ಕಳೆದ ಕೆಲ ತಿಂಗಳಿನಿಂದ ರಾಜ್ಯದಲ್ಲಿ ಸಚಿವ ಸಂಪುಟ ವಿಸ್ತರಣೆ ಚರ್ಚೆ ನಡೆಯುತಿದ್ದು, ಮುಖ್ಯಮಂತ್ರಿಗಳ ದೆಹಲಿ ಭೇಟಿ ಸಂಪುಟ ವಿಸ್ತರಣೆ ಕುರಿತು ಮತ್ತೆ ಚರ್ಚೆ ಆರಂಭವಾಗುವಂತೆ ಮಾಡಿದೆ.
ಸಿಎಂ ಬೊಮ್ಮಾಯಿ ಇಂದಿನಿಂದ (ಏ. 5) ಎರಡು ದಿನಗಳ ಕಾಲ ದೆಹಲಿ ಪ್ರವಾಸದಲ್ಲಿರುತ್ತಾರೆ. ಮಧ್ಯಾಹ್ನ 1.55ಕ್ಕೆ ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದೆಹಲಿಗೆ ತೆರಳಿರುವ ಸಿಎಂ ಬೊಮ್ಮಾಯಿ ಅವರೊಂದಿಗೆ ಸಚಿವ ಗೋವಿಂದ ಕಾರಜೋಳ ಸಹ ಹೋಗಲಿದ್ದಾರೆ ಎನ್ನಲಾಗಿದೆ. ಸಂಜೆ 7 ಗಂಟೆಗೆ ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರ ಭೇಟಿಗೆ ಸಮಯ ನಿಗದಿಯಾಗಿದೆ. ಕರ್ನಾಟಕ-ತಮಿಳುನಾಡು ನಡುವೆ ಜಟಾಪಟಿಗೆ ಕಾರಣವಾಗಿರುವ ಮೇಕೆದಾಟು ಯೋಜನೆ ಕುರಿತು ರಾಜ್ಯದಲ್ಲಿ ನಡೆದ ಸರ್ವಪಕ್ಷದ ಸಭೆಯ ವಿವರಗಳನ್ನು ಸಚಿವರಿಗೆ ನೀಡಲಿದ್ದಾರೆ. ಯೋಜನೆಗೆ ಒಪ್ಪಿಗೆ ನೀಡುವಂತೆ ಮನವಿ ಸಲ್ಲಿಕೆ ಮಾಡಲಿದ್ದಾರೆ.
ಮುಖ್ಯಮಂತ್ರಿ ದೆಹಲಿ ಭೇಟಿ ನಿಗದಿಯಾಗಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಸಚಿವಾಕಾಂಕ್ಷಿಗಳಲ್ಲಿ ನಿರೀಕ್ಷೆ ಗರಿಗೆದರಿದೆ. ದೆಹಲಿಯಲ್ಲಿ ಬೊಮ್ಮಾಯಿ ಅವರು ರಾಷ್ಟ್ರೀಯ ನಾಯಕರನ್ನು ಭೇಟಿಯಾಗುವ ಸಾಧ್ಯತೆಯಿದೆ. ಹೀಗಾಗಿ ಸಂಪುಟ ಸೇರಲು ತುದಿಗಾಲಲ್ಲಿ ನಿಂತಿರುವ ಹಲವು ನಾಯಕರು ಕೊನೆ ಕ್ಷಣದ ಪ್ರಯತ್ನ ಮುಂದುವರಿಸಿದ್ದಾರೆ. ಈ ಕುರಿತು ಕರ್ನಾಟಕ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್, ಇತರ ಹೈಕಮಾಂಡ್ ನಾಯಕರ ಜೊತೆ ಬಸವರಾಜ ಬೊಮ್ಮಾಯಿ ಚರ್ಚೆ ನಡೆಸುವ ಸಾಧ್ಯತೆ ಇದೆ.
ಒಂದು ವೇಳೆ ಸಂಪುಟ ಪುನಾರಚನೆಗೆ ಗ್ರೀನ್ ಸಿಗ್ನಲ್ ಸಿಕ್ಕರೆ ಕೆಲವು ಸಚಿವರು ತಮ್ಮ ಸ್ಥಾನವನ್ನು ಕಳೆದುಕೊಳ್ಳಲಿದ್ದಾರೆ. ಈ ಕುರಿತು ಈಗಾಗಲೇ ರಾಜ್ಯ ಬಿಜೆಪಿಯಲ್ಲಿ ಚರ್ಚೆಗಳು ನಡೆಯುತ್ತಿವೆ. ಸಂಪುಟ ವಿಸ್ತರಣೆ ಕುರಿತು ಕೇಳಿದ ಪ್ರಶ್ನೆಗೆ ಸಚಿವ ಕೆ. ಎಸ್. ಈಶ್ವರಪ್ಪ “ಕಾದು ನೋಡಿ” ಎಂಬ ಉತ್ತರವನ್ನು ಸೋಮವಾರ ನೀಡಿದ್ದಾರೆ.
ಮುಂದಿನ ವರ್ಷ ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಈ ಹಿನ್ನಲೆಯಲ್ಲಿ ಈಗ ಸಂಪುಟ ವಿಸ್ತರಣೆ ಮಾಡಿದರೆ ಆಗುವ ಪರಿಣಾಮಗಳ ಕುರಿತು ಹೈಕಮಾಂಡ್ ನಾಯಕರು ಲೆಕ್ಕಾಚಾರ ಹಾಕಲಿದ್ದಾರೆ. ಮುಖ್ಯಮಂತ್ರಿಗಳ ಜೊತೆ ಈ ಕುರಿತು ಸುಧೀರ್ಘ ಚರ್ಚೆ ನಡೆಸುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.