ಬೆಂಗಳೂರು:ಏ.೦೪: ಕಾಂಗ್ರೆಸ್ನಲ್ಲಿ ಮುಖ್ಯಮಂತ್ರಿ ಸ್ಥಾನಕ್ಕೆ ಭಾರೀ ಪೈಪೋಟಿ ನಡೆಯುತ್ತಿದೆ. ಅದರಲ್ಲೂ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹಾಗು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ನಡುವೆ ಭಾರೀ ಕಸರತ್ತು ಶುರುವಾಗಿದೆ. ಆದರೂ ಮೇಲ್ನೋಟಕ್ಕೆ ಎಲ್ಲವೂ ಸರಿಯಿದೆ ಎಂದು ಹೇಳಿಕೊಳ್ಳುವ ಮೂಲಕ ಒಗ್ಗಟ್ಟಿನಲ್ಲಿ ಚುನಾವಣೆ ಗೆಲ್ಲುವ ರಣತಂತ್ರ ರೂಪಿಸಿದ್ದಾರೆ. ಇದು ಬಹಿರಂಗ ಸತ್ಯ ಆದರೂ ಇಬ್ಬರ ನಡುವೆ ಮುಸುಕಿನ ಗುದ್ದಾಟ ದಿನದಿಂದ ದಿನಕ್ಕೆ ಜೋರಾಗುತ್ತಿದೆ. ತಮ್ಮ ಹಿಂಬಾಲಕರಿಗೆ ಟಿಕೆಟ್ ಕೊಡಿಸಲು ಹರಸಾಹಸ ಮಾಡುತ್ತಿದ್ದಾರೆ. ಇದರ ನಡುವೆ ಸಿದ್ದರಾಮಯ್ಯ ಹೇಳಿದ್ದಾರೆ ಎನ್ನಲಾದ ಹೇಳಿಕೆಯೊಂದು ಕಾಂಗ್ರೆಸ್ ಗೆಲುವಿನ ಉತ್ಸಾಹದಲ್ಲಿ ಭಾರೀ ಸಂಚಲನ ಮೂಡಿಸಿದೆ. ಕಾಂಗ್ರೆಸ್ ಹೈಕಮಾಂಡ್ ಡಿ.ಕೆ.ಶಿವಕುಮಾರ್ ಅವರನ್ನು ಮುಖ್ಯಮಂತ್ರಿ ಮಾಡುವುದಿಲ್ಲ ಎಂದು ಸಂದರ್ಶನದಲ್ಲಿ ಹೇಳಿದ್ದಾರೆ ಎಂದು ವರದಿಯಾಗಿದೆ.
‘DK ಶಿವಕುಮಾರ್ನ ಸಿಎಂ ಮಾಡೋದಿಲ್ಲ’

NDTVಗೆ ನೀಡಿರುವ ಸಂದರ್ಶನದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ, ನಾನು ಮುಖ್ಯಮಂತ್ರಿ ಆಕಾಂಕ್ಷಿ ಆಗಿದ್ದೇನೆ. ಡಿ.ಕೆ ಶಿವಕುಮಾರ್ ಕೂಡ ಮುಖ್ಯಮಂತ್ರಿ ಆಕಾಂಕ್ಷಿಯಾಗಿದ್ದಾರೆ. ಅಂತಿಮವಾಗಿ ಆಯ್ಕೆಯಾಗಿ ಬಂದಂತಹ ಶಾಸಕರು ಶಾಸಕಾಂಗ ಪಕ್ಷದ ನಾಯನನ್ನು ಆಯ್ಕೆ ಮಾಡಲಿದ್ದಾರೆ. ಅಂತಿಮವಾಗಿ ಕಾಂಗ್ರೆಸ್ ಪಕ್ಷದ ಹೈಕಮಾಂಡ್ ಯಾರು ಮುಖ್ಯಮಂತ್ರಿ ಅನ್ನೋದನ್ನು ನಿರ್ಧಾರ ಮಾಡಲಿದೆ ಎಂದಿದ್ದಾರೆ. ಆದರೆ ಕಾಂಗ್ರೆಸ್ ಹೈಕಮಾಂಡ್ ಡಿ.ಕೆ ಶಿವಕುಮಾರ್ ಅವರನ್ನು ಮುಖ್ಯಮಂತ್ರಿ ಮಾಡೋದಿಲ್ಲ. ಹೈಕಮಾಂಡ್ ಒಪ್ಪಿಗೆ ಕೊಡುವುದಿಲ್ಲ ಎನ್ನುವ ರೀತಿಯ ವರದಿಗಳು ಬಂದಿದ್ದು, ವಿಪಕ್ಷ ನಾಯಕ ಸಿದ್ದರಾಮಯ್ಯ ಕೆಂಡಾಮಂಡಲರಾಗಿದ್ದಾರೆ. ನಾನು ಹೇಳಿರುವುದು ಸರಿಯಾಗಿದೆ. ಸುಳ್ಳು ಸುದ್ದಿ ಹಬ್ಬಿಸುತ್ತಿದ್ದಾರೆ ಎಂದು ಟ್ವಿಟ್ಟರ್ನಲ್ಲಿ ಚಾಟಿ ಬೀಸಿದ್ದಾರೆ.
ಅದಾನಿ ಮಾಧ್ಯಮ ಸಂಸ್ಥೆ ಎಂದು ಉಲ್ಲೇಖ..!

ಎನ್ಡಿಟಿವಿ ವರದಿಗೆ ಗರಂ ಆಗಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ನಾನು ಮುಖ್ಯಮಂತ್ರಿ ಆಯ್ಕೆ ಬಗ್ಗೆ ಮಾತನಾಡಿದ್ದೇನೆ. ಪ್ರಜಾಪ್ರಭುತ್ವದಲ್ಲಿ ಕಾಂಗ್ರೆಸ್ ಪಕ್ಷ ಮುಖ್ಯಮಂತ್ರಿ ಆಯ್ಕೆಯನ್ನು ಹೇಗೆ ಮಾಡುತ್ತದೆ ಎನ್ನುವುದನ್ನು ಹೇಳಿದ್ದೇನೆ. ಆದರೆ ಡಿ.ಕೆ ಶಿವಕುಮಾರ್ ಬಗ್ಗೆ ನಾನು ಯಾವುದೇ ಹೇಳಿಕೆ ನೀಡಿಲ್ಲ. ಕೂಡಲೇ ವರದಿಯನ್ನು ಡಿಲೀಟ್ ಮಾಡಿ ಅಸಲಿ ಮಾಹಿತಿಯನ್ನು ಪ್ರಕಟಿಸಬೇಕು ಎಂದು ಒತ್ತಾಯಿಸಿದ್ದಾರೆ. ಜೊತೆಗೆ ಅದಾನಿ ಸಂಸ್ಥೆ ಎಂದು ಎನ್ಡಿಟಿವಿ ಮಾಲೀಕತ್ವವನ್ನು ಉಲ್ಲೇಖಿಸಿ ಕಾಂಗ್ರೆಸ್ ಪಕ್ಷದ ವಿರುದ್ಧ ಮಾಡುತ್ತಿರುವ ಸಂಚು ಎನ್ನುವ ಅರ್ಥ ಬರುವಂತೆ ಟ್ವೀಟ್ ಮಾಡಿದ್ದಾರೆ. ಆದರೆ ಸಿದ್ದರಾಮಯ್ಯ ಮಾತಿನ ಬಳಿಕ ಎನ್ಡಿಟಿವಿ ಕೂಡ ಸ್ಪಷ್ಟನಾ ವರದಿ ಕೊಟ್ಟಿದ್ದು, ಅದರಲ್ಲಿ ಕೆಲವೊಂದು ಅಂಶಗಳು ಬಹಿರಂಗವಾಗಿವೆ.
ಅಸಲಿಗೆ ಸಿದ್ದರಾಮಯ್ಯ ಹೇಳಿದ್ದೇನು..? ಅಪಾರ್ಥ ಆಗಿದ್ಯಾಕೆ..?
ಮಹಾದಾಯಿ, ಹಿಜಾಬ್, ಮಠಗಳಿಗೆ ಸರ್ಕಾರದ ಅನುದಾನ, ಕಾಮಗಾರಿಗಳಿಗೆ ಅಕ್ರಮವಾಗಿ ಟೆಂಡರ್, ಬಿಜೆಪಿ ಸರ್ಕಾರದ 40 ಪರ್ಸೆಂಟೇಜ್ ಕಮಿಷನ್ ಬಗ್ಗೆ ಮಾತನಾಡಿರುವ ಸಿದ್ದರಾಮಯ್ಯ, ನಾವು ಈ ಬಾರಿ ಕರ್ನಾಟಕದಲ್ಲಿ ಅಧಿಕಾರಕ್ಕೆ ಬರುತ್ತೇವೆ ಎಂದಿದ್ದಾರೆ. ಜೊತೆಗೆ ಮೀಸಲಾತಿ ವಿಚಾರದಲ್ಲಿ ಹಿಂದುಳಿದ ಆಯೋಗದ ವರದಿ ಪಡೆದು ಮತ್ತೊಮ್ಮೆ ಪರಿಶೀಲನೆ ಮಾಡ್ತೇವೆ ಎಂದಿದ್ದಾರೆ. ಆದರೆ ಕೊನೆಯದಾಗಿ ಯುವಕರನ್ನು ಮುಖ್ಯಮಂತ್ರಿ ಮಾಡೋಣ ಎಂದು ಹೈಕಮಾಂಡ್ ನಿರ್ಧಾರ ಮಾಡಿದರೆ ನಿಮ್ಮ ನಡೆ ಏನು ಎಂದು ಪ್ರಶ್ನಿಸಿದ್ದಾರೆ. ಆಗ ಉತ್ತರ ಕೊಟ್ಟಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಇಲ್ಲ, ಅದು ಹಾಗೆ ಆಗುವುದಿಲ್ಲ, ಏಕೆಂದರೆ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸಾಗಬೇಕಿದೆ. ಹೈಕಮಾಂಡ್ ತನ್ನಷ್ಟಕ್ಕೆ ತಾನೇ ನಿರ್ಧಾರ ಮಾಡುವುದಿಲ್ಲ. ಆಯ್ಕೆಯಾದ ಶಾಸಕರ ಅಭಿಪ್ರಾಯಂತೆ ನಡೆಯುತ್ತದೆ ಎಂದಿದ್ದಾರೆ.
ಕೃಷ್ಣಮಣಿ