ಆಗಸ್ಟ್ 18 ರಂದು ಸಿದ್ದರಾಮಯ್ಯ ಅವರು ಕೊಡಗು ಜಿಲ್ಲೆಯ ಮಳೆ ಹಾನಿ ಪ್ರದೇಶಗಳಿಗೆ ಭೇಟಿ ನೀಡುವ ಉದ್ದೇಶದಿಂದ ಪ್ರವಾಸ ಕೈಗೊಂಡಿದ್ದರು. ಈ ಸಂದರ್ಭದಲ್ಲಿ ಸಿದ್ದರಾಮಯ್ಯ ಅವರ ವಿರುದ್ಧ ಬಿಜೆಪಿ ಕಾರ್ಯಕರ್ತರು ಕಪ್ಪು ಬಾವುಟ ಪ್ರದರ್ಶನ ಮಾಡಿದ್ದರು. ಅಷ್ಟೇ ಅಲ್ಲದೆ, ಸಿದ್ದರಾಮಯ್ಯ ಕಾರಿಗೆ ಮೊಟ್ಟೆ ಎಸೆದ ಪ್ರಕರಣವನ್ನು ವಿರೋಧಿಸಿ ಕಾಂಗ್ರೆಸ್ ಮಡಿಕೇರಿ ಚಲೋ ಹಮ್ಮಿಕೊಂಡಿದೆ. ಈ ಪ್ರತಿಭಟನಾ ಕಾರ್ಯಕ್ರಮದಲ್ಲಿ ಶಾಸಕರು ಸಕ್ರಿಯವಾಗಿ ಭಾಗಿಯಾಗುವಂತೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಶಾಸಕರಿಗೆ ಸೂಚನೆ ನೀಡಿದ್ದಾರೆ.
ಸಿದ್ದರಾಮಯ್ಯ ಅವರ ಸೂಚನೆ ಮೇರೆಗೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ಕಾರ್ಯದರ್ಶಿ ತುಕರಾಮ್ ಅವರು ಅಧಿಕೃತ ಪತ್ರದ ಮೂಲಕ ಶಾಸಕರಿಗೆ ಈ ಸೂಚನೆಯನ್ನು ನೀಡಿದ್ದಾರೆ.
ಈ ಪ್ರತಿಭಟನೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ವಿಧಾನಪರಿಷತ್ ವಿರೋಧ ಪಕ್ಷದ ನಾಯಕ ಬಿ.ಕೆ. ಹರಿಪ್ರಸಾದ್, ವಿಧಾನಸಭೆ ವಿರೋಧ ಪಕ್ಷಗಳ ಉಪನಾಯಕ ಯು.ಟಿ. ಖಾದರ್, ಕೆಪಿಸಿಸಿ ಪ್ರಚಾರ ಸಮಿತಿಯ ಅಧ್ಯಕ್ಷ ಎಂ.ಬಿ. ಪಾಟೀಲ್, ಪ್ರಿಯಾಂಕ ಖರ್ಗೆ, ಸತೀಶ್ ಜಾರಕಿಹೊಳಿ ಸೇರಿದಂತೆ ಪ್ರಮುಖ ಮುಖಂಡರು ಭಾಗಿಯಾಗಲಿದ್ದಾರೆ. ಈ ನಿಟ್ಟಿನಲ್ಲಿ ಎಲ್ಲಾ ಶಾಸಕರು ಭಾಗಿಯಾಗುವಂತೆ ಸೂಚನೆ ನೀಡಲಾಗಿದೆ.
ಶುಕ್ರವಾರ ಬೆಳಗ್ಗೆ 10.30ಕ್ಕೆ ಕೊಡಗು ಜಿಲ್ಲೆಯ ಮಡಿಕೇರಿಯಲ್ಲಿ ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿ ಮುಂದೆ ಪ್ರತಿಭಟನೆ ನಡೆಯಲಿದೆ.