ಮಧ್ಯಪ್ರದೇಶದ ಗುನಾ ಜಿಲ್ಲೆಯಲ್ಲಿ ಶನಿವಾರ ಬೆಳಗಿನ ಜಾವ ಆರೋಪಿಗಳನ್ನು ಬಂದಿಸಲು ಹೋದ ಮೂವರು ಪೊಲೀಸ್ ಅಧಿಕಾರಿಗಳನ್ನು ದುಷ್ಕರ್ಮಿಗಳು ಗುಂಡಿಕ್ಕಿ ಕೊಂದಿದ್ದಾರೆ.
ರಾಜ್ಯ ರಾಜಧಾನಿಯಿಂದ ಸುಮಾರು 160 ಕಿ.ಮೀ ದೂರವಿರುವ ಅರಾನ್ ಪೊಲೀಸ್ ಠಾಣೆ ಮ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು ನಸುಕಿನ ಜಾವ 3ರ ಸುಮಾರಿಗೆ ಈ ಘಟನೆ ಸಂಭವಿಸಿದೆ. ಆರೋಪಿಗಳ ಪತ್ತೆಗಾಗಿ ವಿಶೇಷ ತಂಡವನ್ನು ರಚಿಸಲಾಗಿದ್ದು ಕಠಿಣ ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ ಎಂದು ಗೃಹ ಸಚಿವ ನರೋತ್ತಮ್ ಮಿಶ್ರಾ ತಿಳಿಸಿದ್ದಾರೆ.
ವಿಚಾರ ಬೆಳಕಿಗೆ ಬರುತ್ತಿದ್ದಂತೆ ತಮ್ಮ ಗೃಹ ನಿವಾಸದಲ್ಲಿ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಸಂಪುಟ ಸಹೋದ್ಯೋಗಿಗಳ ಜೊತೆ ತುರ್ತು ಸಭೆ ನಡೆಸಿದ್ದಾರೆ ಎಂದು ಸಿಎಂ ಕಚೇರಿಯ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಸಭೆಯಲ್ಲಿ ಡಿಜಿಪಿ, ಗೃಹ ಸಚಿವ, ಮುಖ್ಯ ಕಾರ್ಯದರ್ಶಿ ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಸಭೆಯಲ್ಲಿ ಭಾಗಿಯಾಗಿದ್ದಾರೆ ಎಂದು ಹೇಳಿದ್ದಾರೆ.
ಸಭೆಯ ನಂತರ ಮಾತನಾಡಿದ ಮುಖ್ಯಮಂತ್ರಿ ಚೌಹಾಣ್ ಮೃತರ ಕುಟುಂಬಗಳಿಗೆ ತಲಾ 1 ಕೋಟಿ ರೂಪಾಯಿ ಪರಿಹಾರವನ್ನ ಘೋಷಿಸಿದ್ದಾರೆ ಮತ್ತು ಕುಟುಂಬದ ಒಬ್ಬರಿಗೆ ಸರ್ಕಾರಿ ಕೆಲಸವನ್ನು ನೀಡಲಾಗುವುದು
ಅಪರೂಪ ತಳಿಯ ನಾಲ್ಕು ಜಿಂಕೆಗಳನ್ನು ಆರೋಪಿಗಳು ಕೊಂದಿರುವ ಬಗ್ಗೆ ಕಚಿತ ಮಾಹಿತಿ ಮೇರೆಗೆ ಆರೋಪಿಗಳನ್ನು ಸೆರೆಹಿಡಿಯಲು ಪೊಲೀಸರ ತಂಡವೊಂದು ಸ್ಥಳಕ್ಕೆ ತೆರಳಿತ್ತು. ಪೊಲೀಸ್ ಸಿಬ್ಬಂದಿ ಸ್ಥಳದ ಸುತ್ತ ಸುತ್ತುವರಿದಿದ್ದರು ಮತ್ತು ದುಷ್ಕರ್ಮಿಗಳಿಗೆ ಶರಣಾಗುವಂತೆ ಸೂಚಿಸಿದ್ದರು ಈ ವೇಳೆ ಏಕಾಏಕಿ ಗುಂಡಿನ ಕಾಳಗ ಶುರುವಾಗಿದ್ದು ಘಟನೆಯಲ್ಲಿ ಮೂವರು ಪೊಲೀಸರು ಹತರಾಗಿದ್ದಾರೆ ಎಂದು ತಿಳಿದು ಬಂದಿದೆ.
ಪೊಲೀಸ್ ಸಬ್ಇನ್ಸ್ಪೆಕ್ಟರ್ ರಾಜ್ಕುಮಾರ್ ಜಾತವ್, ಪೇದೆಗಳದ ನಿಲೇಶ್ ಭಾರ್ಗವ ಹಾಗು ಶಾಂತರಾಮ್ ಮೀನಾ ಮೃತ ದುರ್ದೈವಿಗಳು ಎಂದು ತಿಳಿದು ಬಂದಿದೆ.