ರಾಜ್ಯದ ಎಲ್ಲಾ ಶಾಲೆಗಳಲ್ಲೂ ಕನ್ನಡವನ್ನು ಪ್ರಥಮ ಅಥವಾ ದ್ವಿತೀಯ ಭಾಷೆಯನ್ನಾಗಿ ಕಲಿಸುವುದನ್ನು ಕಡ್ಡಾಯಗೊಳಿಸಿರುವ ರಾಜ್ಯ ಸರ್ಕಾರದ ನಿರ್ಧಾರವನ್ನು ಪ್ರಶ್ನಿಸಿ 4ನೇ ತರಗತಿ ವಿದ್ಯಾರ್ಥಿಯೊಬ್ಬ ಕರ್ನಾಟಕ ಹೈಕೋರ್ಟ್ನಲ್ಲಿ ಮನವಿ ಸಲ್ಲಿಸಿದ್ದಾನೆ.
ಕನ್ನಡ ಭಾಷಾ ಕಲಿಕಾ ಕಾಯ್ದೆ-2015 ಕೇಂದ್ರೀಯ ಪ್ರೌಢಶಿಕ್ಷಣ ಮಂಡಳಿ (CBSE) ಮತ್ತು ಭಾರತೀಯ ಪ್ರೌಢಶಿಕ್ಷಣ ಸರ್ಟಿಫಿಕೇಟ್ನ (ICSE) ನೋಂದಾಯಿತ ಶಾಲೆಗಳಿಗೂ ಅನ್ವಯಿಸುವುದನ್ನು ಪ್ರಶ್ನಿಸಿ ವಿದ್ಯಾರ್ಥಿ ಕೀರ್ತನ್ ಸುರೇಶ್ ಎಂಬ ವಿದ್ಯಾರ್ಥಿ ಸಲ್ಲಿಸಿದ ಮನವಿಯನ್ನು ಕೈಗೆತ್ತುಕೊಂಡ ನ್ಯಾಯಮೂರ್ತಿ ಆರ್ ದೇವದಾಸ್ ನೇತೃತ್ವದ ಏಕಸದಸ್ಯ ಪೀಠವು ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿ. ವಿಚಾರಣೆಯನ್ನು ಮೂರು ವಾರಗಳ ಕಾಲ ಮುಂದೂಡಿದ್ದಾರೆ.
“ರಾಜ್ಯ ಸರ್ಕಾರದ ಕಾಯ್ದೆ ಸಂವಿಧಾನದ 14ನೇ ವಿಧಿಯ ಜೊತೆಗೆ 19 (1) (ಜಿ), 21 ಮತ್ತು 301ನೇ ವಿಧಿಯನ್ನು ಉಲ್ಲಂಘಿಸುತ್ತದೆ. ಅಲ್ಲದೇ, ಇದು ಕಳೆದ ವರ್ಷದ ಜುಲೈ 29ರಂದು ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿರುವ ರಾಷ್ಟ್ರೀಯ ಶಿಕ್ಷಣ ನೀತಿಗೆ 2020ರ ಗುರಿ ಮತ್ತು ಉದ್ದೇಶಗಳಿಗೆ ವಿರುದ್ಧವಾಗಿದೆ” ಎಂದು ಕೀರ್ತನ್ ಸುರೇಶ್ ಪರ ವಕೀಲ ಸುವಿದತ್ ಎಂ ಎಸ್ ಅವರ ಮೂಲಕ ಸಲ್ಲಿಸಲಾಗಿರುವ ಮನವಿಯಲ್ಲಿ ತಿಳಿಸಲಾಗಿದೆ.
ಕನ್ನಡ ಭಾಷಾ ಕಲಿಕಾ ಕಾಯ್ದೆ 2015 ಅನ್ನು ಅಸಾಂವಿಧಾನಿಕ, ಕಾನೂನುಬಾಹಿರ ಮತ್ತು CBSE / ICSE ನೋಂದಾಯಿತ ಸಂಸ್ಥೆಗಳನ್ನು ಹೊರತಾಗಿಸಿಲ್ಲವಾದ್ದರಿಂದ ಕಾಯ್ದೆಗೆ ಯಾವುದೇ ಅಧಿಕಾರ ಇಲ್ಲ ಎಂದು ಘೋಷಿಸಬೇಕು ಎಂದು ಕೋರಲಾಗಿದೆ.

ಉದ್ಯೋಗದ ನಿಮಿತ್ತ ಮೇಲಿಂದ ಮೇಲೆ ವರ್ಗಾವಣೆಯಾಗುವವರು ತಮ್ಮ ಮಕ್ಕಳನ್ನು ಸಾಮಾನ್ಯವಾಗಿ CBSE / ICSE ನೋಂದಾಯಿತ ಶಾಲೆಗೆ ಸೇರಿಸುತ್ತಾರೆ. ಒಂದೊಮ್ಮೆ ಮಧ್ಯಂತರದಲ್ಲಿ ವರ್ಗಾವಣೆಯಾದರೂ ಬೇರೆ ಸ್ಥಳದಲ್ಲಿ ಅವರ ಕಲಿಕೆಗೆ ಯಾವುದೇ ತೊಂದರೆಯಾಗದಿರಲಿ ಎಂಬುದಕ್ಕಾಗಿ ಹೀಗೆ ಮಾಡಲಾಗುತ್ತದೆ ಎಂದು ಅರ್ಜಿದಾರರು ಹೇಳಿದ್ದಾರೆ. “ಎರಡನೇ ಭಾಷೆಯನ್ನಾಗಿ ಮಗು ಕನ್ನಡ ಕಲಿಯುವುದು ಕಡ್ಡಾಯವಾದರೆ ಒಂದೊಮ್ಮೆ ಅವರು ಮುಂದಿನ ವರ್ಷ ಬೇರೆ ರಾಜ್ಯಕ್ಕೆ ವರ್ಗಾವಣೆಯಾದರೆ ಅವರಿಗೆ ಅತಂತ್ರ ಸ್ಥಿತಿ ಎದುರಾಗಲಿದೆ” ಎಂದು ಮನವಿಯಲ್ಲಿ ಹೇಳಲಾಗಿದೆ.
ಕಾಯ್ದೆಯ ಅನ್ವಯ ಕನ್ನಡವನ್ನು ಪ್ರಥಮ ಅಥವಾ ದ್ವಿತೀಯ ಭಾಷೆಯನ್ನಾಗಿ ಕಲಿಯುವುದು ಕಡ್ಡಾಯವಾದರೆ ಮಕ್ಕಳು ತಾವು ಮಾಡದ ತಪ್ಪಿಗೆ ಭಾರಿ ಸಮಸ್ಯೆ ಎದುರಿಸಬೇಕಾಗುತ್ತದೆ. ಚಿಕ್ಕಂದಿನಿಂದಲೂ ಕನ್ನಡದ ಕಲಿಯದಿರುವುದು ಮತ್ತು ಮಕ್ಕಳ ಪೋಷಕರು ಭಾಷಾ ಅಲ್ಪಸಂಖ್ಯಾತರಾಗಿರುವವರಿಗೆ ಪ್ರಾದೇಶಿಕ ಭಾಷೆ ಬರೆಯುವುದು, ಮಾತನಾಡುವುದು ಮತ್ತು ಓದುವುದು ಕಷ್ಟಸಾಧ್ಯವಾಗಲಿದೆ ಎಂದು ಹೇಳಲಾಗಿದೆ.
“ಭಾಷಾ ಅಲ್ಪಸಂಖ್ಯಾತ ಗುಂಪುಗಳಿಗೆ ಸೇರಿದ ಮಕ್ಕಳಿಗೆ ಶಿಕ್ಷಣದ ಪ್ರಾಥಮಿಕ ಹಂತದಲ್ಲಿ ಮಾತೃಭಾಷೆಯಲ್ಲಿ ಬೋಧನೆಗಾಗಿ ಸಾಕಷ್ಟು ಸೌಲಭ್ಯಗಳನ್ನು ಒದಗಿಸುವುದು ಪ್ರತಿ ರಾಜ್ಯ ಮತ್ತು ಸ್ಥಳೀಯ ಪ್ರಾಧಿಕಾರದ ಕರ್ತವ್ಯವಾಗಿದೆ” ಎಂದು ಸಂವಿಧಾನದ 350ಎ ವಿಧಿಯಲ್ಲಿ ಉಲ್ಲೇಖಿಸಿರುವುದನ್ನು ಒತ್ತಿ ಹೇಳಲಾಗಿದೆ. ಆದರೆ, ಸಂವಿಧಾನದ 350ಎ ವಿಧಿಯ ಪ್ರಕಾರ, ಯಾವುದೇ ಶಿಕ್ಷಣ ಸಂಸ್ಥೆಯು ಮಾತೃ ಭಾಷೆಯನ್ನು ಬೋಧನಾ ಮಾಧ್ಯಮವಾಗಿ ಅಳವಡಿಸಿಕೊಳ್ಳುವಂತೆ ಒತ್ತಾಯಿಸಲು ರಾಜ್ಯ ಸರ್ಕಾರಕ್ಕೆ ಅಧಿಕಾರವಿಲ್ಲ ಎಂದು ವಾದಿಸಲಾಗಿದೆ.
“ಆಕ್ಷೇಪಾರ್ಹವಾದ ಕಾಯಿದೆಯು ಅಸಮಾನತೆಯಿಂದ ಕೂಡಿದ್ದು, ಅರ್ಜಿದಾರರ ಮೇಲೆ ಅನಗತ್ಯ ಹೊರೆ ಮತ್ತು ಸಂಕಷ್ಟವನ್ನು ಹೇರುತ್ತದೆ. ಸಂವಿಧಾನದ 19 ಮತ್ತು 30ನೇ ವಿಧಿಯ ಅಡಿಯಲ್ಲಿ ಅವರ ಹಕ್ಕುಗಳ ಮೇಲೆ ತರ್ಕಹೀನ ನಿರ್ಬಂಧಗಳನ್ನು ವಿಧಿಸುತ್ತದೆ” ಎಂದು ಹೇಳಲಾಗಿದೆ.





