ಬೆಂಗಳೂರು: ಯಲಹಂಕದ ಕೋಗಿಲು ಲೇಔಟ್ನಲ್ಲಿ ಅಕ್ರಮ ಶೆಡ್ ತೆರವು ಬಳಿಕ ನಿರಾಶ್ರಿತರಿಗೆ ಮನೆ ನೀಡುವ ನಿರ್ಧಾರ ವಿವಾದಕ್ಕೀಡಾಗಿದೆ. ರಾಜೀವ್ ಗಾಂಧಿ ವಸತಿ ಯೋಜನೆಯಡಿ 167 ಫ್ಲಾಟ್ಗಳಿಗೆ ಸೂಚಿಸಿದ್ದು, 250ಕ್ಕೂ ಹೆಚ್ಚು ಅರ್ಜಿಗಳು ಬಂದಿವೆ. ಒಂದೇ ಮನೆ ವಿಳಾಸಕ್ಕೆ ಹಲವು ಅರ್ಜಿಗಳು, ನಿವಾಸಿಗಳಲ್ಲದವರೂ ಅರ್ಜಿ ಸಲ್ಲಿಸಿದ್ದು ಅಧಿಕಾರಿಗಳಿಗೆ ತಲೆನೋವಾಗಿದೆ.

ಬೆಂಗಳೂರಿನ ಕೋಗಿಲು ಬಡಾವಣೆಯಲ್ಲಿ ಅಕ್ರಮವಾಗಿ ನಿರ್ಮಿಸಿದ್ದ ಶೆಡ್, ಮನೆಗಳ ತೆರವು ವಿಚಾರ ವಿವಾದಕ್ಕೀಡಾಗಿತ್ತು. ನಿರಾಶ್ರಿತರಿಗೆ ಮನೆ ನೀಡುವುದಾಗಿ ಕಾಂಗ್ರೆಸ್ ಸರ್ಕಾರ ಘೋಷಣೆ ಮಾಡಿದ್ದೂ ಸಹ ಚರ್ಚೆಗೆ ಗ್ರಾಸವಾಗಿದೆ. ಸರ್ಕಾರದ ಈ ನಡೆಗೆ ವ್ಯಾಪಕ ಆಕ್ಷೇಪವೂ ವ್ಯಕ್ತವಾಗಿದೆ. ಕೋಗಿಲು ಬಡಾವಣೆಯಲ್ಲಿ ಡೆಮಾಲಿಷ್ ಮಾಡಲಾದ ಮನೆಗಳ ಲೆಕ್ಕಾಚಾರದ ಆಧಾರದಲ್ಲಿ, ಸರ್ಕಾರ ರಾಜೀವ್ ಗಾಂಧಿ ವಸತಿ ಯೋಜನೆ ಅಡಿ 167 ಫ್ಲಾಟ್ಗಳನ್ನು ನೀಡುವಂತೆ ಸಿಎಂ ಸಿದ್ದರಾಮಯ್ಯ ಅಧಿಕಾರಿಗಳಿಗೆ ಸೂಚಿಸಿದ್ದರು.

ಆದರೆ, ಇದೀಗ ಮನೆಗಳಿಗಾಗಿ 25೦ಕ್ಕೂ ಹೆಚ್ಚು ಅರ್ಜಿಗಳು ಸಲ್ಲಿಕೆಯಾಗಿವೆ ಎಂದು ಮೂಲಗಳು ತಿಳಿಸಿವೆ. ಡೆಮಾಲಿಷನ್ ಆಗಿರುವ ಒಂದೇ ಮನೆಯ ವಿಳಾಸದಿಂದ ಇಬ್ಬರು, ಮೂವರು ಮನೆಗಾಗಿ ಅರ್ಜಿ ಸಲ್ಲಿಸಿರುವ ಪ್ರಕರಣಗಳು ಬೆಳಕಿಗೆ ಬಂದಿವೆ. ಕೋಗಿಲು ಲೇಔಟ್ನ ನಿವಾಸಿಗಳೇ ಅಲ್ಲದವರೂ ಮನೆಗಾಗಿ ಅರ್ಜಿ ಹಾಕಿರುವುದಾಗಿ ತಿಳಿದುಬಂದಿದೆ. ನಿರಾಶ್ರಿತರಿಂದ ಬಂದಿರುವ ಎಲ್ಲ ಅರ್ಜಿಗಳ ನೈಜತೆ ಪರಿಶೀಲನೆ ಕಾರ್ಯ ಇಂದು ಹಾಗೂ ನಾಳೆ ನಡೆಸಲಾಗುತ್ತಿದೆ. ಪರಿಶೀಲನೆ ಬಳಿಕ ಅಂತಿಮ ಪಟ್ಟಿ ಸಿದ್ಧಪಡಿಸಿ ಸರ್ಕಾರಕ್ಕೆ ವರದಿ ಸಲ್ಲಿಸುವ ಸಾಧ್ಯತೆ ಇದೆ.











