ಶತಮಾನಗಳಿಂದ ವರ್ಣಾಶ್ರಮದ ಹೆಸರಲ್ಲಿ ಶೋಷಣೆ ಮೂಲಕ ಶ್ರಮಜೀವಿಗಳ ಬೆವರಲ್ಲಿ ಪುಕ್ಕಟೆ ಉಂಡವರ ಚರ್ಮ ಬೆಳ್ಳಗಿರಬಹುದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಗುರುವಾರ (ಆಗಸ್ಟ್ 3) ಹೇಳಿದ್ದಾರೆ.
ಹಿರಿಯ ರಾಜಕಾರಣಿ ಹಾಗೂ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಕುರಿತು ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ನೀಡಿರುವ ಅವಹೇಳಿಕೆಗೆ ಪ್ರಿಯಾಂಕ್ ಅವರು ಕಿಡಿಕಾರಿದ್ದಾರೆ.
ಪ್ರಿಯಾಂಕ್ ಖರ್ಗೆಅವರು ಈ ಕುರಿತು ಟ್ವೀಟ್ ಮಾಡಿದ್ದು ಆರಗ ಜ್ಞಾನೇಂದ್ರ ಅವರ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. “ಸ್ವಾಭಿಮಾನದಿಂದ ದುಡಿದು ತಿನ್ನುವವರ ಮೈ ಬಿಸಿಲಲ್ಲಿ ಸುಟ್ಟಿರುತ್ತದೆ” ಎಂದು ಟ್ವೀಟ್ನಲ್ಲಿ ಪ್ರಿಯಾಂಕ್ ಖರ್ಗೆ ಕಿಡಿಕಾರಿದ್ದಾರೆ.
“ನೀವು ಆಡಿರುವ ಮಾತು ಬರೀ ನಿಮ್ಮ ಮಾತುಗಳಲ್ಲ, ಕೇಶವ ಕೃಪಾದ ಪ್ರಭಾವದ ಮಾತಾಗಿದೆ, ಬಿಜೆಪಿಯ ಆಂತರ್ಯದೊಳಗೆ ಅಡಗಿದ್ದ ಶೋಷಿತರ ಬಗೆಗಿನ ಅಸಹನೆ ಮಾತು ಇದಾಗಿದೆ” ಎಂದು ಟ್ವೀಟ್ನಲ್ಲಿ ಕುಟುಕಿದ್ದಾರೆ.
“ಸುಟ್ಟು ಕರಕಲಾಗಿದ್ದು ನಿಮ್ಮ ಬುದ್ದಿಯೇ ಹೊರತು ಕಲ್ಯಾಣ ಕರ್ನಾಟಕದ ಜನರಲ್ಲ. ಸ್ವಾಭಿಮಾನದಿಂದ ಬದುಕುವವರ ಚರ್ಮ ಬಿಸಿಲಲ್ಲಿ ಬೆಂದಿರುತ್ತದೆ” ಎಂದು ತಿರುಗೇಟು ನೀಡಿದ್ದಾರೆ.
“ಮನುಸ್ಮೃತಿ ಯ ವರ್ಣಾಶ್ರಮವನ್ನು ಮುದ್ದಾಡುವ ಬಿಜೆಪಿಯು ದಲಿತರ ರಾಜಕೀಯ ಏಳಿಗೆ ಬಗ್ಗೆ ತೀವ್ರ ಅಸಹನೆ ಇರುವುದು ಇಂತಹ ಮಾತುಗಳಿಂದ ಹೊರಬರುತ್ತವೆ. ಕರ್ನಾಟಕ ಬಿಜೆಪಿಯ ಈ ಅಸಹನೆ ಬಿಜೆಪಿಯನ್ನೇ ಸುಟ್ಟು ಕರುಕಲು ಮಾಡುತ್ತದೆ, ಏಕೆಂದರೆ ಇದು ಮನುಸ್ಮೃತಿ ಯ ಕಾಲವಲ್ಲ, ಬಾಬಾಸಾಹೇಬರ ಸಂವಿಧಾನದ ಕಾಲ” ಎಂದು ಟೀಕಿಸಿದ್ದಾರೆ.
ಈ ಸುದ್ದಿ ಓದಿದ್ದೀರಾ? ಗ್ಯಾರಂಟಿಗಳ ಯಶಸ್ವಿ ಜಾರಿಯಿಂದ ಕರ್ನಾಟಕ ಮಾದರಿ ಅಭಿವೃದ್ಧಿಗೆ ಹೈಕಮಾಂಡ್ ಮೆಚ್ಚುಗೆ
ಬಿಜೆಪಿ ಪ್ರತಿಭಟನೆ ವೇಳೆ ಖರ್ಗೆ ಅವರ ಬಣ್ಣದ ಬಗ್ಗೆ ವ್ಯಂಗ್ಯವಾಡಿದ್ದ ಆರಗ ಜ್ಞಾನೇಂದ್ರ, ಕಲ್ಯಾಣ ಕರ್ನಾಟಕ ಭಾಗದವರು ಸುಟ್ಟು ಕರಕಲಾಗಿರುತ್ತಾರೆ, ಖರ್ಗೆಯವರನ್ನ ನೋಡಿದರೆ ಗೊತ್ತಾಗುತ್ತದೆ ಎಂದು ಅವಹೇಳನ ಮಾಡಿದ್ದರು.
ಈ ಹೇಳಿಕೆ ವಿರುದ್ದ ಪ್ರಿಯಾಂಕ್ ಖರ್ಗೆ ಸೇರಿ ಇತರ ಕಾಂಗ್ರೆಸ್ ನಾಯಕರು ಬಿಜೆಪಿ ಶಾಸಕರ ವಿರುದ್ದ ಹರಿಹಾಯ್ದಿದ್ದರು. ಅಲ್ಲದೆ ಕಾಂಗ್ರೆಸ್ ಕಾರ್ಯಕರ್ತರು ಪೊಲೀಸ್ ಠಾಣೆಗೆ ದೂರು ಸಲ್ಲಿಸಿ ಕ್ರಮಕ್ಕೆ ಆಗ್ರಹಿಸಿದ್ದರು. ಆರಗ ಜ್ಞಾನೇಂದ್ರ ಅವರು ಕ್ಷಮೆಯಾಚಿಸಬೇಕು ಎಂದು ಕಾಂಗ್ರೆಸ್ ನಾಯಕರು ರಾಜ್ಯಾದ್ಯಂತ ಪ್ರತಿಭಟನೆ ನಡೆಸಿದ್ದರು.












