ಆಲ್ ರೌಂಡರ್ ರವೀಂದ್ರ ಜಡೇಜಾ ಸಮಯೋಚಿತ ಬ್ಯಾಟಿಂಗ್ ಪ್ರದರ್ಶನ ಹಾಗೂ ಬೌಲರ್ ಗಳ ಸಂಘಟಿತ ಪ್ರದರ್ಶನದಿಂದ ಭಾರತ ತಂಡ 49 ರನ್ ಗಳ ಭಾರೀ ಅಂತರದಿಂದ ಇಂಗ್ಲೆಂಡ್ ತಂಡವನ್ನು ಸೋಲಿಸಿ ಮೂರು ಪಂದ್ಯಗಳ ಟಿ-20 ಸರಣಿಯನ್ನು 2-0ಯಿಂದ ವಶಪಡಿಸಿಕೊಂಡಿತು.
ಬರ್ಮಿಂಗ್ ಹ್ಯಾಂನಲ್ಲಿ ಶನಿವಾರ ನಡೆದ ಪಂದ್ಯದಲ್ಲಿ ಟಾಸ್ ಸೋತರೂ ಮೊದಲು ಬ್ಯಾಟ್ ಮಾಡಿದ ಭಾರತ ತಂಡ 20 ಓವರ್ ಗಳಲ್ಲಿ 8 ವಿಕೆಟ್ ಕಳೆದುಕೊಂಡು 170 ರನ್ ಗಳಿಸಿತು. ಕಠಿಣ ಗುರಿ ಬೆಂಬತ್ತಿದ ಇಂಗ್ಲೆಂಡ್ ತಂಡ 17 ಓವರ್ ಗಳಲ್ಲಿ 121 ರನ್ ಗಳಿಗೆ ಆಲೌಟಾಯಿತು.
ಕಠಿಣ ಗುರಿ ಬೆಂಬತ್ತಿದ ಇಂಗ್ಲೆಂಡ್ ತಂಡಕ್ಕೆ ಮೊದಲ ಎಸೆತದಲ್ಲೇ ಭುವನೇಶ್ವರ್ ಕುಮಾರ್ ಜೇಸನ್ ರಾಯ್ ಅವರನ್ನು ಔಟ್ ಮಾಡಿ ಆಘಾತ ನೀಡಿದರು. ಈ ಆಘಾತದಿಂದ ಚೇತರಿಸಿಕೊಳ್ಳದ ಇಂಗ್ಲೆಂಡ್ ತಂಡ ಸತತವಾಗಿ ವಿಕೆಟ್ ಕಳೆದುಕೊಂಡು ಸೋಲಿನ ಹಾದಿ ಹಿಡಿಯಿತು.
ಭಾರತದ ಪರ ಭುವನೇಶ್ವರ್ ಕುಮಾರ್ 3 ವಿಕೆಟ್ ಕಬಳಿಸಿದರೆ, ಜಸ್ ಪ್ರೀತ್ ಬುಮ್ರಾ ಮತ್ತು ಯಜುರ್ವೆಂದ್ರ ಚಾಹಲ್ ತಲಾ 2, ಹರ್ಷಲ್ ಪಟೇಲ್ ಮತ್ತು ಹಾರ್ದಿಕ್ ಪಾಂಡ್ಯ ತಲಾ 1 ವಿಕೆಟ್ ಕಿತ್ತು ಭಾರತಕ್ಕೆ ಸುಲಭ ಜಯ ತಂದುಕೊಟ್ಟರು.

ಇದಕ್ಕೂ ಮುನ್ನ ಬ್ಯಾಟ್ ಮಾಡಿದ ಭಾರತ ತಂಡಕ್ಕೆ ಆರಂಭಿಕನಾಗಿ ಬಡ್ತಿ ಪಡೆದು ಬಂದ ರಿಷಭ್ ಪಂತ್ (26) ಮತ್ತು ನಾಯಕ ರೋಹಿತ್ ಶರ್ಮ (31) ಮೊದಲ ವಿಕೆಟ್ ಗೆ 49 ರನ್ ಜೊತೆಯಾಟದ ಮೂಲಕ ಉತ್ತಮ ಆರಂಭ ನೀಡಿದರು. ಆದರೆ ನಂತರ ಸತತ 3 ವಿಕೆಟ್ ಕಳೆದುಕೊಂಡು ಕಂಗಾಲಾಯಿತು.
ಒಂದು ಹಂತದಲ್ಲಿ ಭಾರತ 89 ರನ್ ಗೆ 5 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತ್ತು. ಆದರೆ ರವೀಂದ್ರ ಜಡೇಜಾ 29 ಎಸೆತಗಳಲ್ಲಿ 5 ಬೌಂಡರಿ ಸಹಾಯದಿಂದ ಅಜೇಯ 46 ರನ್ ಸಿಡಿಸಿ ತಂಡವನ್ನು ಉತ್ತಮ ಮೊತ್ತದತ್ತ ಮುನ್ನಡೆಸಿದರು. ಇಂಗ್ಲೆಂಡ್ ಪರ ಕ್ರಿಸ್ ಜೊರ್ಡಾನ್ 4 ಮತ್ತು ರಿಚರ್ಡ್ ಗ್ಲೆಸನ್ 3 ವಿಕೆಟ್ ಪಡೆದು ಭಾರತ ತಂಡವನ್ನು ಕಾಡಿದರು.