ರಾಜ್ಯದಲ್ಲಿನ ಬಿಜೆಪಿ ಆಡಳಿತದಲ್ಲಿ ಸುಮಾರು ೧೦೦ ಹಗರಣಗಳು ನಡೆದಿವೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಗಂಭೀರ ಆರೋಪ ಮಾಡಿದ್ದಾರೆ.
ವಿಧಾನಸಭೆ ಅಧಿವೇಶನ ಅನಿರ್ದಿಷ್ಟಾವಧಿಗೆ ಮುಂದೂಡಿಕೆ ನಂತರ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಶೇ.೪೦ರಷ್ಟು ಭ್ರಷ್ಟಾಚಾರ ಕುರಿತು ಚರ್ಚೆ ನಡೆಸಲು ಅವಕಾಶ ಕೋರಿ ೪ ದಿನಗಳ ಹಿಂದೆಯೇ ಮನವಿ ಮಾಡಿದ್ದರೂ ಅವಕಾಶ ನೀಡಲಿಲ್ಲ ಎಂದು ಆರೋಪಿಸಿದರು.
ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ರಾಜ್ಯದಲ್ಲಿ ಶೇ.೪೦ಷ್ಟು ಕಮಿಷನ್ ಭ್ರಷ್ಟಾಚಾರ ನಡೆಯುತ್ತಿದೆ ಎಂದು ಪ್ರಧಾನಿ, ರಾಜ್ಯಪಾಲರು ಹಾಗೂ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿರುವುದು ರಾಜ್ಯದ ಇತಿಹಾಸದಲ್ಲೇ ಮೊದಲು. ಅವರು ಆರೋಗ್ಯ, ಶಿಕ್ಷಣ, ಲೋಕೋಪಯೋಗಿ, ನೀರಾವರಿ, ಸಣ್ಣ ನೀರಾವರಿ, ಗ್ರಾಮೀಣಾಭಿವೃದ್ಧಿ ನಗರಾಭಿವೃದ್ಧಿ ಇಲಾಖೆಗಳಲ್ಲಿ ವ್ಯಾಪಕ ಲಂಚ ನಡೆಯುತ್ತಿದೆ ಎಂದು ಆರೋಪಿಸಿದ್ದೂ ಅಲ್ಲದೇ ಸಚಿವರ ಹೆಸರನ್ನು ಕೂಡ ಪ್ರಸ್ತಾಪಿಸಿದ್ದಾರೆ. ಆದರೆ ಲಜ್ಜೆಗೆಟ್ಟ ಸರಕಾರ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಕಿಡಿಕಾರಿದರು.
ನಮ್ಮ ಸರಕಾರದಲ್ಲಿ ಹಗರಣ ಆಗಿದೆ ಎಂದು ಕಟೀಲ್ ಆರೋಪಿಸಿದ್ದಾರೆ. ಆದರೆ ಈ ಮೂರು ವರ್ಷ ಯಾಕೆ ಪ್ರಸ್ತಾಪ ಮಾಡಲಿಲ್ಲ? ಅಲ್ಲದೇ ಅರ್ಕಾವತಿ ಬಡಾವಣೆ ಯೋಜನೆಯ ಡಿನೋಟಿಫಿಕೇಶನ್ ನನ್ನ ಅವಧಿಯಲ್ಲಿ ಆಗಿದ್ದು ಅಲ್ಲ. ರೀಡೂ ಮಾಡಿದ್ದು ಹೈಕೋರ್ಟ್ ಸೂಚನೆ ಮೇರೆಗೆ ಹೊರತು ಸರಕಾರದ ಆದೇಶವಲ್ಲ ಎಂದು ಸಿದ್ದರಾಮಯ್ಯ ಸಮರ್ಥಿಸಿಕೊಂಡರು.