ಬೆಂಗಳೂರು: ಸಿಎಂ ಸಿದ್ದರಾಮಯ್ಯ(Siddaramaiah) ಸೇರಿದಂತೆ ಕಾಂಗ್ರೆಸ್ ಪಕ್ಷದ 140 ಶಾಸಕರೂ ನನ್ನ ಬೆಂಬಲಕ್ಕೆ ಇದ್ದಾರೆ. ನಮ್ಮ ನಡುವೆ ಏನು ಚರ್ಚೆಯಾಗಿದೆ ಎಂದು ನಮಗೆ ಗೊತ್ತು, ಇದನ್ನು ಸಾರ್ವಜನಿಕವಾಗಿ ಚರ್ಚೆ ಮಾಡುವುದಿಲ್ಲ ಎಂದು ಡಿಸಿಎಂ ಡಿ.ಕೆ ಶಿವಕುಮಾರ್(DCM D.K Shivakumar) ಹೇಳಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 140 ಶಾಸಕರು ಕೂಡ ನನ್ನ ಬೆಂಬಲಿಗರೇ. ಸಿಎಂ ಸಿದ್ದರಾಮಯ್ಯ ಅವರು ಕೂಡ ನನಗೆ ಬೆಂಬಲವಾಗಿದ್ದಾರೆ. ನಾನು ಹಾಗೂ ಸಿಎಂ ಅವರು ಏನು ಮಾತನಾಡಿದ್ದೇವೆ ಎಂದು ನಿಮಗೆ ಗೊತ್ತಿದೆಯಾ? ರಾಹುಲ್ ಗಾಂಧಿ ಸಮ್ಮುಖದಲ್ಲಿ ನಾವು ಏನು ಮಾತನಾಡಿಕೊಂಡಿದ್ದೇವೆ, ಹೈಕಮಾಂಡ್ ಸಮ್ಮುಖದಲ್ಲಿ ಏನು ಮಾತನಾಡಿದ್ದೇವೆ, ಎಲ್ಲ ಕೂತು ಏನು ತೀರ್ಮಾನ ಮಾಡಿದ್ದೇವೆ ಎಂದು ನಮಗೆ ಗೊತ್ತಿದೆ. ಈ ವಿಚಾರವನ್ನು ನಿಮ್ಮ ಮುಂದೆ ಬಹಿರಂಗವಾಗಿ ಚರ್ಚೆ ಮಾಡಲು ಸಾಧ್ಯವೇ? ಕಾಲವೇ ಎಲ್ಲದಕ್ಕೂ ಉತ್ತರ ನೀಡಲಿದೆ ಎಂದರು.

ರಾಹುಲ್ ಗಾಂಧಿ ಭೇಟಿ ಬಗ್ಗೆ ಮಾತನಾಡಿದ ಅವರು, ನಾವು ದೆಹಲಿಗೆ ಹೋಗುವುದೇ ರಾಜಕೀಯ, ಪಕ್ಷ ಹಾಗೂ ಸರ್ಕಾರದ ಕೆಲಸಗಳಿಗೆ. ನಾನು ನಮ್ಮ ಪಕ್ಷದ ನಾಯಕರ ಜೊತೆ ಕರ್ನಾಟಕ ಹಾಗೂ ಅಸ್ಸಾಂ ರಾಜ್ಯಗಳು ಸೇರಿದಂತೆ ಅನೇಕ ರಾಜಕೀಯದ ಬಗ್ಗೆ ಚರ್ಚೆ ಮಾಡಿದೆ. ಮಾಧ್ಯಮಗಳು ಅನಗತ್ಯವಾಗಿ ರಾಹುಲ್ ಗಾಂಧಿ ಭೇಟಿಯಾಗಿಲ್ಲ ಎಂದು ಬರೆದಿದ್ದೀರಿ. ಒಂದು ದಿನ ನಾವು ಜೊತೆಯಲ್ಲಿ ಕೂತು ಚರ್ಚೆ ಮಾಡಿರುವ ಫೋಟೋ ವರದಿ ಮಾಡಿದ್ದೀರಿ, ಮರುದಿನ ಭೇಟಿಯೇ ಆಗಿಲ್ಲ ಎಂದು ಹೇಳುತ್ತಿದ್ದೀರಿ. ಈ ವಿಚಾರದಲ್ಲಿ ಕಾಲ ಉತ್ತರ ನೀಡಲಿದೆ ಎಂದು ಹೇಳಿದ್ದೇನೆ. ಇದರ ಹೊರತಾಗಿ ನಾನು ಬೇರೆ ವಿಚಾರ ಚರ್ಚೆ ಮಾಡುವುದಿಲ್ಲ ಎಂದು ತಿಳಿಸಿದರು.

ನಮ್ಮಲ್ಲಿ ನಾಯಕತ್ವ ವಿಚಾರದಲ್ಲಿ ಯಾವುದೇ ಗೊಂದಲಗಳಿಲ್ಲ. ನೀವುಗಳು ಗೊಂದಲ ಸೃಷ್ಟಿಸುತ್ತಿದ್ದೀರಿ. ನಾವು ಈ ವಿಚಾರವಾಗಿ ಚರ್ಚೆ ಮಾಡಿದ್ದು, ಹೈಕಮಾಂಡ್ ಅಂತಿಮ ತೀರ್ಮಾನ ಮಾಡಲಿದೆ. ನಾವೆಲ್ಲರೂ ಆ ತೀರ್ಮಾನಕ್ಕೆ ಬದ್ಧರಾಗಿದ್ದೇವೆ. ಈ ಬಗ್ಗೆ ನಾನು ಹಾಗೂ ಸಿಎಂ ಅನೇಕ ಬಾರಿ ಸ್ಪಷ್ಟಪಡಿಸಿದ್ದೇವೆ. ಹೀಗಾಗಿ ಈ ವಿಚಾರದಲ್ಲಿ ಗೊಂದಲ ಸೃಷ್ಟಿಸುವುದು ಬೇಡ. ರಾಹುಲ್ ಗಾಂಧಿ ಅವರ ಸಮಯಕ್ಕಾಗಿ ಡಿ.ಕೆ. ಕಾಯುತ್ತಿದ್ದಾರೆ, ರಾಹುಲ್ ಗಾಂಧಿ ಸಮಯ ನೀಡುತ್ತಿಲ್ಲ ಎಂದೆಲ್ಲಾ ವರದಿ ಮಾಡುತ್ತಿದ್ದೀರಿ.
ಇದನ್ನೂ ಓದಿ: ಅನ್ಯಾಯದ ವಿರುದ್ಧ ಹೋರಾಟವೇ ಅಪರಾಧವಾಯಿತೇ? ಯಾದಗಿರಿಯಲ್ಲಿ ಕ್ರೀಡಾಪಟುಗಳ ವಿರುದ್ಧ FIR
ನಾನು ರಾಹುಲ್ ಗಾಂಧಿ ಅವರ ಜೊತೆ ಸಭೆಯಲ್ಲಿ ಭಾಗವಹಿಸಿರುವ ಫೋಟೋವನ್ನು ನೀವೇ ಪ್ರಸಾರ ಮಾಡಿದ್ದೀರಿ. ಇಷ್ಟಾದರೂ ಮಾಧ್ಯಮಗಳು ಊಹಾಪೋಹಕ್ಕೆ ಆಸ್ಪದ ನೀಡುತ್ತಿರುವುದೇಕೆ? ಇದರ ಅಗತ್ಯವಿಲ್ಲ. ಕಾಂಗ್ರೆಸ್ ಒಗ್ಗಟ್ಟಾಗಿದೆ. ಹೈಕಮಾಂಡ್ ಸೂಕ್ತ ಸಂದರ್ಭದಲ್ಲಿ ನಿರ್ಧಾರ ಕೈಗೊಳ್ಳಲಿದೆ. ಸಿದ್ದರಾಮಯ್ಯ ಅವರು ಕೂಡ ಪಕ್ಷದ ಹೈಕಮಾಂಡ್ ತೀರ್ಮಾನಕ್ಕೆ ಬದ್ಧರಿರುವುದಾಗಿ ಸ್ಪಷ್ಟಪಡಿಸಿದ್ದಾರೆ. ನಾನೂ ಅದನ್ನೇ ಹೇಳಿದ್ದೇನೆ. ನಮ್ಮ ರಾಜ್ಯದವರೇ ಆದ ಮಲ್ಲಿಕಾರ್ಜುನ ಖರ್ಗೆ ಅವರು ಎಐಸಿಸಿ ಅಧ್ಯಕ್ಷರಾಗಿದ್ದು, ಅವರು, ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಅವರ ನಿರ್ದೇಶನದಂತೆ ನಾವು ಸಾಗುತ್ತೇವೆ ಎಂದರು.

ಇನ್ನು ನನ್ನ ವಿಚಾರಲ್ಲಿ ಪಕ್ಷ ಏನು ಹೇಳುತ್ತದೆಯೋ ಅದನ್ನು ಕೇಳುತ್ತೇವೆ ಎಂದು ನಾನು ಹಾಗೂ ಸಿಎಂ ಒಮ್ಮತದ ತೀರ್ಮಾನಕ್ಕೆ ಬಂದಿದ್ದೇವೆ. ಶಾಸಕರಿಗೆ ಆಸೆ ಇರುತ್ತದೆ. ಅದರಲ್ಲಿ ತಪ್ಪೇನಿರುತ್ತದೆ. ಅದನ್ನು ಸರಿಯಲ್ಲ ಎಂದು ಹೇಳಲು ಸಾಧ್ಯವೇ? ನಾವು ಅವರ ಕಿವಿಯಲ್ಲಿ ಏನೋ ಹೇಳಿರುತ್ತೇವೆ. ಅವರು ಖುಷಿಯಿಂದ ಕಾಯುತ್ತಿರುತ್ತಾರೆ. ಪಕ್ಷಕ್ಕಾಗಿ ನಾನೊಬ್ಬನೇ ಕಷ್ಟಪಟ್ಟಿಲ್ಲ. ಎಲ್ಲರೂ ಕಷ್ಟಪಟ್ಟಿದ್ದಾರೆ. 224 ಕ್ಷೇತ್ರಗಳಲ್ಲಿ ಕಾರ್ಯಕರ್ತರು ಹಗಲು ರಾತ್ರಿ ದುಡಿದಿದ್ದಾರೆ. ಕೋವಿಡ್ ಸಂದರ್ಭದಲ್ಲಿ ಕಾರ್ಯಕರ್ತರು ದುಡಿದಿರುವುದನ್ನು ನಾವು ಸದಾ ಸ್ಮರಿಸಬೇಕು. ಅದನ್ನು ನೆನೆಸಿಕೊಂಡರೆ ಭಯವಾಗುತ್ತದೆ. ಅವರು ನಮಗೆ ಪ್ರೀತಿ ತೋರಿಸಿದ್ದಾರೆ. ಶಕ್ತಿ ತುಂಬಿದ್ದಾರೆ. ನನ್ನ ಪರವಾಗಿ ಜನ, ಮಾಧ್ಯಮಗಳು, ಬಿಜೆಪಿ, ದಳದವರು ಪ್ರಾರ್ಥಿಸಿ, ಒಳ್ಳೆಯದನ್ನು ಬಯಸುತ್ತಿದ್ದಾರೆ. ಕೆಲವರು ಟೀಕೆಯನ್ನು ಮಾಡುತ್ತಿದ್ದಾರೆ ಎಂದರು.





