ಬೆಂಗಳೂರು : ಏ.16: ಸತ್ಯವನ್ನು ಉಳಿಸಲು, ಸತ್ಯಕ್ಕೆ ಸಾವಿಲ್ಲ, ಸುಳ್ಳಿಗೆ ಬದುಕಿಲ್ಲ ಎಂಬ ಸಂದೇಶ ಸಾರಲು ನಮ್ಮ ನಾಯಕರು ಇಲ್ಲಿ ಬಂದು ಹೋರಾಟ ಮಾಡುತ್ತಿದ್ದಾರೆ. ರಾಹುಲ್ ಗಾಂಧಿ ಅವರು ಸತ್ಯ ನುಡಿದ ಜಾಗದಲ್ಲಿ ಈ ಸಮಾವೇಶ ಮಾಡಲಾಗುತ್ತಿದೆ. ನಾವೆಲ್ಲರೂ ಈ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಗೆಲ್ಲಿಸಿ ರಾಹುಲ್ ಗಾಂಧಿ ಅವರಿಗೆ ಶಕ್ತಿ ತುಂಬಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಕೋಲಾರದಲ್ಲಿ ನಡೆದ ಜೈ ಭಾರತ್ ಸಮಾವೇಶದಲ್ಲಿ ಮಾತನಾಡಿದ ಡಿ.ಕೆ. ಶಿವಕುಮಾರ್, ಮೇ 10ನೇ ತಾರಿಖು ರಾಜ್ಯದಲ್ಲಿ ಕೇವಲ ಮತದಾನದ ದಿನ ಮಾತ್ರವಲ್ಲ. ರಾಜ್ಯದಲ್ಲಿ ಬದಲಾವಣೆ ತರುವ ದಿನ. ಭ್ರಷ್ಟ ಬಿಜೆಪಿ ಸರ್ಕಾರ ಬಡಿದೋಡಿಸುವ ದಿನ, ನಿಮ್ಮ ಭವಿಷ್ಯ ಬರೆಯುವ ದಿನ, ಜನರ ಸಮಸ್ಯೆಗಳಿಗೆ ಮುಕ್ತಿ ನೀಡುವ ದಿನ, ರಾಜ್ಯವನ್ನು ಅಭಿವೃದ್ಧಿ ಹಾದಿಯಲ್ಲಿ ಮುನ್ನಡೆಸುವ ದಿನ, ಕರ್ನಾಟಕ ರಾಜ್ಯದ ಸ್ವಾಭಿಮಾನ ಉಳಿಸುವ ದಿನ. ಗೃಹಜ್ಯೋತಿ, ಗೃಹಲಕ್ಷ್ಮಿ ಉಳಿಸುವ ದಿನ, ಬಡವರಿಗೆ ಅನ್ನಭಾಗ್ಯ ನೀಡುವ ದಿನ, ನಿರುದ್ಯೋಗ ಯುವಕರಿಗೆ ನಿರುದ್ಯೋಗ ಭತ್ಯೆ ನೀಡುವ ದಿನ.

ಕಮಲ ಕೆರೆಯಲ್ಲಿದ್ದರೆ ಚೆಂದ, ತೆನೆ ಹೊಲದಲ್ಲಿದ್ದರೆ, ಚೆಂದ, ದಾನ ಧರ್ಮ ಮಾಡುವ ಕೈ ಅಧಿಕಾರದಲ್ಲಿದ್ದರೆ ಚೆಂದ. ಅದೇ ರೀತಿ ಇಂದು ಕಾಂಗ್ರೆಸ್ ಪಕ್ಷ ಜನರಿಗೆ ಬೆಲೆ ಏರಿಕೆಯಿಂದ ಮುಕ್ತಿ ನೀಡಲು ನಾಲ್ಕು ಗ್ಯಾರಂಟಿ ಯೋಜನೆ ನೀಡಿದೆ. ಗೃಹಲಕ್ಷ್ಮಿ ಹಾಗೂ ಗೃಹಜ್ಯೋತಿ ಯೋಜನೆ ಮೂಲಕ ಪ್ರತಿ ಕುಟುಂಬಕ್ಕೆ ವರ್ಷಕ್ಕೆ 42 ಸಾವಿರ ಹಣ ಉಳಿತಾಯ ಮಾಡಬಹುದಾಗಿದೆ. ಈ ಯೋಜನೆಯ ಗ್ಯಾರಂಟಿ ಕಾರ್ಡ್ ಗೆ ನಾನು ಸಿದ್ದರಾಮಯ್ಯ ಅವರು ಸಹಿ ಹಾಕಿದ್ದು, ಅಧಿಕಾರಕ್ಕೆ ಬಂದ ಮೊದಲ ದಿನ ನಾವು ಈ ಯೋಜನೆ ಜಾರಿ ಮಾಡುತ್ತೇವೆ.
ರಾಜ್ಯದಲ್ಲಿ ಬಿಜೆಪಿ ಸ್ಥಿತಿ ಏನಾಗುತ್ತಿದೆ ಎಂದು ನೀವು ನೋಡುತ್ತಿದ್ದೀರ. 47 ಜನ ಬಿಜೆಪಿ ನಾಯಕರು ಪಕ್ಷ ತೊರೆದು ಕಾಂಗ್ರೆಸ್ ಪಕ್ಷದ ಕಡೆ ಮುಖ ಮಾಡಿದ್ದಾರೆ. ಯಾರೆಲ್ಲಾ ಪಕ್ಷ ಸೇರುತ್ತಾರೆ ಎಂದು ಮುಂದೆ ಮಾತನಾಡುತ್ತೇನೆ.