ್ಯಕ್ತವಾದ ನಂತರ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಸೋಮವಾರ ರಾಜ್ಯ ಸರ್ಕಾರ ಹೊಸ ಕಾನೂನನ್ನು ಜಾರಿಗೆ ತರುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಕೇರಳ ವಿಧಾನಸಭೆಯಲ್ಲಿ ಶಾಸಕರೊಂದಿಗೆ ಸಮಾಲೋಚಿಸಿದ ನಂತರ ಈ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಹೇಳಿದ್ದಾರೆ. “ಈಗ ತಿದ್ದುಪಡಿಯನ್ನು ಜಾರಿಗೆ ತರಲು ಉದ್ದೇಶಿಸಿಲ್ಲ” ಎಂದು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.
Also Read: ಕೇರಳ: ವಿವಾದಾತ್ಮಕ ಪೊಲೀಸ್ ಕಾಯ್ದೆ ತಿದ್ದುಪಡಿ ಸುಗ್ರೀವಾಜ್ಞೆಗೆ ರಾಜ್ಯಪಾಲರ ಅಂಗೀಕಾರ
ಪೊಲೀಸ್ ಕಾಯ್ದೆ ತಿದ್ದುಪಡಿಯ ಘೋಷಣೆಯೊಂದಿಗೆ, ವಿವಿಧ ಕ್ಷೇತ್ರದ ತಜ್ಞರಿಂದ ವಿಭಿನ್ನ ಅಭಿಪ್ರಾಯಗಳು ಹುಟ್ಟಿಕೊಂಡಿದ್ದವು. ಎಲ್ಡಿಎಫ್ ಅನ್ನು ಬೆಂಬಲಿಸಿದ್ದವರು ಕೂಡಾ ಎಲ್ಡಿಎಫ್ ಸರ್ಕಾರದ ಈ ನಡೆಗೆ ಕಳವಳ ವ್ಯಕ್ತಪಡಿಸಿದ್ದರು.
ಈ ಹಿನ್ನೆಲೆಯಲ್ಲಿ, ಕಾನೂನನ್ನು ತಿದ್ದುಪಡಿ ಮಾಡುವ ಉದ್ದೇಶವನ್ನು ಹೊಂದಿಲ್ಲ, ಈ ಕುರಿತು ವಿಧಾನಸಭೆಯಲ್ಲಿ ವಿವರವಾದ ಚರ್ಚೆ ನಡೆಯಲಿದ್ದು, ಎಲ್ಲ ಪಕ್ಷಗಳ ಅಭಿಪ್ರಾಯಗಳನ್ನು ಆಲಿಸಿದ ನಂತರ ಈ ಕುರಿತು ಮುಂದಿನ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಕೇರಳ ಸಿಎಂ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.