ಚಿಕ್ಕಬಳ್ಳಾಪುರ : ರಾಜ್ಯದಲ್ಲಿ ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಟಿಕೆಟ್ಗಾಗಿ ರಾಜಕಾರಣಿಗಳ ಸರ್ಕಸ್ ಜೋರಾಗಿದೆ. ಹಾಲಿ ಶಾಸಕರು, ಮಾಜಿ ಶಾಸಕರು ಹೀಗೆ ಪ್ರತಿಯೊಬ್ಬರು ಪಕ್ಷದ ವರಿಷ್ಠರ ಮನವೊಲಿಸುವಲ್ಲಿ ಬ್ಯುಸಿಯಾಗಿದ್ದಾರೆ. ಕಾಂಗ್ರೆಸ್ನಲ್ಲಿಯೂ ಇಂತದ್ದೇ ವಾತಾವರಣ ನಿರ್ಮಾಣಗೊಂಡಿದ್ದು ಮಾಜಿ ಶಾಸಕರು ಕಾಂಗ್ರೆಸ್ನ ಹಾಲಿ ಶಾಸಕರಿಗೆ ಸೆಡ್ಡು ಹೊಡೆಯಲು ಸಜ್ಜಾಗಿದ್ದಾರೆ .

ಸ್ವಪಕ್ಷದ ಶಾಸಕರು ಕ್ಷೇತ್ರದ ಅಭಿವೃದ್ಧಿ ಮಾಡುತ್ತಿಲ್ಲ ಎಂದು ಆರೋಪಿಸಿರುವ ಮಾಜಿ ಶಾಸಕರು ಈ ಬಾರಿ ತಮಗೆ ಪಕ್ಷದಿಂದ ಟಿಕೆಟ್ ನೀಡಬೇಕು. ಇಲ್ಲವಾದಲ್ಲಿ ತಾವು ಪಕ್ಷೇತರ ಸ್ಪರ್ಧಿಯಾಗಿ ಕಣಕ್ಕಿಳಿಯುತ್ತೇವೆ ಎಂದು ಪಕ್ಷದ ಹಿರಿಯ ನಾಯಕರಿಗೆ ಸವಾಲ್ ಹಾಕುತ್ತಿದ್ದಾರೆ ಎನ್ನಲಾಗಿದೆ. ಚಿಕ್ಕಬಳ್ಳಾಪುರದ ಬಾಗೆಪಲ್ಲಿ ಕ್ಷೇತ್ರದಲ್ಲಿ ಕಾಂಗ್ರೆಸ್ ಮಾಜಿ ಶಾಸಕ ಎನ್. ಸಂಪಂಗಿ ಹಾಲಿ ಶಾಸಕ ಎಸ್.ಎನ್ ಸುಬ್ಬಾರೆಡ್ಡಿ ಬದಲು ತಮಗೆ ಟಿಕೆಟ್ ನೀಡಬೇಕೆಂದು ಪಟ್ಟು ಹಿಡಿದಿದ್ದಾರೆ ಎನ್ನಲಾಗಿದೆ.

ನಾಳೆ ಬಾಗೆಪಲ್ಲಿಗೆ ಸಿದ್ದರಾಮಯ್ಯ ಹಾಗೂ ಡಿ.ಕೆ ಶಿವಕುಮಾರ್ ಭೇಟಿ ನೀಡಲಿದ್ದಾರೆ . ಇಬ್ಬರು ರಾಜ್ಯ ನಾಯಕರ ಭೇಟಿ ಹಿನ್ನೆಲೆಯಲ್ಲಿ ಬೆಂಬಲಿಗರ ಸಭೆ ಕರೆದಿರುವ ಸಂಪಂಗಿ ಬಂಡಾಯ ಬಾವುಟ ಹಾರಿಸಿದ್ದಾರೆ .ಹೀಗಾಗಿ ನಾಳೆ ಸಿದ್ದರಾಮಯ್ಯ ಹಾಗೂ ಡಿಕೆಶಿ ಎದುರು ಬಾಗೆಪಲ್ಲಿ ಕ್ಷೇತ್ರದ ಬಂಡಾಯ ಬಾವುಟ ಸ್ಫೋಟಗೊಳ್ಳುವ ಎಲ್ಲಾ ಸಾಧ್ಯತೆಯಿದೆ.
ನಾಳೆ ಸಾಮೂಹಿಕ ವಿವಾಹ ಸಮಾರಂಭ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಹಾಗೂ ಡಿ.ಕೆ ಶಿವಕುಮಾರ್ ಬಾಗೆಪಲ್ಲಿಗೆ ಆಗಮಿಸುತ್ತಿದ್ದಾರೆ. ಶಾಸಕ ಎಸ್.ಎನ್ ಸುಬ್ಬಾರೆಡ್ಡಿ 501 ಜೋಡಿಗಳಿಗೆ ನಾಳೆ ಸಾಮೂಹಿಕ ವಿವಾಹ ಕಾರ್ಯಕ್ರಮ ಆಯೋಜಿಸಿದ್ದು ಈ ಕಾರ್ಯಕ್ರಮಕ್ಕೆ ಡಿಕೆಶಿ ಹಾಗೂ ಸಿದ್ದು ಸಾಕ್ಷಿಯಾಗಲಿದ್ದಾರೆ.