ಕೇಂದ್ರ ನಡೆಸುತ್ತಿರುವ ಭಾಷಾ ತಾರತಮ್ಯದ ಕುರಿತು ಕರ್ನಾಟಕ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ವಿರೋಧ ವ್ಯಕ್ತಪಡಿಸಿದ್ದಾರೆ. ಹಿಂದಿ ರಾಜಕಾರಣ, ಹಿಂದಿ ವ್ಯಾಮೋಹ ಹೇಗೆ ದಕ್ಷಿಣ ಭಾರತೀಯರನ್ನು ತುಳಿಯುತ್ತದೆ ಎಂಬುದನ್ನು ತಮ್ಮದೇ ಉದಾಹರಣೆಯೊಂದಿಗೆ ವಿವರಿಸಿದ್ದಾರೆ.
ತಮಿಳುನಾಡಿನ ದ್ರಾವಿಡ ಮುನ್ನೇತ್ರ ಕಳಗಂ ಪಕ್ಷದ ಸಂಸದೆ ಕನ್ನಿಮೋಳಿ ಅವರಿಗೆ, ವಿಮಾನ ನಿಲ್ದಾಣದಲ್ಲಿ ಹಿಂದಿ ಮಾತನಾಡಲು ಬಾರದಿದ್ದ ಕಾರಣ CISF ಅಧಿಕಾರಿಯೊಬ್ಬರು ನೀವು ಭಾರತೀಯರೇ ಎಂದು ಪ್ರಶ್ನಿಸಿದ್ದಾರೆಂದು ಕನ್ನಮೋಳಿ ಅವರು ಟ್ವೀಟ್ ಮಾಡಿದ್ದರು. ʼಭಾರತೀಯರಾಗಲು ಹಿಂದಿ ಗೊತ್ತಿರಬೇಕೆʼ ಎಂಬರ್ಥದಲ್ಲಿ ಟ್ವೀಟ್ ಹಾಕಿರುವ ಕನ್ನಮೋಳಿಗೆ ಹಿಂದಿಯೇತರ ರಾಜ್ಯಗಳಿಂದ ಬೆಂಬಲ ಸಿಕ್ಕಿದೆ. ಹಿಂದಿ ಹೇರಿಕೆಯ ವಿರುದ್ಧ ಸಾಕಷ್ಟು ಚರ್ಚೆಗೂ ಕಾರಣವಾಗಿದೆ.
Today at the airport a CISF officer asked me if “I am an Indian” when I asked her to speak to me in tamil or English as I did not know Hindi. I would like to know from when being indian is equal to knowing Hindi.#hindiimposition
— Kanimozhi (கனிமொழி) (@KanimozhiDMK) August 9, 2020
ಇದೇ ವಿಚಾರಕ್ಕೆ ಕುರಿತಂತೆ ಟ್ವೀಟ್ ಮಾಡಿರುವ ಕುಮಾರಸ್ವಾಮಿ, ಭಾಷಾ ಕಾರಣಕ್ಕೆ ಸಂಸದೆ ಕನ್ನಿಮೋಳಿಗೆ ಆಗಿರುವ ಅಪಮಾನದ ವಿರುದ್ಧ ನನ್ನದೂ ಧ್ವನಿಯಿದೆ. ಹಿಂದಿ ವ್ಯಾಮೋಹ, ಹಿಂದಿ ರಾಜಕಾರಣ, ಹಿಂದಿ ಶ್ರೇಷ್ಠತೆ ವ್ಯಸನಗಳು ದಕ್ಷಿಣ ಭಾರತದ ನಾಯಕರ, ಜನರ ಅವಕಾಶಗಳನ್ನು ಕಸಿದ ವಿಚಾರ ಚರ್ಚೆಯಾಗಲು ಇದು ಸೂಕ್ತ ಸಮಯ ಎಂದು ಹೇಳಿದ್ದಾರೆ.
ಹಿಂದಿ ರಾಜಕಾರಣವು ದಕ್ಷಿಣ ಭಾರತದ ಹಲವು ನಾಯಕರ ಪ್ರಧಾನಿಯಾಗುವ ಅವಕಾಶ ಕಸಿದಿದೆ. ಅದರಲ್ಲಿ ಹೆಚ್ ಡಿ ದೇವೇಗೌಡ, ಕರುಣಾನಿಧಿ, ಕಾಮರಾಜರ ಹೆಸರುಗಳು ಪ್ರಧಾನ. ಈ ವ್ಯೂಹವನ್ನು ದೇವೇಗೌಡರು ಭೇದಿಸಿ ಅತ್ಯುನ್ನತ ಪಟ್ಟ ಅಲಂಕರಿಸಿದರಾದರೂ, ಭಾಷೆ ವಿಚಾರಕ್ಕೆ ಅವರನ್ನು ಮೂದಲಿಸಿದ, ಗೇಲಿ ಮಾಡಿದ, ಕನ್ನಡತನ ಪ್ರಶ್ನಿಸಿದ ಪ್ರಸಂಗಗಳು ಆಗಿ ಹೋಗಿವೆ.
ಭಾರತದ ಪ್ರಧಾನ ಮಂತ್ರಿಯಾಗಿದ್ದ ದೇವೇಗೌಡರಿಂದ ಅಂದು ಕೆಂಪು ಕೋಟೆಯಲ್ಲಿ ಹಿಂದಿಯಲ್ಲೇ ಭಾಷಣ ಮಾಡಿಸುವಲ್ಲಿ ‘ಹಿಂದಿ ರಾಜಕಾರಣ’ ಯಶಸ್ವಿಯಾಗಿತ್ತು. ಬಿಹಾರ ಮತ್ತು ಉತ್ತರ ಪ್ರದೇಶದ ಬಹುದೊಡ್ಡ ರೈತ ಸಮುದಾಯದ ದೃಷ್ಟಿಯಿಂದ ಅಂದು ದೇವೇಗೌಡರು ಹಿಂದಿಯಲ್ಲೇ ಮಾತನಾಡಿದರು. ಅಷ್ಟರ ಮಟ್ಟಿಗೆ ಈ ದೇಶದಲ್ಲಿ ಹಿಂದಿ ರಾಜಕಾರಣ ಕೆಲಸ ಮಾಡುತ್ತದೆ.
ಇಂಥದ್ದೇ ಅನುಭವ ನನಗೂ ಆಗಿವೆ. ನಾನೂ 2 ಬಾರಿ ಸಂಸದನಾಗಿದ್ದವನು. ಸಂಸತ್ನಲ್ಲಿ ಕನ್ನಡದಲ್ಲಿ ಮಾಡಲಾಗುವ ಭಾಷಣಗಳ ಬಗ್ಗೆ ಆಳುವ ವರ್ಗ ದಿವ್ಯ ನಿರ್ಲಕ್ಷ್ಯ ತೋರುತ್ತದೆ. ಅಲ್ಲದೆ, ಹಿಂದಿ ವ್ಯಾಮೋಹಿ ರಾಜಕಾರಣಿಗಳ ವರಸೆಗಳನ್ನು ಹತ್ತಿರದಿಂದ ನಾನು ಕಂಡಿದ್ದೇನೆ. ಹಿಂದಿಯೇತರ ರಾಜ್ಯಗಳ ರಾಜಕಾರಣಿಗಳೆಂದರೆ ಬಹುತೇಕರಿಗೆ ಅಲ್ಲಿ ಅಪತ್ಯವೇ ಸರಿ.
ರಾಜಕಾರಣ ಹೊರತುಪಡಿಸಿ ಔದ್ಯೋಗಿಕ ಕ್ಷೇತ್ರಕ್ಕೆ ಬಂದರೆ, ಕೇಂದ್ರ ಸರ್ಕಾರದ ಕೆಲ ಹುದ್ದೆಗಳ ಪರೀಕ್ಷೆಗಳನ್ನು ಇಂಗ್ಲಿಷ್–ಹಿಂದಿಯಲ್ಲೇ ಬರೆಯಬೇಕಿದೆ. ಅದರಲ್ಲಿ #IBPSmosa ಕೂಡ ಒಂದು. ಈ ಬಾರಿಯ ಅಧಿಸೂಚನೆಯಲ್ಲಿ ಕನ್ನಡಕ್ಕೆ ಸ್ಥಾನವೇ ಇಲ್ಲ. ಹೀಗಾಗಿ ಕನ್ನಡದ ಉದ್ಯೋಗಾಕಾಂಕ್ಷಿಗಳು ಅವಕಾಶಗಳಿಂದ ವಂಚಿತರಾಗುತ್ತಿದ್ದಾರೆ. ಇದು ನಿಲ್ಲಬೇಕು.
ಅಧಿಕೃತ ಭಾಷೆಗಳಲ್ಲಿ ಹಿಂದಿಯೂ ಒಂದು ಎಂದು ಕೇಂದ್ರ ಸರ್ಕಾರ ಬಾಯಿ ಮಾತಿಗಷ್ಟೇ ಹೇಳುತ್ತದೆ. ಆದರೆ, ಹಿಂದಿ ಅಭಿವೃದ್ಧಿಗಾಗಿ ದೇಶ, ವಿದೇಶದಲ್ಲಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ಕೇಂದ್ರವು ಕೋಟ್ಯಂತರ ಮೊತ್ತ ವಿನಿಯೋಗಿಸುತ್ತದೆ. ಇದು ರಹಸ್ಯ ಕಾರ್ಯಸೂಚಿಗಳಲ್ಲೊಂದು. ಪ್ರಾಮಾಣಿಕ ಭಾಷಾಭಿಮಾನದಿಂದ ಮಾತ್ರ ಇವುಗಳನ್ನು ಹಿಮ್ಮೆಟ್ಟಿಸಲು ಸಾಧ್ಯ ಎಂದು ಕುಮಾರಸ್ವಾಮಿ ಹೇಳಿದ್ದಾರೆ.
ಭಾಷೆ ಕಾರಣಕ್ಕೆ @arivalayam ಸಂಸದೆ @KanimozhiDMK ಅವರನ್ನು ‘ನೀವು ಭಾರತೀಯರೇ?’ ಎಂದು ಪ್ರಶ್ನಿಸಿದ ಘಟನೆ ನಡೆದಿದೆ. ಸೋದರಿ ಕನಿಮೋಳಿಗೆ ಆದ ಅಪಮಾನದ ವಿರುದ್ಧ ನನ್ನದೂ ಧ್ವನಿ ಇದೆ. ಇದೇ ಹೊತ್ತಲ್ಲೇ, ಹಿಂದಿ ವ್ಯಾಮೋಹ, ಹಿಂದಿ ರಾಜಕಾರಣ, ಹಿಂದಿ ಶ್ರೇಷ್ಠತೆ ವ್ಯಸನ ದಕ್ಷಿಣ ಭಾರತದ ನಾಯಕರ, ಜನರ ಅವಕಾಶಗಳನ್ನು ಕಸಿದ ವಿಚಾರ ಚರ್ಚಾರ್ಹ.
1/7— H D Kumaraswamy (@hd_kumaraswamy) August 10, 2020