ಲಕ್ನೋ: ತರಬೇತಿ ವಿಮಾನ ಪತನಗೊಂಡು ಇಬ್ಬರು ಪೈಲಟ್ ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ ಕಾನ್ಪುರದಲ್ಲಿ ನಡೆದಿದೆ. ಈ ದುರ್ಘಟನೆಯಲ್ಲಿ ಕರ್ನಾಟಕದ ಅಭಿಷೇಕ್ ಪೂಜಾರಿ ಕೂಡ ಮೃತಪಟ್ಟಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಇಂದು ಬೆಳಗ್ಗೆ ಗಾರ್ಗ್ ಏವಿಯೇಷನ್ ತರಬೇತಿ ಕೇಂದ್ರದಿಂದ ನಾಲ್ಕು ಆಸನಗಳ ಟ್ವಿನ್ ಎಂಜಿನ್ ವಿಮಾನ ಹಾರಾಟ ಆರಂಭಿಸಿತ್ತು. ಸುಮಾರು 11.30ಕ್ಕೆ ಟೇಕ್ಆಫ್ ಆದ ವಿಮಾನ, ತರಬೇತಿ ಮುಗಿಸಿ ಕೇಂದ್ರದತ್ತ ಮರಳುತ್ತಿದ್ದ ವೇಳೆ ಕೆಲವೇ ನಿಮಿಷಗಳಲ್ಲಿ ಅಪಘಾತಕ್ಕೀಡಾಗಿದೆ. ಕಾನ್ಪುರದ ಗಂಗಾ ನದಿ ಸಮೀಪದ ಕೃಷಿ ಜಮೀನಿನಲ್ಲಿ ವಿಮಾನ ಪತನವಾಗಿದ್ದು, ಬೆಳಗ್ಗೆ 11.50ರ ಸುಮಾರಿಗೆ ವಿಮಾನ ನಿಯಂತ್ರಣ ಕಳೆದುಕೊಂಡು ನೆಲಕ್ಕೆ ಅಪ್ಪಳಿಸಿರಬಹುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಅಪಘಾತದಲ್ಲಿ ವಿಮಾನದಲ್ಲಿದ್ದ ಇಬ್ಬರೂ ಮೃತಪಟ್ಟಿದ್ದಾರೆ. ಇವರನ್ನು ಗುಜರಾತ್ ಮೂಲದ ಸಚಿನ್ ಭಾಟಿಯಾ ಮತ್ತು ಕರ್ನಾಟಕದ ಅಭಿಷೇಕ್ ಪೂಜಾರಿ ಎಂದು ಗುರುತಿಸಲಾಗಿದೆ. ಇಬ್ಬರಲ್ಲಿ ಒಬ್ಬರು ತರಬೇತಿ ಪಡೆಯುತ್ತಿದ್ದ ಪೈಲಟ್ ಆಗಿದ್ದರೆ, ಮತ್ತೊಬ್ಬರು ತರಬೇತಿ ನೀಡುತ್ತಿದ್ದ ಇನ್ಸ್ಟ್ರಕ್ಟರ್ ಆಗಿದ್ದರು. ಇನ್ಸ್ಟ್ರಕ್ಟರ್ಗೆ ಸುಮಾರು 3,000 ಗಂಟೆಗಳ ಹಾರಾಟದ ಅನುಭವವಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ವಿಮಾನ ನೆಲಕ್ಕೆ ಬಿದ್ದ ರಭಸಕ್ಕೆ ಸಂಪೂರ್ಣವಾಗಿ ಹಾನಿಗೊಳಗಾಗಿದೆ.ಅಪಘಾತಕ್ಕೆ ಕಾರಣವೇನು ಎಂಬುದು ಸದ್ಯಕ್ಕೆ ಸ್ಪಷ್ಟವಾಗಿಲ್ಲ. ತಾಂತ್ರಿಕ ದೋಷ, ಹವಾಮಾನ ಅಥವಾ ಇತರ ಯಾವುದೇ ಕಾರಣವಿದೆಯೇ ಎಂಬ ಬಗ್ಗೆ ತನಿಖೆ ನಡೆಯಬೇಕಿದೆ. ಈ ಬಗ್ಗೆ ಡಿಜಿಸಿಎಗೆ ಮಾಹಿತಿ ನೀಡಲಾಗಿದ್ದು, ಸಂಬಂಧಿಸಿದ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಲಿದ್ದಾರೆ.







