ಬಿಬಿಎಂಪಿಯಲ್ಲಿ ಬಿಜೆಪಿ 160ಕ್ಕೂ ಹೆಚ್ಚು ಸ್ಥಾನ ಗೆಲ್ಲಬೇಕೆಂಬ ಕುರಿತು ಇಂದಿನ ಸಭೆಯಲ್ಲಿ ಚರ್ಚೆ ನಡೆದಿದೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಅಶ್ವತ್ಥನಾರಾಯಣ್ ಅವರು ತಿಳಿಸಿದರು.
ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಇವತ್ತು ಬಿಜೆಪಿಯ ಬೆಂಗಳೂರು ಉತ್ತರ, ದಕ್ಷಿಣ ಮತ್ತು ಬೆಂಗಳೂರು ಕೇಂದ್ರದ ಎಲ್ಲ ಜಿಲ್ಲಾ ಪದಾಧಿಕಾರಿಗಳು, ಮಂಡಲ ಪದಾಧಿಕಾರಿಗಳು ಹಾಗೂ ಬೆಂಗಳೂರು ಮಹಾನಗರ ವ್ಯಾಪ್ತಿಯ ರಾಜ್ಯ ಪದಾಧಿಕಾರಿಗಳ ಪರಿಚಯಾತ್ಮಕ ಸಭೆ ನಡೆಸಲಾಗಿದೆ. ನೂತನ ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿ ರಾಜೇಶ್ ಜಿ.ವಿ. ಅವರ ಪರಿಚಯ ಕಾರ್ಯವನ್ನು ನೆರವೇರಿಸಲಾಗಿದೆ ಎಂದು ವಿವರ ನೀಡಿದರು.
ಬಿಬಿಎಂಪಿ ಚುನಾವಣೆ, ಸರಕಾರದಿಂದ ಪ್ರಾಧಿಕಾರಕ್ಕೆ ನೇಮಕಾತಿ ವಿಚಾರವಾಗಿ ಕಾರ್ಯಕರ್ತರು ಉಲ್ಲೇಖ ಮಾಡಿದ್ದು, ಸೂಕ್ತ ಸಂದರ್ಭದಲ್ಲಿ ಸೂಕ್ತ ತೀರ್ಮಾನವನ್ನು ಸರಕಾರ ಮತ್ತು ಪಕ್ಷ ತೆಗೆದುಕೊಳ್ಳಲಿದೆ ಎಂದು ರಾಜೇಶ್ ಜಿ.ವಿ. ಅವರು ತಿಳಿಸಿದ್ದಾಗಿ ಹೇಳಿದರು.

ಇದಲ್ಲದೆ, ಸೆ.8ರಂದು ನಡೆಯುವ ಬಸವರಾಜ ಬೊಮ್ಮಾಯಿ ನೇತೃತ್ವದ ಸರಕಾರದ ಒಂದು ವರ್ಷದ ಸಾಧನೆ ಮತ್ತು ಬಿಜೆಪಿಯ 3 ವರ್ಷದ ಸಾಧನೆ ಸಂಬಂಧ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ನಾಳೆ ದೊಡ್ಡಬಳ್ಳಾಪುರದಲ್ಲಿ ಕರೆದ ಸಭೆಯ ಕುರಿತು ಚರ್ಚಿಸಲಾಗಿದೆ. ಸರಕಾರದ ಸಾಧನೆ, ಅಭಿವೃದ್ಧಿ ಮತ್ತು ಸಂಘಟನಾತ್ಮಕವಾಗಿ ಬಿಬಿಎಂಪಿ ಚುನಾವಣೆಯನ್ನು ಎದುರಿಸಲು ನಿರ್ಧರಿಸಲಾಗಿದೆ. ಕಾಂಗ್ರೆಸ್ನ ಜನವಿರೋಧಿ ನೀತಿಯಿಂದ ಅಭಿವೃದ್ಧಿ ಕುಂಠಿತವಾಗಿದೆ ಎಂದು ತಿಳಿಸಲಾಗುವುದು ಎಂದು ವಿವರಿಸಿದರು.
ಸೆ. 11ರಂದು ಪಕ್ಷದ ರಾಜ್ಯ ಕಾರ್ಯಕಾರಿಣಿಯು ಬೆಂಗಳೂರಿನ ಪ್ಯಾಲೇಸ್ ಗ್ರೌಂಡಿನಲ್ಲಿ ನಡೆಯಲಿದೆ ಎಂದೂ ಅವರು ತಿಳಿಸಿದರು.