ಅಮೃತ ಮಹೋತ್ಸವ ಕ್ರೀಡಾ ಯೋಜನೆಯಡಿ 75 ಕ್ರೀಡಾಪಟುಗಳಿಗೆ ತರಬೇತಿ ನೀಡಿ, ಮುಂದಿನ ಒಲಂಪಿಕ್ಸ್ ನಲ್ಲಿ ಭಾಗವಹಿಸಲು ಹಾಗೂ ಭಾರತಕ್ಕೆ ಪದಕ ಗೆಲ್ಲಿಸುವ ಗುರಿಯನ್ನು ಹೊಂದಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಶನಿವಾರ ನಡೆದ 61ನೇ ರಾಷ್ಟ್ರೀಯ ಅಥ್ಲೆಟಿಕ್ಸ್ ಚಾಂಪಿಯನ್ ಶಿಪ್ 2022 ಉದ್ಘಾಟಿಸಿ ಅವರು ಮಾತನಾಡಿದರು.
ಕರ್ನಾಟಕ ರಾಜ್ಯದಲ್ಲಿ ಕ್ರೀಡಾಕ್ಷೇತ್ರಕ್ಕೆ ಪ್ರಾಮುಖ್ಯತೆ ನೀಡಲಾಗುತ್ತಿದೆ. ಈ ವರ್ಷ ಗ್ರಾಮೀಣ ಕ್ರೀಡಾಕೂಟವನ್ನು ಪ್ರಾರಂಭಿಸಲಾಗಿದೆ. ಕಬ್ಬಡಿ, ಕೊಕೊ, ವಾಲಿಬಾಲ್, ಕುಸ್ತಿ, ಚಕ್ಕಡಿ ಓಡಿಸುವುದು ಮತ್ತು ಕರಾವಳಿಯ ಕಂಬಳ ಸೇರಿದಂತೆ ಗ್ರಾಮೀಣ ಕ್ರೀಡೆಗಳನ್ನು ಗ್ರಾಮ, ತಾಲ್ಲೂಕು, ಜಿಲ್ಲೆ ಹಾಗೂ ಅಂತಿಮವಾಗಿ ರಾಜ್ಯಮಟ್ಟದಲ್ಲಿ ಏರ್ಪಡಿಸಲಾಗುವುದು. ಗ್ರಾಮೀಣ ಕ್ರೀಡಾಪಟುಗಳಿಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಗ್ರಾಮೀಣ ಕ್ರೀಡಾಕೂಟವನ್ನು ಆಯೋಜಿಸಲಾಗುತ್ತಿದೆ. ಭಾರತ ರಾಷ್ಟ್ರವನ್ನು ಪ್ರತಿನಿಧಿಸುವ ಕ್ರೀಡಾಪಟುವಿಗೆ ಇಡೀ ದೇಶ ಜನ ಒಗ್ಗಟ್ಟಾಗಿ ಅವರನ್ನು ಹುರಿದುಂಬಿಸುತ್ತಾರೆ, ಹೀಗೆ ಕ್ರೀಡೆಯ ಮೂಲಕ ಇಡೀ ಭಾರತವನ್ನು ಜೋಡಿಸಬಹುದಾಗಿದೆ ಎಂದು ತಿಳಿಸಿದರು.
ಕ್ರೀಡೆಗಾಗಿ ಸೆಂಟರ್ ಆಫ್ ಎಕ್ಸ್ ಲೆನ್ಸ್ :
ಬೆಂಗಳೂರಿನ ಬಳಿ ಕ್ರೀಡೆಗಾಗಿ ಸೆಂಟರ್ ಆಫ್ ಎಕ್ಸ್ ಲೆನ್ಸ್ ಕೇಂದ್ರವನ್ನು ಸ್ಥಾಪಿಸಲಾಗಿದೆ. ದೊಡ್ಡ ಪ್ರಮಾಣದಲ್ಲಿ ನಿರ್ಮಿಸಲಾಗುತ್ತಿರುವ ಈ ಕೇಂದ್ರದಲ್ಲಿ ಕ್ರೀಡಾಪಟುಗಳಿಗೆ ಅತ್ಯುತ್ತಮ ತರಬೇತಿ, ಸಲಕರಣೆಗಳು, ಮೂಲಸೌಲಭ್ಯಗಳನ್ನು ಒದಗಿಸಲು ತೀರ್ಮಾನಿಸಲಾಗಿದೆ ಎಂದು ತಿಳಿಸಿದರು.
ಮುಂದಿನ ಒಲಿಂಪಿಕ್ಸ್ ನಲ್ಲಿ ಭಾರತ ಹೆಚ್ಚಿನ ಪದಕ ಗೆಲ್ಲುವ ನಿರೀಕ್ಷೆ:
ಪ್ರಧಾನಿ ಮೋದಿಯವರು ಕ್ರೀಡಾಕ್ಷೇತ್ರಕ್ಕೆ ಹೆಚ್ಚಿನ ಒತ್ತು ನೀಡಿದ್ದಾರೆ. ಖೇಲೋ ಇಂಡಿಯಾ, ಫಿಟ್ ಇಂಡಿಯಾ, ಜೀತೋ ಇಂಡಿಯಾ ಕಾರ್ಯಕ್ರಮಗಳ ಮೂಲಕ ಭಾರತದಲ್ಲಿ ಕ್ರೀಡೆಗಳಿಗೆ ಹೆಚ್ಚಿನ ಪ್ರೋತ್ಸಾಹ ನೀಡಿದ್ದಾರೆ. ಒಲಂಪಿಕ್ಸ್, ಏಷಿಯನ್,ಕಾಮನ್ ವೆಲ್ತ್,ನ್ಯಾಷನಲ್ ಗೇಮ್ಸ್ ಗಳಲ್ಲಿ ಭಾಗವಹಿಸಿದ ಕ್ರೀಡಾಪಟುಗಳೊಂದಿಗೆ ಖುದ್ದು ಪ್ರೋತ್ಸಾಹಿಸಿದ್ದಾರೆ. ಈ ಕಾರಣದಿಂದ ಟೋಕಿಯೋ ಒಲಂಪಿಕ್ಸ್ ನಲ್ಲಿ ಭಾರತ ಅತಿ ಹೆಚ್ಚಿನ ಪದಕಗಳನ್ನು ಗೆಲ್ಲಲು ಸಾಧ್ಯವಾಯಿತು. ಅವರ ನೇತೃತ್ವದಲ್ಲಿ ಮುಂದಿನ ಪ್ಯಾರೀಸ್ ಒಲಂಪಿಕ್ಸ್ ನಲ್ಲಿ ಭಾರತ ಹೆಚ್ಚಿನ ಸಂಖ್ಯೆಯಲ್ಲಿ ಪದಕಗಳನ್ನು ಗೆಲ್ಲುವ ನಿರೀಕ್ಷೆ ಇದೆ ಎಂದರು.













