ಯೋಗರಾಜ್ ಭಟ್ ನಿರ್ದೇಶನದ, ಕೃಷಿ ಸಚಿವ ಬಿ.ಸಿ.ಪಾಟೀಲ್ ನಿರ್ಮಾಣದ ಯಶಸ್ ಸೂರ್ಯ-ಸೋನೆಲ್ ಮೊಂತೆರೋ ನಾಯಕ-ನಾಯಕಿಯಾಗಿ ನಟಿಸಿರುವ ಗರಡಿ ಚಿತ್ರದ ಚಿತ್ರೀಕರಣವನ್ನ ಯಶಸ್ವಿಯಾಗಿ ಮುಗಿಸಿದೆ.
ಬೆಂಗಳೂರು ನಗರದ ರಾಮುಹಳ್ಳಿಯಲ್ಲಿರುವ ಜಿ.ವಿ.ಅಯ್ಯರ್ ಸ್ಟುಡಿಯೋದಲ್ಲಿ ಹಾಕಲಾಗಿದ್ದ ಬೃಹತ್ ಸೆಟ್ನಲ್ಲಿ 70 ದಿನಗಳ ಕಾಲ ಚಿತ್ರೀಕರಣ ಮಾಡಲಾಗಿದ್ದು ಈ ಬಗ್ಗೆ ಚಿತ್ರತಂಡ ಸುದ್ದಿಗೋಷ್ಠಿ ನಡೆಸಿ ಮಾಹಿತಿಯನ್ನ ಹಂಚಿಕೊಂಡಿದೆ.
ನಿರ್ದೇಶಕ ಯೋಗರಾಜ್ ಭಟ್ ಮಾತನಾಡಿ ಸುಮಾರು 70 ದಿನಗಳ ಚಿತ್ರೀಕರಣದ ನಂತರ ಗರಡಿ ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದೆ ಚಿತ್ರದ ಮತ್ತೊಂದು ವಿಶೇಷವೇನೆಂದರೆ ನಾಯಕನ ತಂದೆ ಪಾತ್ರದಲ್ಲಿ ಕಡೂರು ಶಾಸಕ ಬೆಳ್ಳಿ ಪ್ರಕಾಶ್ ನಟಿಸಿದ್ದಾರೆ. ನಮ್ಮ ಚಿತ್ರವು ಹಳೇ ಮೈಸೂರು ಭಾಗದಲ್ಲಿ ನಡೆಯುವ ಕಥೆ. ದೇಸಿ ಕ್ರೀಡೆಗೆ ಒತ್ತು ನೀಡುವ ಸಲುವಾಗಿ ಈ ವಿಭಿನ್ನ ಕಥೆಯನ್ನು ಆಯ್ಕೆ ಮಾಡಿಕೊಂಡಿದ್ದೇವೆ. ನಮ್ಮ ಚಿತ್ರಕ್ಕೆ ನಿಮ್ಮೆಲ್ಲರ ಪ್ರೋತ್ಸಾಹವಿರಲಿ ಎಂದು ಆಶಿಸಿದ್ದಾರೆ.
ಕೃಷಿ ಸಚಿವ, ನಿರ್ಮಾಪಕ ಬಿ.ಸಿ.ಪಾಟೀಲ್ ಮಾತನಾಡಿ ಗರಡಿ ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದೆ ಚಿತ್ರ ಚೆನ್ನಾಗಿ ಬಂದಿದೆ ಚಿತ್ರದ ಆಡಿಯೋ ಹಕ್ಕು ಸರಿಗಮಪ ಸಂಸ್ಥೆಗೆ ಒಂದು ಕೋಟಿಗೆ ಮಾರಾಟವಾಗಿದೆ. ಡಬ್ಬಿಂಗ್, ರಿಮೇಕ್ ರೈಟ್ಸ್ ಗೂ ಸಾಕಷ್ಟು ಬೇಡಿಕೆ ಇದೆ. ನಮ್ಮ ಸಂಸ್ಥೆಯ ನಿರ್ಮಾಣದ ಹದಿನಾರನೇ ಚಿತ್ರ. ಫೆಬ್ರವರಿ ಕೊನೆ ಅಥವಾ ಮಾರ್ಚ್ ಮೊದಲ ವಾರದಲ್ಲಿ ಚಿತ್ರ ತೆರೆಗೆ ಬರಲಿದೆ ಎಂದು ತಿಳಿಸಿದ್ದಾರೆ.

ನಾಯಕ ಯಶಸ್ ಸೂರ್ಯ ಮಾತನಾಡಿ ನಾನು ಪೈಲ್ವಾನ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದೇನೆ. ಇದಕ್ಕಾಗಿ ಸಾಕಷ್ಟು ತಯಾರಿ ಮಾಡಿಕೊಂಡಿದ್ದೆ. ಅನುಭವಿ ಕಲಾವಿದರೊಂದಿಗೆ ನಟಿಸಿರುವ ಖುಷಿಯಿದೆ. ಅವಕಾಶ ನೀಡಿದ ನಿರ್ಮಾಪಕ ಹಾಗೂ ನಿರ್ದೇಶಕರಿಗೆ ವಂದನೆಗಳು ಎಂದು ಹೇಳಿದ್ದಾರೆ.
ನಟ ಆರ್ಮುಗಂ ರವಿಶಂಕರ್ ಮಾತನಾಡಿ, ಈ ಚಿತ್ರದಲ್ಲಿ ಅಭಿನಯಿಸಿರುವುದು ಖುಷಿಯಾಗಿದೆ. ಯೋಗರಾಜ್ ಭಟ್ ಹಾಗೂ ಬಿ.ಸಿ.ಪಾಟೀಲ್ ಅವರ ಜೊತೆ ಇದು ನನ್ನ ಮೊದಲ ಚಿತ್ರ ಎಂದು ತಮ್ಮ ಪಾತ್ರದ ಕುರಿತು ಮಾಹಿತಿ ಹಂಚಿಕೊಂಡಿದ್ದಾರೆ.
ನಿರ್ಮಪಕಿ ಸೃಷ್ಟಿ ಪಾಟೀಲ್ ಮಾತನಾಡಿ ಚಿತ್ರೀಕರಣ ಸರಾಗವಾಗಿ ಮುಗಿಯಲು ಸಹಕಾರ ನೀಡಿದ್ದ ಸಮಸ್ತ ತಂಡಕ್ಕೆ ಧನ್ಯವಾದಗಳನ್ನ ತಿಳಿಸಿದ್ದಾರೆ.
ಇನ್ನು ಚಿತ್ರದ ವಿಶೇಷ ಪಾತ್ರದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ನಟಿಸಿದ್ದು ಅವರ ಪಾತ್ರದ ಕುರಿತು ಎಲ್ಲರ ನಿರೀಕ್ಷೆ ಮತ್ತಷ್ಟು ಹೆಚ್ಚಿಸಿದೆ.