ಧಾರವಾಡ: ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಹಾಗೂ ಐಪಿಎಸ್ ಅಧಿಕಾರಿ ಡಿ. ರೂಪಾ ಈ ರೀತಿ ಪರಸ್ಪರ ಕೆಸರೆರಚುತ್ತಿರುವುದು ಸರಿಯಲ್ಲ. ಇವರ ಮೇಲೆ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿಗೆ ಹೇಳಲಾಗುವುದು ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅಭಿಪ್ರಾಯಪಟ್ಟರು.
ಕೇಂದ್ರ ಲಲಿತಕಲಾ ಅಕಾಡೆಮಿ ಪ್ರಾದೇಶಿಕ ಕಚೇರಿಗೆ ಸೋಮವಾರ ನಡೆದ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಸಂದರ್ಭದಲ್ಲಿ ಸುದ್ಧಿಗಾರರೊಂದಿಗೆ ಅವರು ಮಾತನಾಡಿದರು.

ಅಧಿಕಾರಿಗಳ ನಡುವಿನ ಆರೋಪ, ಪ್ರತ್ಯಾರೋಪದಂತ ಬೆಳವಣಿಗೆಗೆ ಕಡಿವಾಣ ಹಾಕುವುದು ಅಗತ್ಯ. ಪರಸ್ಪರ ದೂರುಗಳಿದ್ದರೆ ಸಂಬಂಧಪಟ್ಟವರಿಗೆ ದೂರು ಸಲ್ಲಿಸಬೇಕಿತ್ತು. ಆದರೆ ಈ ರೀತಿ ಪತ್ರಿಕಾ ಹೇಳಿಕೆ ನೀಡುತ್ತಿರುವುದು ಸರಿಯಲ್ಲ ಎಂದು ಹೇಳಿದರು.
ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ಈ ವಿಷಯ ಅತ್ಯಂತ ದುರ್ದೈವ. ಇದಕ್ಕೆ ತಕ್ಷಣ ಕಡಿವಾಣ ಹಾಕಬೇಕು ಎಂದು ಜೋಶಿ ಹೇಳಿದರು