ಬೆಂಗಳೂರು : ರಾಜ್ಯದಲ್ಲಿ ವಿಧಾನಸಭಾ ಚುನಾವಣೆಗೆ ಕೆಲವೇ ತಿಂಗಳುಗಳು ಬಾಕಿ ಇರುವಾಗಲೇ ರಾಜ್ಯದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಕಳೆದ ಕೆಲವು ದಿನಗಳಿಂದ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಬಿಜೆಪಿ ಕಾರ್ಯಕ್ರಮಗಳಲ್ಲಿ ಹೆಚ್ಚಾಗಿ ಕಾಣಿಸಿಕೊಳ್ತಿದ್ದಾರೆ. ಹೀಗಾಗಿ ಸುಮಲತಾ ಅಂಬರೀಶ್ ರಾಜ್ಯ ರಾಜಕೀಯಕ್ಕೆ ಎಂಟ್ರಿ ಕೊಡ್ತಾರಾ..? ಬಿಜೆಪಿ ಸೇರ್ಪಡೆಯಾಗುತ್ತಾರಾ..? ಎಂಬ ಪ್ರಶ್ನೆಗಳು ಹರಿದಾಡುತ್ತಿದೆ. ನಿನ್ನೆಯಷ್ಟೇ ಬಿಜೆಪಿ ಪ್ರಮುಖರ ಸಭೆಯಲ್ಲಿ ಕಾಣಿಸಿಕೊಂಡಿದ್ದ ಸುಮಲತಾ ಇಂದು ಸದಾಶಿವನಗರದಲ್ಲಿರುವ ಬಿಜೆಪಿ ಹಿರಿಯ ನಾಯಕ ಎಂ.ಎಸ್ ಕೃಷ್ಣರ ಮನೆಗೆ ತೆರಳಿ ಅವರನ್ನು ಭೇಟಿ ಮಾಡಿದ್ದು ಸುಮಲತಾ ಬಿಜೆಪಿ ಸೇರ್ಪಡೆ ವದಂತಿಗೆ ಇನ್ನಷ್ಟು ಇಂಬು ಸಿಕ್ಕಂತಾಗಿದೆ.
ಎಸ್.ಎಂ ಕೃಷ್ಣರನ್ನು ಸುಮಲತಾ ಭೇಟಿ ಮಾಡಿದ ಬಳಿಕ ಶುರುವಾರ ರಾಜಕೀಯ ಚರ್ಚೆಗಳಿಗೆ ಸ್ವತಃ ಸುಮಲತಾ ಅಂಬರೀಶ್ ಸ್ಪಷ್ಟನೆ ನೀಡಿದ್ದಾರೆ. ಎಸ್.ಎಂ ಕೃಷ್ಣರನ್ನು ಇಂದು ಭೇಟಿ ಮಾಡಿದ್ದರ ಹಿಂದೆ ಯಾವುದೇ ರಾಜಕೀಯ ಕಾರಣಗಳು ಇರಲಿಲ್ಲ. ಅವರಿಗೆ ಪದ್ಮವಿಭೂಷಣ ಗೌರವ ಸಿಕ್ಕಿರುವ ಹಿನ್ನೆಲೆಯಲ್ಲಿ ಅಭಿನಂದನೆ ಸಲ್ಲಿಸುವ ಸಲುವಾಗಿ ಎಸ್.ಎಂ ಕೃಷ್ಣರನ್ನು ಭೇಟಿ ಮಾಡಿದ್ದೇನೆ ಎಂದು ಹೇಳಿದ್ದಾರೆ.
ಬೆಂಗಳೂರಿನಲ್ಲಿ ಈ ವಿಚಾರವಾಗಿ ಮಾತನಾಡಿದ ಸಂಸದೆ ಸುಮಲತಾ, ನಮ್ಮ ಜಿಲ್ಲೆಯ ಹಿರಿಯ ನಾಯಕರಾದ ಎಸ್. ಎಂ ಕೃಷ್ಣರಿಗೆ ದೇಶದ ಎರಡನೇ ಅತ್ಯುನ್ನತ ಗೌರವ ಪ್ರಾಪ್ತಿಯಾಗಿದೆ. ಆದರೆ ಅವರನ್ನು ಮುಖತಃ ಭೇಟಿಯಾಗಿ ಅಭಿನಂದನೆ ಸಲ್ಲಿಸಲು ಇಲ್ಲಿಯವರೆಗೆ ಸಮಯಾವಕಾಶ ಸಿಕ್ಕಿರಲಿಲ್ಲ. ಇಂದು ಅದಕ್ಕೆ ಸಮಯ ಕೂಡಿ ಬಂದ ಹಿನ್ನೆಲೆಯಲ್ಲಿ ಎಸ್.ಎಂ ಕೃಷ್ಣರನ್ನು ಭೇಟಿ ಮಾಡಿದ್ದೇನೆ. ಈ ಭೇಟಿ ವೇಳೆ ಯಾವುದೇ ರಾಜಕೀಯ ಚರ್ಚೆ ನಡೆದಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.
ಬಿಜೆಪಿ ಸೇರ್ಪಡೆ ವಿಚಾರವಾಗಿಯೂ ಇದೇ ವೇಳೆ ಮಾತನಾಡಿದ ಅವರು. ಇದು ಕೇವಲ ನನ್ನೊಬ್ಬಳ ನಿರ್ಧಾರವಾಗಲು ಸಾಧ್ಯವಿಲ್ಲ. ನನ್ನ ಜೊತೆ ಇರುವವರ ಅಭಿಪ್ರಾಯಗಳನ್ನೂ ನಾನು ಪಡೆಯಬೇಕು. ಹೀಗಾಗಿ ಈ ಬಗ್ಗೆ ನಾನು ಇಲ್ಲಿಯವರೆಗೆ ಯಾವುದೇ ನಿರ್ಧಾರ ಕೈಗೊಂಡಿಲ್ಲ. ಈ ಹಿಂದೆ ನನಗೆ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುವಂತೆ ಸಲಹೆ ನೀಡಿದವರ ಜೊತೆ ಚರ್ಚಿಸಿ ತೀರ್ಮಾನ ಕೈಗೊಳ್ಳುವೆ ಎಂದು ಹೇಳಿದ್ದಾರೆ .