ಕಳೆದ 3 ವರ್ಷಗಳಲ್ಲಿ ರಾಜ್ಯದಲ್ಲಿ ಕಟ್ಟಡ ಕಾರ್ಮಿಕರ ಕಲ್ಯಾಣ ಕಾರ್ಯಕ್ರಮಗಳಿಗೆ 78 ಕೋಟಿ ರೂ. ವೆಚ್ಚ ಮಾಡಲಾಗಿದೆ ಎಂದು ಕಾರ್ಮಿಕ ಸಚಿವ ಸಂತೋಷ್ ಎಸ್.ಲಾಡ್ ಹೇಳಿದರು.

ಅವರು ಕಾರ್ಮಿಕ ಇಲಾಖೆ, ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿ ಸಾರಿಗೆ ಇಲಾಖೆ ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ಸಹಯೋಗದಲ್ಲಿ ಅಡ್ಯಾರ್ ಗಾರ್ಡನ್ ಸಭಾಂಗಣದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ವರ್ಗಗಳ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಣೆ ಮತ್ತು ಅರಿವು ಮೂಡಿಸುವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಹೊರಗುತ್ತಿಗೆ ನೌಕರರ ವೇತನ ಸಮಸ್ಯೆಗಳನ್ನು ಪರಿಹರಿಸಲು ಆಯಾ ಜಿಲ್ಲೆಗಳ ಜಿಲ್ಲಾಧಿಕಾರಿಗಳ ನೇತೃತ್ವದ ಸೊಸೈಟಿಗಳನ್ನು ಸ್ಥಾಪಿಸಿ ಹೊರಗುತ್ತಿಗೆ ನೌಕರರನ್ನು ನೋಂದಣಿ ಮಾಡಿಸಲಾಗುವುದು. ಆಶಾದೀಪ ಯೋಜನೆಯಡಿ ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡದವರಿಗೆ ಉದ್ಯೋಗ ನೀಡಿದಲ್ಲಿ ಅಂತಹ ಕೈಗಾರಿಕೆಗಳಿಗೆ ಸರಕಾರದ ವತಿಯಿಂದ ವೇತನದಲ್ಲಿ ಶೇ.೫೦ ರಷ್ಟು ಸಹಾಯಧನ ನೀಡಲಾಗುವುದು. ಅದಾಗಲೇ ವಾರ್ಷಿಕ ೭.೫೦ ಲ.ರೂಗಳ ಸಹಾಯಧನ ನೀಡಲಾಗಿದ್ದು ೭೦೦೦ ಫಲಾನುಭವಿಗಳು ಇದರ ಲಾಭ ಪಡೆದುಕೊಂಡಿದ್ದಾರೆ. ೨೦ಕ್ಕಿಂತ ಹೆಚ್ಚಿನ ಕಾರ್ಮಿಕರಿರುವ ಕಂಪನಿಗಳಲ್ಲಿ ಕಡ್ಡಾಯ ಗ್ರಾಚ್ಯುಟಿ ನೀಡಲು ತಿಳಿಸಲಾಗಿದ್ದು ಇದರ ಹಣ ನೇರವಾಗಿ ಕಾರ್ಮಿಕರಿಗೆ ತಲುಪಲಿದೆ ಎಂದರು.

ಮಹಿಳಾ ನೌಕರರಿಗೆ ಮುಟ್ಟಿನ ಸಂದರ್ಭದಲ್ಲಿ ಒಂದು ದಿನ ವೇತನ ಸಹಿತ ರಜೆ ನೀಡುವ ಐತಿಹಾಸಿಕ ನಿರ್ಣಾಯವನ್ನು ರಾಜ್ಯಸರ್ಕಾರ ಜಾರಿ ಮಾಡುವ ಮೂಲಕ ಮಹಿಳಾ ಪರ ನಿಂತಿದೆ ಎಂದು ಸಚಿವರು ಸಂತಸ ವ್ಯಕ್ತಪಡಿಸಿದರು. ಅಸAಘಟಿತ ವಲಯದ ಕಾರ್ಮಿಕರ ಕಲ್ಯಾಣ ಕಾಯುವ ನಿಟ್ಟಿನಲ್ಲಿ ಪೆಟ್ರೋಲ್, ಡೀಸೆಲ್ ಸೆಸ್ ೧ ರೂ. ಕಾರ್ಮಿಕ ಇಲಾಖೆಗೆ ನೀಡುವಂತೆ ಸರಕಾರಕ್ಕೆ ಮನವಿ ಮಾಡಲಾಗಿದೆ. ಸರ್ಕಾರವು ಕಳೆದ ಎರಡು ವರ್ಷಗಳಲ್ಲಿ ಕಾರ್ಮಿಕರಿಗೆ ಅನುಕೂಲವಾಗುವಂತಹ ಗಿಗ್ ಕಾಯ್ದೆ, ಸಿನಿಕಾಯ್ದೆ, ಸಾರಿಗೆ ಕಾಯ್ದೆಗಳನ್ನು ಜಾರಿಗೊಳಿಸಿ ಕಾರ್ಮಿಕರ ಹಿತರಕ್ಷಣೆ ಕಾಪಾಡುತ್ತಿದೆ. ಆನ್ ಲೈನ್ ಹೋಂ ಡೆಲಿವರಿ ಉದ್ಯೋಗಗಳಲ್ಲಿ ತೊಡಗಿರುವ ಗಿಗ್ ಕಾರ್ಮಿಕರು, ಸಾರಿಗೆ ಕ್ಷೇತ್ರದಲ್ಲಿ ತೊಡಗಿರುವವರು, ಸಿನಿಮಾ ಮತ್ತು ಜಾನಪದ ಕಲಾ ಪ್ರಕಾರಗಳಲ್ಲಿ ತೊಡಗಿರುವ ಕಲಾವಿದರು, ತಂತ್ರಜ್ಞರು, ಕೂಲಿ ಕಾರ್ಮಿಕರು, ಸವಿತಾ ಸಮಾಜದವರು, ಬೀಡಿ, ಟೈಲರಿಂಗ್ ಮುಂತಾದ ವೃತ್ತಿಗಳಲ್ಲಿ ತೊಡಗಿರುವ ೧೦೧ ವಿವಿಧ ವರ್ಗಗಳ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡಿ ಕಾರ್ಮಿಕ ಇಲಾಖೆಯಡಿ ಏಕೀಕರಿಸಿ ಅವರ ಸಮಸ್ಯೆಗಳನ್ನು ಪರಿಹರಿಸುವ ಕಾರ್ಯ ನಡೆಯುತ್ತಿದೆ ಎಂದರು.

ಕಾರ್ಮಿಕರ ಕಲ್ಯಾಣಕ್ಕಾಗಿ ವಿವಿಧ ಬಿಲ್ಗಳನ್ನು ತಂದಿದ್ದು, ಕಾರ್ಮಿಕರ ಅನುಕೂಲತೆಗೆ ತಕ್ಕಂತೆ ನಿಯಾಮಾವಳಿಯನ್ನು ರೂಪಿಸಲಾಗುತ್ತದೆ. ಸಿನೆಮಾ ಮತ್ತು ಸಾಂಸ್ಕೃತಿಕ ಕ್ಷೇತ್ರದಲ್ಲಿ ದುಡಿಯುತ್ತಿರುವ ಅಸಂಘಟಿತ ಕಾರ್ಮಿಕರನ್ನು ನೋಂದಾಯಿಸಿ ಸಾಮಾಜಿಕ ಭದ್ರತಾ ಸೌಲಭ್ಯಗಳನ್ನು ಒದಗಿಸುವ ಉದ್ದೇಶದಿಂದ ಬಿಲ್ ತರಲಾಗಿದೆ. ರಾಜ್ಯ ಕಾರ್ಮಿಕರ ಕಲ್ಯಾಣ ಮತ್ತು ಸಾಮಾಜಿಕ ಭದ್ರತಾ (ಆಶಾ ದೀಪ ಯೋಜನೆ)ಯನ್ನು ಜಾರಿಗೊಳಿಸಲಾಗಿದೆ ಎಂದು ತಿಳಿಸಿದರು. ಸರಕು ಸಾಗಾಣೆ ಮತ್ತು ಸಾರಿಗೆ ಕ್ಷೇತ್ರದಲ್ಲಿ ತೊಡಗಿರುವ ಕಾರ್ಮಿಕರು ಮೃತಪಟ್ಟಲ್ಲಿ 5ಲಕ್ಷ ರೂ ಪರಿಹಾರ ನೀಡಲಾಗುತ್ತಿದೆ. ರಾಜ್ಯದಲ್ಲಿ ವಾರ್ಷಿಕ 1.72 ಲಕ್ಷ ಜನರು ಅಪಘಾತದಲ್ಲಿ ಮರಣ ಹೊಂದುತ್ತಿದ್ದು ಪೊಲೀಸ್ ಇಲಾಖೆ ಮತ್ತು ಜಿಲ್ಲಾಡಳಿತಗಳು ಈ ಬಗ್ಗೆ ಜಾಗೃತಿ ಮೂಡಿಸಬೇಕು ಎಂದು ಎಂದು ಸಚಿವ ಸಂತೋಷ ಲಾಡ್ ಹೇಳಿದರು.

ಮಂಗಳೂರು ಉತ್ತರ ಶಾಸಕ ಭರತ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್, ಶಾಸಕರಾದ ಅಶೋಕ್ ರೈ, ಐವನ್ ಡಿಸೋಜಾ, ಮಂಜುನಾಥ್ ಭಂಡಾರಿ, ಜಿಲ್ಲಾಧಿಕಾರಿ ದರ್ಶನ್, ಕಾರ್ಮಿಕ ಆಯುಕ್ತ ಡಾ ಎಚ್ ಎನ್ ಗೋಪಾಲಕೃಷ್ಣ ಮತ್ತಿತರರು ಉಪಸ್ಥಿತರಿದ್ದರು.