ನವದೆಹಲಿ: ರಕ್ಷಾ ಬಂಧನ ಸೇರಿದಂತೆ ಮುಂಬರುವ ಹಬ್ಬಗಳ ಹಿನ್ನೆಲೆಯಲ್ಲಿ ದೆಹಲಿ ಸರ್ಕಾರದ ಆಹಾರ ಸುರಕ್ಷತಾ ಇಲಾಖೆ ನಗರದ ಮುಖ್ಯ ಮಾರುಕಟ್ಟೆಗಳಲ್ಲಿ ಆಹಾರ ಗುಣಮಟ್ಟದ ಪರೀಕ್ಷೆ ನಡೆಸಿದೆ. ಈ ಕಾರ್ಯಾಚರಣೆಯಲ್ಲಿ ಓಖ್ಲಾ ಸಬ್ಜಿ ಮಂಡಿಯಲ್ಲಿ ಸುಮಾರು 508 ಕೆಜಿ ನಕಲಿ ಪನೀರ್ ಪತ್ತೆಯಾಗಿದ್ದು, ಸದ್ಯ ನಾಶಪಡಿಸಲಾಗಿದೆ.

ತಪಾಸಣೆ ವೇಳೆ ಪತ್ತೆಯಾದ ಕಲಬೆರಕೆ ಪನೀರ್ ವಿರುದ್ಧ ಆಹಾರ ಸುರಕ್ಷತೆ ಮತ್ತು ಮಾನದಂಡಗಳ ಕಾಯ್ದೆ, 2006 ಹಾಗೂ ಸಂಬಂಧಿತ ನಿಯಮಗಳ ಅಡಿಯಲ್ಲಿ ಅಗತ್ಯ ಕಾನೂನು ಕ್ರಮ ಕೈಗೊಳ್ಳಲಾಗಿದೆ. ಇದಲ್ಲದೆ, ಕಳೆದ 48 ಗಂಟೆಗಳಲ್ಲಿ ದೆಹಲಿಯ ವಿವಿಧ ಜಿಲ್ಲೆಗಳಿಂದ ವಿವಿಧ ಆಹಾರ ಪದಾರ್ಥಗಳ 22 ಮಾದರಿಗಳನ್ನು ಸಂಗ್ರಹಿಸಲಾಗಿದೆ. ಈ ಮಾದರಿಗಳನ್ನು ವಿವರವಾದ ಪರೀಕ್ಷೆಗಾಗಿ ನಿಗದಿತ ಪ್ರಯೋಗಾಲಯಗಳಿಗೆ ಕಳುಹಿಸಲಾಗಿದ್ದು, ವರದಿ ಆಧರಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ಬಗ್ಗೆ ಆರೋಗ್ಯ ಸಚಿವ ಪಂಕಜ್ ಕುಮಾರ್ ಸಿಂಗ್ ಪ್ರತಿಕ್ರಿಯಿಸಿದ್ದು, ಹಬ್ಬದ ಸಂದರ್ಭದಲ್ಲಿ ಪನೀರ್, ಹಾಲಿನ ಉತ್ಪನ್ನಗಳು, ಸಿಹಿತಿಂಡಿಗಳು, ಖಾದ್ಯ ತೈಲ ಸೇರಿದಂತೆ ವಿವಿಧ ಆಹಾರ ಪದಾರ್ಥಗಳ ಬೇಡಿಕೆ ಹೆಚ್ಚಾಗುವ ಹಿನ್ನೆಲೆಯಲ್ಲಿ ಆಹಾರ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ. ಕಲಬೆರಕೆ ಹಾಗೂ ಕಳಪೆ ಗುಣಮಟ್ಟದ ಆಹಾರ ಮಾರಾಟ ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ಆಹಾರ ಸಂಸ್ಥೆಗಳು, ಮಾರುಕಟ್ಟೆಗಳು ಮತ್ತು ಸರಬರಾಜು ಕೇಂದ್ರಗಳಲ್ಲಿ ನಿಯಮಿತ ತಪಾಸಣೆ, ಮಾದರಿ ಸಂಗ್ರಹಣೆ ಹಾಗೂ ಮೇಲ್ವಿಚಾರಣೆ ನಡೆಸಲು ಜಿಲ್ಲಾವಾರು ತಂಡಗಳನ್ನು ನಿಯೋಜಿಸಲಾಗಿದೆ ಎಂದು ತಿಳಿಸಿದರು.

ಮುಂದಿನ ದಿನಗಳಲ್ಲೂ ದೆಹಲಿಯಾದ್ಯಂತ ಇದೇ ರೀತಿಯ ತಪಾಸಣೆ ಮತ್ತು ಮಾದರಿ ಸಂಗ್ರಹಣಾ ಕಾರ್ಯಾಚರಣೆ ಮುಂದುವರಿಯಲಿದೆ. ಅಸುರಕ್ಷಿತ, ಕಲಬೆರಕೆ ಅಥವಾ ಗುಣಮಟ್ಟವಿಲ್ಲದ ಆಹಾರ ಪದಾರ್ಥಗಳ ತಯಾರಿಕೆ, ಸಂಗ್ರಹಣೆ, ವಿತರಣೆ ಅಥವಾ ಮಾರಾಟದಲ್ಲಿ ತೊಡಗಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ದೆಹಲಿ ಸರ್ಕಾರ ಎಚ್ಚರಿಕೆ ನೀಡಿದೆ.







