ರಾಜ್ಯದ ಪಾಲಿನ ಅನುದಾನಗಳನ್ನು ನ್ಯಾಯಯುತವಾಗಿ ಕೊಡಬೇಕೆಂದು ಒತ್ತಾಯ
ಬೆಂಗಳೂರು: ಕರ್ನಾಟಕದ(Karnataka) ವಿಚಾರದಲ್ಲಿ ಸುಳ್ಳು ಹೇಳಿರುವ ಪ್ರಧಾನಿ(Prime Minister) ನರೇಂದ್ರ ಮೋದಿಯವರು(Narendra Modi) ಜನರ ಕ್ಷಮೆ ಕೇಳಬೇಕು. ರಾಜ್ಯದ ಪಾಲಿನ ಅನುದಾನಗಳನ್ನು ನ್ಯಾಯಯುತವಾಗಿ ಕೊಡಬೇಕು ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ(Siddaramaiah) ಒತ್ತಾಯಿಸಿದ್ದಾರೆ.
ಇಂದು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಪ್ರಧಾನಿ ನರೇಂದ್ರಮೋದಿ ಮತ್ತು ಗೃಹಸಚಿವ ಅಮಿತ್ ಶಾ ಅವರು ದೇಶದ ಕೆಲಸ ಮಾಡುವುದನ್ನು ಬಿಟ್ಟು ಕೇವಲ ಬಿಜೆಪಿಯ ಚುನಾವಣಾ ಏಜೆಂಟರಾಗಿ ದುಡಿಯುತ್ತಿದ್ದಾರೆ. ನಮ್ಮ ರಾಜ್ಯದ ಜನರಿಂದ ದೋಚಿಕೊಂಡ ಸಂಪತ್ತನ್ನು ಪ್ರವಾಹ, ಬರ, ಕೋವಿಡ್ ನಂತಹ ಮಾರಕ ಕಾಯಿಲೆಗಳಿಗೆ ಹಾಗೂ ಅಭಿವೃದ್ಧಿ ಕಾರ್ಯಗಳಿಗೆ, ಜನರ ಕಲ್ಯಾಣಕ್ಕೆ ಖರ್ಚು ಮಾಡುವ ಬದಲು ಚುನಾವಣಾ ಪ್ರಚಾರಗಳಿಗೆ ಖರ್ಚು ಮಾಡುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.
ನಾನು ಮೋದಿಯವರು ರಾಜ್ಯಕ್ಕೆ ಬಂದಾಗಲೆಲ್ಲ ಕರ್ನಾಟಕದ ಜನರಿಂದ ಲೂಟಿಯ ರೀತಿಯಲ್ಲಿ ಸಂಗ್ರಹಿಸುತ್ತಿರುವ ತೆರಿಗೆ, ಮೇಲ್ತೆರಿಗೆಗಳಲ್ಲಿ ರಾಜ್ಯಕ್ಕೆ ನ್ಯಾಯವಾದ ಪಾಲು ಕೊಡದೆ ಜನರಿಗೆ ಅನ್ಯಾಯ ಮಾಡುತ್ತಿದ್ದೀರಿ ಎಂದು ಆಕ್ಷೇಪಿಸುತ್ತಲೆ ಇದ್ದೇನೆ. ಈ ಕುರಿತು ಇದುವರೆಗೆ ಮಾತನಾಡದ ಮೋದಿಯವರು ಇತ್ತೀಚೆಗೆ ನವದೆಹಲಿಯ ಕರ್ನಾಟಕ ಭವನದ ಅಮೃತ ಮಹೋತ್ಸಹ ಹಾಗೂ ಬಾರಿಸು ಕನ್ನಡ ಡಿಂಡಿಮವ ಎಂಬ ಕಾರ್ಯಕ್ರಮದಲ್ಲಿ ತಾವು ಕರ್ನಾಟಕದ ರೈಲ್ವೆಗೆ, ಹೆದ್ದಾರಿ ಯೋಜನೆಗಳಿಗೆ ಬಹಳ ಅನುದಾನಗಳನ್ನು ಕೊಟ್ಟಿದ್ದೇವೆ ಹಾಗೂ ಅನುದಾನಗಳನ್ನು ಹೆಚ್ಚಿಸಿದ್ದೇವೆ, ಮನಮೋಹನ್ ಸಿಂಗ್ ನೇತೃತ್ವದ ಯುಪಿಎ ಸರ್ಕಾರಕ್ಕಿಂತ ಎಷ್ಟೊ ಪಾಲು ಹೆಚ್ಚು ಕೊಟ್ಟಿದ್ದೇವೆ ಎಂದು ಸುಳ್ಳು ಹೇಳಿದ್ದಾರೆ ಎಂದು ಆರೋಪಿಸಿದ್ದಾರೆ.
ಕೇಂದ್ರ ಸರ್ಕಾರವೆ ಅಧಿಕೃತವಾಗಿ ಪ್ರಕಟಿಸಿರುವ ದಾಖಲೆಗಳಂತೆ, 2005 ರಿಂದ 2014ರ ಮಾರ್ಚ್’ವರೆಗೆ 9 ವರ್ಷಗಳಲ್ಲಿ ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರ ಕರ್ನಾಟಕದಲ್ಲಿ ನಿರ್ಮಿಸಿದ ರಾಷ್ಟ್ರೀಯ ಹೆದ್ದಾರಿ ಉದ್ದ 2334 ಕಿಮೀಗಳು. ಮೋದಿಯವರ ನೇತೃತ್ವದ ಬಿಜೆಪಿ ಸರ್ಕಾರ 2014 ರಿಂದ 2022 ರವರೆಗೆ ನಿರ್ಮಿಸಿದ ಒಟ್ಟು ರಾಷ್ಟ್ರೀಯ ಹೆದ್ದಾರಿ ಉದ್ದ ಕೇವಲ 1479 ಕಿಮೀ ಮಾತ್ರ. ರೈಲ್ವೆ ವಿಚಾರಕ್ಕೆ ಬಂದರೆ ಮನಮೋಹನ್ ಸಿಂಗ್ ನೇತೃತ್ವದ ಯುಪಿಎ ಸರ್ಕಾರವು ತನ್ನ 9 ವರ್ಷಗಳಲ್ಲಿ 301 ಕಿಮೀ ರೈಲ್ವೆಯನ್ನು ನಿರ್ಮಿಸಿತ್ತು. ಮೋದಿಯವರ ಸರ್ಕಾರ 291 ಕಿಮೀಗಳಷ್ಟು ಮಾತ್ರ ನಿರ್ಮಿಸಿದೆ. ನಮ್ಮ ರಾಜ್ಯದಲ್ಲಿ ಸುಮಾರು 18 ರೈಲ್ವೆ ಯೋಜನೆಗಳು ಚಾಲ್ತಿಯಲ್ಲಿವೆ. ಇವುಗಳಿಗೆ 14-15 ಸಾವಿರ ಕೋಟಿ ಹಣ ಬೇಕು. ಈ ಯೋಜನೆಗಳಲ್ಲಿ ತುಮಕೂರು ರಾಯದುರ್ಗ, ತುಮಕೂರು- ದಾವಣಗೆರೆ ಮಾರ್ಗಗಳೂ ಸೇರಿವೆ ಎಂದು ಮಾಹಿತಿ ನೀಡಿದ್ದಾರೆ.

ಈ ಯೋಜನೆಗಳನ್ನು ಮನಮೋಹನಸಿಂಗರು ಪ್ರಧಾನಿಯಾಗಿದ್ದಾಗ ಕೊಟ್ಟ ಕೊಡುಗೆಗಳಾಗಿವೆ. ಇವುಗಳಿಗೆ ಸಮರ್ಪಕವಾಗಿ ಅನುದಾನ ಕೊಡದೆ, ಅರಣ್ಯ ಇಲಾಖೆಯು ಭೂಮಿಯನ್ನು ಹಸ್ತಾಂತರ ಮಾಡದೆ ಬಾಕಿಯಾಗಿವೆ ಅಥವಾ ಆಮೆಗತಿಯಲ್ಲಿ ನಡೆಯುತ್ತಿವೆ. ಈ ವರ್ಷ ಚುನಾವಣೆ ಬರುತ್ತಿರುವುದರಿಂದ ಕರ್ನಾಟಕದ ರೈಲ್ವೆ ಯೋಜನೆಗಳಿಗೆ ಹಣ ಕೊಟ್ಟಿದ್ದೇವೆ ಎಂದು ಹೇಳುತ್ತಿದ್ದಾರೆ. ಆದರೆ ಲೋಂಡಾ-ಮೀರಜ್, ಹೊಸಪೇಟೆ-ವಾಸ್ಕೋ ಮುಂತಾದ ಬೇರೆ ರಾಜ್ಯಗಳಿಗೂ ಅನ್ವಯವಾಗುವ ಯೋಜನೆಗಳಿಗೆ ಒಂದಿಷ್ಟು ಅನುದಾನ ಒದಗಿಸಿದ್ದಾರೆ ಅಷ್ಟೆ ಎಂದು ತೀವ್ರ ವಾಗ್ದಾಳಿ ನಡೆಸಿದ್ದಾರೆ.
ಕೇಂದ್ರ ಸರ್ಕಾರ ನಮ್ಮಿಂದ ದೋಚುವ ತೆರಿಗೆ, ಮೇಲ್ತೆರಿಗೆಗಳಿಗೂ ಮತ್ತು ನಮಗೆ ಹಂಚಿಕೆ ಮಾಡುತ್ತಿರುವ ಅನುದಾನಗಳಿಗೂ ಸಂಬಂಧವೆ ಇಲ್ಲ. 2013-14 ರಲ್ಲಿ ಕೇಂದ್ರದ ಬಜೆಟ್ ಗಾತ್ರ 16.65 ಲಕ್ಷ ಕೋಟಿ ರೂ ಇತ್ತು. ಆಗ ತೆರಿಗೆ ಪಾಲು ಮತ್ತು ಕೇಂದ್ರ ಪುರಸ್ಕೃತ ಯೋಜನೆಗಳು ಸೇರಿ ಒಟ್ಟು 30310 ಕೋಟಿಗಳಷ್ಟು ಅನುದಾನಗಳು ಬಂದಿದ್ದವು. 2023-24 ರಲ್ಲಿ ಕೇಂದ್ರದ ಬಜೆಟ್ ಗಾತ್ರ 45.01 ಲಕ್ಷ ಕೋಟಿ ರೂಗಳಿಗೆ ಏರಿಕೆಯಾಗಿದೆ. ಆದರೆ ರಾಜ್ಯಕ್ಕೆ ಬರಬಹುದೆಂದು ಅಂದಾಜು ಮಾಡಿರುವುದು 49 ಸಾವಿರ ಕೋಟಿ ಮಾತ್ರ. ಬಜೆಟ್ ಗಾತ್ರ ಸುಮಾರು 3 ಪಟ್ಟು ಹೆಚ್ಚಾಗಿದೆ, ಅದರ ಲೆಕ್ಕದಲ್ಲಿ ನೋಡಿದರೂ ನಮ್ಮ ರಾಜ್ಯದ 85-90 ಸಾವಿರ ಕೋಟಿ ಇರಬೇಕಿತ್ತಲ್ಲವೆ ಮೋದೀಜಿಯವರೆ? ಎಂದು ಪ್ರಶ್ನಿಸಿದ್ದಾರೆ.
ಸತ್ಯ ಇಷ್ಟು ಸೂರ್ಯ ಸ್ಪಷ್ಟವಾಗಿರುವಾಗ ಯಾಕೆ ಸುಳ್ಳು ಹೇಳಿ ಕರ್ನಾಟಕದ ಮರ್ಯಾದಸ್ಥ ಜನರ ಕಿವಿಯ ಮೇಲೆ ಹೂಗಳನ್ನಿಡಲು ಪ್ರಯತ್ನಿಸುತ್ತೀರಿ? ಈ ಮಟ್ಟದ ಸುಳ್ಳುಗಳು ನಿಮ್ಮ ಪದವಿಗೆ ಯೋಗ್ಯವೆ? ಎಂದು ಹರಿಹಾಯ್ದಿದ್ದಾರೆ.
ಕೆಚ್ಚಲು ಕೊಯ್ದು ರಕ್ತ ಹೀರುವ ಕೆಲಸ ಮಾಡುತ್ತಿದ್ದೀರಿ
1.3 ಲಕ್ಷ ಕೋಟಿ ಜಿಎಸ್ಟಿ ಮತ್ತು ನೇರತೆರಿಗೆ ಸಂಗ್ರಹಿಸುವ ಉತ್ತರಪ್ರದೇಶಕ್ಕೆ 1.83 ಲಕ್ಷ ಕೋಟಿ ತೆರಿಗೆ ಪಾಲು ಕೊಡಲಾಗುತ್ತಿದೆ. 3.72 ಲಕ್ಷ ಕೋಟಿ ತೆರಿಗೆ ಪಾವತಿಸುವ ಕರ್ನಾಟಕಕ್ಕೆ ಕೇವಲ 37 ಸಾವಿರ ಕೋಟಿ ಪಾಲು ಕೊಡುತ್ತೇವೆ ಎನ್ನುತ್ತೀರಿ. ಹಸು ಹಾಲು ಕೊಡುತ್ತದೆಂದು ಕೆಚ್ಚಲು ಕೊಯ್ದು ರಕ್ತ ಹೀರುವ ರಾಕ್ಷಸ ಕೆಲಸವನ್ನು ಕರ್ನಾಟಕದ ಕುರಿತು ಮಾಡುತ್ತಿದ್ದೀರಿ. ಇಷ್ಟು ಅನ್ಯಾಯ ಮಾಡಿದರೂ ಕರ್ನಾಟಕಕ್ಕೆ ಕಿರೀಟ ತೊಡಿಸಿದ್ದೇವೆ ಎಂದು ಸುಳ್ಳು ಹೇಳುವುದು ನಿಮ್ಮ ಹುದ್ದೆಗೆ ಶೋಭೆ ತರುವುದೆ ಮೋದೀಜಿಯವರೆ? ಎಂದು ಕೇಳಿದ್ದಾರೆ.
ಸಂಕಷ್ಟಕ್ಕೀಡಾದ ರೈತರಿಗೆ ಪರಿಹಾರದ ಪ್ಯಾಕೇಜ್ ಘೋಷಿಸಿ
ಕರ್ನಾಟಕದ ಈರುಳ್ಳಿ , ಅರಿಶಿನ, ತೆಂಗು, ಅಡಿಕೆ, ಮೆಣಸು, ತೊಗರಿ,ಭತ್ತ, ರಾಗಿ, ಜೋಳ ಮುಂತಾದ ಬೆಳೆಗಳನ್ನು ಬೆಳೆಯುವ ರೈತರು ಬೆಲೆಯಿಲ್ಲದೆ ತೀವ್ರ ಸಂಕಷ್ಟಕ್ಕೆ ಈಡಾಗಿದ್ದಾರೆ. ಕೂಡಲೆ ಇವರ ಸಂಕಷ್ಟ ಪರಿಹರಿಸಲು ಸೂಕ್ತ ಪರಿಹಾರದ ಪ್ಯಾಕೇಜನ್ನು ಘೋಷಿಸಿ. ಹಾಗೆಯೆ ಕರ್ನಾಟಕದ ರಸ್ತೆಗಳ ಟೋಲ್ ಗಳಲ್ಲಿ ದರಗಳು ಕೆಲವೇ ದಿನಗಳಲ್ಲಿ ಎರಡು ಪಟ್ಟು ಮೂರು ಪಟ್ಟು ಹೆಚ್ಚಾಗಿವೆ. ಅವುಗಳನ್ನು ಕೂಡಲೆ ರದ್ದು ಮಾಡಬೇಕು. ಸರ್ಕಾರದ ಭ್ರಷ್ಟಾಚಾರ ತೀವ್ರವಾಗುತ್ತಲೆ ಇದೆ. ಅದರ ಕುರಿತು ಸೂಕ್ತ ತನಿಖೆಗೆ ವಹಿಸಬೇಕೆಂದು ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.






