ದಕ್ಷಿಣ ಕನ್ನಡ ಜಿಲ್ಲೆಯ ಬಿಜೆಪಿ ಯುವ ಮುಖಂಡನ ಹತ್ಯೆಯನ್ನು ಖಂಡಿಸಿ ಸಾರ್ವಜನಿಕರು ಸಾಮಾಜಿಕ ಜಾಲತಾಣದಲ್ಲಿ ರಾಜ್ಯ ಬಿಜೆಪಿ ಸರಕಾರದ ವಿರುದ್ಧ ಆಕ್ರೋಶ ಹೊರ ಹಾಕುತ್ತಿದ್ದಾರೆ.
ಮಂಗಳವಾರ ರಾತ್ರಿ ತನ್ನ ಕೋಳಿ ಅಂಗಡಿಯನ್ನು ಮುಚ್ಚುತ್ತಿದ್ದ ವೇಳೆ ಬಿಜೆಪಿ ಯುವ ಮೋರ್ಚಾದ ಕಾರ್ಯಕಾರಿಣಿ ಸದಸ್ಯ ಪ್ರವೀಣ್ ನಟ್ಟಾರೆಯನ್ನು ಕೆಲ ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿ ಪರಾರಿಯಾಗಿದ್ದರು. ಘಟನೆ ನಡೆಯುತ್ತಿದ್ದಂತೆ ದಕ್ಷಿಣ ಕನ್ನಡದ ಕೆಲವು ತಾಲೂಕುಗಳಲ್ಲಿ ಹಿಂದೂ ಸಂಘಟನೆಯ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದಾರೆ.
ಸಾಮಾಜಿಕ ಜಾಲಾತಾಣದಲ್ಲೂ ಬಿಜೆಪಿ ಸರಕಾರ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಗೃಹ ಸಚಿವ ಆರಗ ಜ್ಙಾನೇಂದ್ರ ವಿರುದ್ಧ ಹಲವರು ಕಿಡಿ ಕಾರಿದ್ದಾರೆ. ನಮ್ಮದೇ ಸರ್ಕಾರ ಇದ್ದರು ನಮ್ಮ ಕಾರ್ಯಕರ್ತರಿಗೆ ಭದ್ರತೆ ಇಲ್ಲ. ಬಿಜೆಪಿ ಕಾರ್ಯಕರ್ತರಿಗೆ ರಕ್ಷಣೆ ಇಲ್ಲದೇ ಇರುವಾಗ ಪಕ್ಷದಲ್ಲಿ ಹೆಣಗಳ ಸಂಖ್ಯೆ ಎಣಿಸಬೇಕಾ ಎಂದು ಬೊಮ್ಮಾಯಿ ಸರ್ಕಾರಕ್ಕೆ ಪ್ರಶ್ನೆ..? ಹಾಕಿದ್ದಾರೆ.
ಹಿಂದೂ ಕಾರ್ಯಕರ್ತರ ಶವಗಳ ಮೇಲೆ ಅಧಿಕಾರ ಗದ್ದುಗೆ ಏರಿ ದುರಹಂಕಾರದ ಸಾಮ್ರಾಜ್ಯ ಸ್ಥಾಪನೆ ಮಾಡಿಕೊಂಡು ಅಂಧ ಆಡಳಿತ ಮಾಡಿದ ಬಿಜೆಪಿ ಈ ಸಾರಿ ಶವಗಳ ಕಾರಣಕ್ಕೆ ಅಧಿಕಾರ ಕಳೆದುಕೊಳ್ಳಲಿದೆ, ಬರೆದಿಟ್ಟುಕೊಳ್ಳಿ ಎಂದು ಫೇಸ್ಬುಕ್ ಬಳಕೆದಾರನೊಬ್ಬ ಬಿಜೆಪಿ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ.