ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಉಗ್ರರ ದಾಳಿಗೆ ಸಂಚು ರೂಪಿಸಲಾಗುತ್ತಿದೆ ಎಂಬ ಗುಪ್ತಚರ ಮಾಹಿತಿ ಹಿನ್ನೆಲೆಯಲ್ಲಿ ಎಂಟು ಮಂದಿ ಶಂಕಿತರನ್ನು ಬಂಧಿಸಲಾಗಿದೆ. ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಲ್ಲಿ ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ.

ತಮಿಳುನಾಡಿನ ತಿರುಪ್ಪೂರ್ ಜಿಲ್ಲೆಯ ಗಾರ್ಮೆಂಟ್ಸ್ ಕಾರ್ಖಾನೆಗಳಲ್ಲಿ ಆರು ಮಂದಿ ಶಂಕಿತರನ್ನು ಪೊಲೀಸರು ಬಂಧಿಸಿದ್ದಾರೆ. ಇವರಲ್ಲಿ ಒಬ್ಬ ಬಾಂಗ್ಲಾದೇಶದ ನಾಗರಿಕನಾಗಿರುವ ಶಂಕೆಯಿದ್ದು, ನಕಲಿ ಆಧಾರ್ ಕಾರ್ಡ್ ಬಳಸಿದ ಆರೋಪವೂ ಕೇಳಿಬಂದಿದೆ.

ಇನ್ನು ಪಶ್ಚಿಮ ಬಂಗಾಳದಲ್ಲೂ ಇಬ್ಬರನ್ನು ಬಂಧಿಸಲಾಗಿದ್ದು, ಆರೋಪಿಗಳಿಂದ 10ಕ್ಕೂ ಹೆಚ್ಚು ಮೊಬೈಲ್ ಫೋನ್ಗಳು ಹಾಗೂ 16 ಸಿಮ್ ಕಾರ್ಡ್ಗಳನ್ನು ವಶಪಡಿಸಿಕೊಳ್ಳಲಾಗಿದೆ. ಸದ್ಯ ಬಂಧಿತ ಶಂಕಿತರನ್ನು ದೆಹಲಿ ಪೊಲೀಸರ ವಶಕ್ಕೆ ನೀಡಲಾಗಿದೆ. ಬಂಧಿತ ಶಂಕಿತರು ದೆಹಲಿ ಹಾಗೂ ಕೋಲ್ಕತಾದಲ್ಲಿ ಕಾಶ್ಮೀರ ಸಂಬಂಧಿತ ಪೋಸ್ಟರ್ಗಳನ್ನು ಅಂಟಿಸಿದ್ದ ಪ್ರಕರಣವೂ ಬೆಳಕಿಗೆ ಬಂದಿದ್ದು, ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

ಗುಪ್ತಚರ ಮಾಹಿತಿ ಪ್ರಕಾರ, ಪಾಕಿಸ್ತಾನ ಮೂಲದ ಲಷ್ಕರೆ ತೈಬಾ ಸಂಘಟನೆ ದೆಹಲಿಯ ಕೆಂಪು ಕೋಟೆ ಸೇರಿದಂತೆ ದೇಶದ ಪ್ರಮುಖ ಧಾರ್ಮಿಕ ಸ್ಥಳಗಳಲ್ಲಿ ಬಾಂಬ್ ಸ್ಫೋಟಕ್ಕೆ ಸಂಚು ರೂಪಿಸಿತ್ತು ಎನ್ನಲಾಗಿದೆ.







