ಹೈದರಾಬಾದ್ : ಪೋಕ್ಸೊ ಪ್ರಕರಣದಲ್ಲಿ ಬಂಧಿತನಾಗಿದ್ದ ಆರೋಪಿಯೊಬ್ಬ ಜಾಮೀನಿನ ಮೇಲೆ ಹೊರಬಂದು ತನ್ನ ಕುಟುಂಬವನ್ನೇ ಸರ್ವನಾಶ ಮಾಡಿದ್ದಾನೆ. ಅಲ್ಲದೆ ಲೈಂಗಿಕ ಅಪರಾಧಕ್ಕೆ ಸಂಬಂಧಿಸಿದಂತೆ ತನ್ನ ವಿರುದ್ಧ ದೂರು ನೀಡಿದ್ದ ಕುಟುಂಬದ ಮೂವರು ಜನರನ್ನು ಕೊಲೆ ಮಾಡಿರುವ ಭೀಕರ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯಲ್ಲಿ ನಡೆದಿದೆ.

ಈ ಹತ್ಯೆ ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ್ದು, ಆರೋಪಿಯಾಗಿ ಜಾಮೀನಿನ ಮೇಲೆ ಹೊರಗೆ ಬಂದ ಬಳಿಕ ಅದೇ ವೈಷಮ್ಯದ ಕಾರಣಕ್ಕೆ ತನ್ನ ಪತ್ನಿ ಪಾರ್ವತಿ ಸರಿತಾ (30) ಹಾಗೂ 4, 1 ವರ್ಷದ ಇಬ್ಬರು ಗಂಡು ಮಕ್ಕಳ ಮೇಲೆ ಹಲ್ಲೆ ನಡೆಸಿ ಕೊಲೆ ಮಾಡಿದ್ದಾನೆ. ಅಲ್ಲದೆ ಸಂತ್ರಸ್ತೆಯ ಕುಟುಂಬದ ಮೂವರನ್ನು ಹತ್ಯೆಗೈದಿದ್ದಾನೆ.
ಇನ್ನೂ ಪ್ರಕರಣದ ಹಿನ್ನೆಲೆಯನ್ನು ನೋಡುವುದಾದರೆ, ಕಳೆದ ಮೇ ತಿಂಗಳಲ್ಲಿ ಅಪ್ರಾಪ್ತ ಬಾಲಕಿಯನ್ನು ಹಿಂಬಾಲಿಸಿ,ಕಿರುಕುಳ ನೀಡಿದ್ದಕ್ಕಾಗಿ ಬಾಲಕಿಯ ಕುಟುಂಬಸ್ಥರು ಆರೋಪಿಯ ವಿರುದ್ಧ ದೂರು ದಾಖಲಿಸಿದ್ದರು. ಇದಾದ ಬಳಿಕ ಜೈಲು ಪಾಲಾಗಿದ್ದ ಆರೋಪಿ ಬಿ. ರಾಜ್ ಕುಮಾರ್ ಜಾಮೀನಿನ ಮೇಲೆ ಹೊರಬಂದಿದ್ದನು.
ಇದನ್ನೂ ಓದಿ : 2026ರ ಮೈಸೂರು ದಸರಾ ಮಹೋತ್ಸವಕ್ಕೆ ಮುಹೂರ್ತ ನಿಗದಿ: ಈ ಬಾರಿಯ ವಿಶೇಷತೆಯೇನು..?
17 ವರ್ಷದ ಸಂತ್ರಸ್ತೆಯನ್ನು, ಆಕೆಯ ತಾಯಿ ಮತ್ತು ಅಜ್ಜಿಯನ್ನು ಆರೋಪಿ ರಾಜ್ ಕುಮಾರ್ ಭೀಕರವಾಗಿ ಮನೆಯಲ್ಲಿಯೇ ಕೊಲೆ ಮಾಡಿದ್ದಾನೆ. ಬಳಿಕ ಬಾಲಕಿಯನ್ನು ನಿರ್ಜನ ಸ್ಥಳಕ್ಕೆ ಕರೆದೊಯ್ದು, ಅಲ್ಲಿ ಆಕೆಯನ್ನು ಹತ್ಯೆ ಮಾಡುವ ಮೂಲಕ ಕ್ರೌರ್ಯ ಮೆರೆದಿದ್ದಾನೆ. ಬಳಿಕ ತನ್ನ ಮನೆಗೆ ಹಿಂತಿರುಗಿ ಹೆಂಡತಿ ಸರಿತಾ ಮತ್ತು ಇಬ್ಬರು ಮಕ್ಕಳಾದ ಪರೀಕ್ಷಿತ್ (3) ಮತ್ತು ಧೈವಿಕ್ಷಿತ್ (2) ಹರಿತವಾದ ಆಯುಧದಿಂದ ಇರಿದು ಕೊಲೆ ಮಾಡಿದ್ದಾನೆ. ಇದಾದ ಬಳಿಕ ತನ್ನ ಪೋಷಕರಿಗೆ ಕರೆ ಮಾಡಿ ಎಲ್ಲರನ್ನೂ ಮುಗಿಸಿರುವುದಾಗಿ ತಿಳಿಸಿ ಸ್ಥಳದಿಂದ ಪರಾರಿಯಾಗಿದ್ದಾನೆ.
20,000 ರೂಪಾಯಿಗಳ ವೈಯಕ್ತಿಕ ಬಾಂಡ್ ಮೇಲೆ ರಿಲೀಸ್ ಆಗಿದ್ದ ಕೊಲೆಗಡುಕ..
ಇನ್ನೂ, ಅಪ್ರಾಪ್ತ ಬಾಲಕಿಯೊಬ್ಬಳನ್ನು ಹಿಂಬಾಲಿಸಿ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ರಾಜ್ಕುಮಾರ್ ವಿರುದ್ಧ ‘ಮಕ್ಕಳ ಮೇಲಿನ ಲೈಂಗಿಕ ಅಪರಾಧಗಳ ತಡೆ ಕಾಯ್ದೆ’ಯ (POCSO) ಸೆಕ್ಷನ್ 11 ಮತ್ತು 12 ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿತ್ತು. ಈ ಅಪರಾಧಕ್ಕೆ ಏಳು ವರ್ಷಗಳಿಗಿಂತ ಕಡಿಮೆ ಅವಧಿಯ ಶಿಕ್ಷೆ ವಿಧಿಸಬಹುದಾದ್ದರಿಂದ, ಆತನನ್ನು 20,000 ರೂಪಾಯಿಗಳ ವೈಯಕ್ತಿಕ ಬಾಂಡ್ ಮೇಲೆ ಬಿಡುಗಡೆ ಮಾಡಲಾಗಿತ್ತು. ಬಳಿಕ ಕ್ರಿಮಿನಲ್ ಪ್ರಕರಣದ ಸೇಡಿಗಾಗಿಕಿರಾತಕ ಈ ಕೃತ್ಯವೆಸಗಿರುವ ಶಂಕೆ ವ್ಯಕ್ತವಾಗುತ್ತಿದೆ.

ರಾಜ್ಕುಮಾರ್ ಆರು ಕೊಲೆಗಳನ್ನು ಮಾಡಿರುವ ಸ್ಥಳಗಳಲ್ಲಿನ ಆಯುಧಗಳನ್ನು ವಶಪಡಿಸಿಕೊಳ್ಳಲಾಗಿದೆ. ಆರೋಪಿಯ ಫೋನ್ ಕರೆ ಸ್ವೀಕರಿಸಿದ ನಂತರ, ರಾಜ್ಕುಮಾರ್ ತಂದೆ ಶಾಬಾದ್ ಪೊಲೀಸ್ ಠಾಣೆಗೆ ತೆರಳಿ ತಮ್ಮ ಮಗನ ಬಗ್ಗೆ ದೂರು ನೀಡಿದ್ದಾರೆ. ಸದ್ಯ ಆರೋಪಿ ರಾಜ್ಕುಮಾರ್ ಇನ್ನೂ ತಲೆಮರೆಸಿಕೊಂಡಿದ್ದು, ಆತನನ್ನು ಪತ್ತೆಹಚ್ಚಲು ಸ್ಥಳೀಯ ಪೊಲೀಸರು ಬಲೆಬೀಸಿದ್ದಾರೆ.






