ಕರ್ನಾಟಕ ಕರೋನಾ ಸಂಕಷ್ಟದ ಕಾಲದಲ್ಲಿದೆ. ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಕರೋನಾ ಸೋಂಕಿತರ ಸಂಖ್ಯೆ ಜನರಲ್ಲಿ ಭಯಭೀತಿ ಹುಟ್ಟಿಸುತ್ತಿದೆ. ಇದೀಗ ಜುಲೈ 30, 31ರಂದು ನಿಗದಿಯಾಗಿರುವ ಸಿಇಟಿ ಪರೀಕ್ಷೆ ನಡೆಯುತ್ತಾ ನಡೆಯಲ್ವಾ ಎನ್ನುವ ಗೊಂದಲದ ಪರಿಸ್ಥಿತಿ ಉದ್ಬವ ಆಗಿತ್ತು. ಈಗ ಎಲ್ಲಾ ಗೊಂದಲಗಳಿಗೆ ತೆರೆ ಎಳೆದಿರುವ ರಾಜ್ಯ ಹೈಕೋರ್ಟ್ ಸಿಇಟಿ ಪರೀಕ್ಷೆ ನಿಗದಿಯಂತೆ ನಡೆಯಲಿ ಎಂದು ಆದೇಶ ನೀಡಿದೆ.
ಕರೋನಾ ಸಂಕಷ್ಟದಲ್ಲಿ ಸಿಲುಕಿರುವ ಸಾವಿರಾರು ವಿದ್ಯಾರ್ಥಿಗಳು ಪರೀಕ್ಷೆ ಬರೆಯಬೇಕಿದೆ. ಈ ಸಮಯದಲ್ಲಿ ಕಂಟೈನ್ಮೆಂಟ್ ಝೋನ್, ಸೀಲ್ಡೌನ್ ಪ್ರದೇಶ ಎಂದು ವಿಂಗಡಣೆ ಮಾಡಲಾಗಿದೆ. ಇನ್ನೂ ಕೆಲವು ಕಡೆ ಸೋಂಕಿತ ವಿದ್ಯಾರ್ಥಿಗಳಾಗಿದ್ದಾರೆ, ಇನ್ನೂ ಕೆಲವರು ಹೋಂ ಕ್ವಾರಂಟೈನ್ನಲ್ಲಿದ್ದಾರೆ. ಈಗ ಪರೀಕ್ಷೆ ನಡೆಸುವುದು ಸೂಕ್ತವಲ್ಲ. ಸಿಇಟಿ ಪರೀಕ್ಷೆ ಮುಂದೂಡಲು ಸರ್ಕಾರಕ್ಕೆ ನಿರ್ದೇಶನ ನೀಡಬೇಕು ಎಂದು ಹೈಕೋರ್ಟ್ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆ ಮಾಡಲಾಗಿತ್ತು.
ಸರ್ಕಾರಕ್ಕೆ ಬುಧವಾರ ಮಧ್ಯಾಹ್ನ ಗಡುವು ನೀಡಿದ್ದ ಹೈಕೋರ್ಟ್..!
ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಎ.ಎಸ್. ಒಕಾ, ಕಂಟೇನ್ಮೆಂಟ್ ಝೋನ್ನಲ್ಲಿರುವ ಮಕ್ಕಳು ಹೇಗೆ ಪರೀಕ್ಷೆ ಬರೆಯುತ್ತಾರೆ ಎಂದು ಪ್ರಶ್ನೆ ಮಾಡಿ ಇದಕ್ಕೆ ಉತ್ತರ ತಿಳಿಸುವಂತೆ ಸರ್ಕಾರಕ್ಕೆ ಬುಧವಾರ ಮಧ್ಯಾಹ್ನದ ವರೆಗಿನ ಸಮಯ ನೀಡಿತ್ತು. ಕಂಟೈನ್ಮೆಂಟ್ ಝೋನ್ನಿಂದ ಹೊರಗೆ ಬರುವಂತಿಲ್ಲ. ಬೆಂಗಳೂರಿನಲ್ಲಿ 5 ಸಾವಿರಕ್ಕೂ ಹೆಚ್ಚು ಕಂಟೈನ್ಮೆಂಟ್ ಝೋನ್ಗಳಿವೆ. ಎಸ್ಎಸ್ಎಲ್ಸಿ/ಪಿಯುಸಿ ಪರೀಕ್ಷೆ ಬರೆಯದೆ ಇದ್ದರೆ ಪೂರಕ ಪರೀಕ್ಷೆಯಿತ್ತು. ಆದರೆ ಸಿಇಟಿಗೆ ಯಾವುದೇ ಪೂರಕ ಪರೀಕ್ಷೆಯಿಲ್ಲ. ಕಳೆದ ಎರಡು ವಾರದಿಂದ ಪ್ರತಿದಿನ 5 ಸಾವಿರ ಕರೋನಾ ಪ್ರಕರಣಗಳು ಪತ್ತೆಯಾಗುತ್ತಿವೆ. ಬೇರೆ ರಾಜ್ಯಗಳಿಂದಲೂ ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಾರೆ. ಈಗ ಪರೀಕ್ಷೆ ಬರೆಯುವ ಅವಕಾಶದಿಂದ ವಂಚಿತರಾಗುತ್ತಾರೆ ಎಂದು ಅಭಿಪ್ರಾಯಪಟ್ಟಿತ್ತು.
ಸಿಇಟಿ ಪರೀಕ್ಷೆ ಮುಂದೂಡುವಂತೆ ವಕೀಲರಾದ ಎಸ್.ಪಿ ಪ್ರದೀಪ್ ಕುಮಾರ್ ಹಾಗೂ ಎಸ್. ಹನುಮಂತೇಗೌಡ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಬಗ್ಗೆ ಸರ್ಕಾರದ ನಿರ್ಧಾರವೇನು ಎಂದು ಹೈಕೋರ್ಟ್ ಕೇಳಿತ್ತು. ಇದರ ಬೆನ್ನಲ್ಲೇ ಉನ್ನತ ಶಿಕ್ಷಣ ಸಚಿವ ಡಿಸಿಎಂ ಆಶ್ವತ್ಥ ನಾರಾಯಣ, ಉನ್ನತ ಮಟ್ಟದ ತುರ್ತು ಸಭೆಯನ್ನೂ ನಡೆಸಿದ್ದರು. ಸಭೆಯಲ್ಲಿ ಮುಂದಿನ ನಡೆಯ ಬಗ್ಗೆ ಸಮಾಲೋಚನೆ ನಡೆಸಲಾಗಿದೆ, ಪರೀಕ್ಷೆ ನಡೆಸಲು ಯಾವುದೇ ಸಮಸ್ಯೆ ಇಲ್ಲ ಎಂಬ ಅಭಿಪ್ರಾಯವನ್ನು ಉನ್ನತ ಶಿಕ್ಷಣ ಇಲಾಖೆಯ ಅಧಿಕಾರಿಗಳು ವ್ಯಕ್ತಪಡಿಸಿದ್ದರು. ಸಿಇಟಿ ಪರೀಕ್ಷೆಗೆ ಯಾವುದೇ ಸಮಸ್ಯೆ ಇಲ್ಲ ಎಂದು ಹೈಕೋರ್ಟ್ಗೆ ರಾಜ್ಯ ಸರ್ಕಾರ ತಿಳಿಸಿತ್ತು.

ಪ್ರತಿಧ್ವನಿಯನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ
ಡಿಸಿಎಂ ಅಶ್ವತ್ಥ ನಾರಾಯಣ್ ಅವರ ತುರ್ತು ಸಭೆಯಲ್ಲಿ ಜಿಲ್ಲಾಧಿಕಾರಿಗಳು, ಪೊಲೀಸ್ ವರಿಷ್ಠಾಧಿಕಾರಿಗಳು, ಸಾರಿಗೆ ಹಾಗೂ ಆರೋಗ್ಯ ಇಲಾಖೆ ಅಧಿಕಾರಿಗಳು ಭಾಗಿಯಾಗಿದ್ದರು. ಅಧಿಕಾರಿಗಳೊಂದಿಗೆ ವಿಡಿಯೋ ಸಂವಾದ ನಡೆಸಿದ ಡಿಸಿಎಂ ಅಶ್ವತ್ಥ ನಾರಾಯಣ ಎಲ್ಲರ ಅಭಿಪ್ರಾಯ ಸಂಗ್ರಹ ಮಾಡಿದ್ದಾರೆ. ಎಲ್ಲಾ ಜಿಲ್ಲೆ ಹಾಗೂ ಗಡಿನಾಡಿನಲ್ಲೂ ಪರೀಕ್ಷೆ ಸಿದ್ಧತೆ ಮಾಡಿಕೊಳ್ಳಲಾಗಿದೆ. ಎಸ್ಎಸ್ಎಲ್ಸಿ ಪರೀಕ್ಷೆಗೆ ಕೈಗೊಳ್ಳಲಾದ ರೀತಿಯಲ್ಲಿಯೇ ಮುನ್ನೆಚ್ಚರಿಕೆಯನ್ನೂ ವಹಿಸಲಾಗಿದೆ. ಆರೋಗ್ಯ, ಸಾರಿಗೆ, ಪೊಲೀಸ್ ಇಲಾಖೆ ಅಧಿಕಾರಿಗಳೆಲ್ಲಾ ಪರೀಕ್ಷೆ ನಡೆಸುವುದಕ್ಕೆ ಸಮಸ್ಯೆ ಇಲ್ಲ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಪರಿಷ್ಕೃತವಾಗಿ ಬಿಡುಗಡೆ ಆಗಿರುವ ಮಾರ್ಗಸೂಚಿ ಪ್ರಕಾರ ಸಿಇಟಿ ಪರೀಕ್ಷೆ ನಡೆಯಲಿದೆ.
ಕಂಟೈನ್ಮೆಂಟ್ ಝೋನ್ನಲ್ಲಿ ಇರುವ ಪರೀಕ್ಷಾರ್ಥಿ ಹಾಗೂ ಅವರ ಪೋಷಕರೊಬ್ಬರು ಹೊರಬರಬಹುದು. ಪಾಸಿಟಿವ್ ಬಂದಿರುವ ಆಭ್ಯರ್ಥಿಗಳಿಗೆ ಪ್ರತ್ಯೇಕ ಕೊಠಡಿ ವ್ಯವಸ್ಥೆ ಮಾಡಲಾಗಿದೆ. ರೋಗಲಕ್ಷಣವಿಲ್ಲದ ಮತ್ತು ಕೆಮ್ಮು, ಶೀತದ ಲಕ್ಷಣಗಳಿರುವ ವಿದ್ಯಾರ್ಥಿಗಳಿಗೆ ಪ್ರತ್ಯೇಕ ವ್ಯವಸ್ಥೆಯಿದೆ ಎಂದಿದ್ದಾರೆ. ಜಿಲ್ಲಾಧಿಕಾರಿ ಸೇರಿದಂತೆ ಇತರೆ ಅಧಿಕಾರಿಗಳಿಂದ ಪರೀಕ್ಷೆಗೆ ಸಮಸ್ಯೆ ಇಲ್ಲವೆಂಬ ಅಭಿಪ್ರಾಯ ಬಂದಿದೆ. ನ್ಯಾಯಾಲಯ ಉಲ್ಲೇಖಿಸಿದ ಅಂಶದ ದೃಷ್ಟಿಯಲ್ಲಿಟ್ಟುಕೊಂಡು ಅಭಿಪ್ರಾಯ ಸಂಗ್ರಹ ಮಾಡಲಾಗಿದೆ. ಒಂದು ಸಣ್ಣ ಸಮಸ್ಯೆಯೂ ಇಲ್ಲದೆ, ಸಿಇಟಿ ವಿದ್ಯಾರ್ಥಿಗಳಿಗಿಂತ ಕಿರಿಯ ವಯಸ್ಸಿನ ಎಸ್ಸೆಸ್ಸೆಲ್ಸಿ ಮಕ್ಕಳಿಗೇ ಯಶಸ್ವಿ ಪರೀಕ್ಷೆ ನಡೆಸಲಾಗಿದೆ. ಈ ರೀತಿಯ ಉದಾಹರಣೆ ನಮ್ಮ ಮುಂದೆಯೇ ಇದೆ.

ದೈಹಿಕ ಅಂತರ, ಕೊಠಡಿಗಳ ನಿರ್ವಹಣೆ, ಆಂಬ್ಯುಲೆನ್ಸ್, ಸಾರಿಗೆ ವ್ಯವಸ್ಥೆ ಕೂಡ ಮಾಡಲಾಗಿದೆ. ಪ್ರತಿ ವಿದ್ಯಾರ್ಥಿಯನ್ನು ಗಮನದಲ್ಲಿ ಇಟ್ಟುಕೊಂಡು ಕ್ರಮ ಕೈಗೊಳ್ಳಲಾಗಿದೆ, ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಇಂದು ನಡೆದ ವಿಚಾರಣೆಯಲ್ಲಿ ಈ ಎಲ್ಲಾ ವಿಚಾರಗಳನ್ನು ಹೈಕೋರ್ಟ್ಗೆ ಮನದಟ್ಟು ಮಾಡಿಕೊಡುವಲ್ಲಿ ಸರ್ಕಾರ ಯಶಸ್ವಿಯಾಗಿದೆ. ಪರೀಕ್ಷೆಗೆ ಹಾಜರಾಗುವ ಯಾವುದೇ ವಿದ್ಯಾರ್ಥಿಯನ್ನು ತಡೆಯದಂತೆ ಪೊಲೀಸ್ ಇಲಾಖೆಗೆ ಸೂಚನೆ ನೀಡುವಂತೆ ಹೈಕೋರ್ಟ್ ಆದೇಶ ನೀಡಿದೆ.
“ಪರೀಕ್ಷೆ ಬರೆಯಲು ಬಂದಂತಹ ಎಲ್ಲಾ ವಿದ್ಯಾರ್ಥಿಗಳಿಗೂ ಪರೀಕ್ಷೆ ಬರೆಯಲು ಅವಕಾಶ ನೀಡಬೇಕು. ಕೇಂದ್ರ ಗೃಹ ಇಲಾಖೆ ಹಾಗೂ ರಾಜ್ಯ ಸರ್ಕಾರ ಹೊರಡಿಸಿರುವಂತಹ ಕೋವಿಡ್ ನಿಯಮಗಳ ಪಾಲನೆ ಎಲ್ಲಾ ಹಂತಗಳಲ್ಲಿಯೂ ಆಗಬೇಕು,” ಎಂದು ಹೈಕೋರ್ಟ್ ತನ್ನ ಆದೇಶದಲ್ಲಿ ತಿಳಿಸಿದೆ.
ಒಟ್ಟಿನಲ್ಲಿ ರಾಜ್ಯದಲ್ಲಿ ಸಿಇಟಿ ಪರೀಕ್ಷೆಗಳು ನಡೆಯುವುದು ಖಚಿತವಾಗಿದೆ.






