ವಸೂಲಿ ಆರೋಪದ ಬಗ್ಗೆ ಅಧಿಕಾರಿಗಳು ಕೃಷಿ ಸಚಿವ ಚಲುವರಾಯಸ್ವಾಮಿ ವಿರುದ್ಧ ರಾಜ್ಯಪಾಲರಿಗೆ ಬರೆದಿರುವ ದೂರಿನ ಪತ್ರ ಈಗ ರಾಜಕೀಯ ಕೆಸರೆರಚಾಟಕ್ಕೆ ಕಾರಣವಾಗಿದ್ದು, ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಮಂಗಳವಾರ (ಆಗಸ್ಟ್ 8) ಟೀಕಿಸಿದ್ದಾರೆ.
ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಕುಮಾರಸ್ವಾಮಿ ಅವರು, “ಅಧಿಕಾರಿಗಳ ವರ್ಗಾವಣೆಗೆ ಟಿಕ್ಕುಗಳ ಮೂಲಕ ಭ್ರಷ್ಟಾಚಾರಕ್ಕೆ ಬೆಂಬಲ ನೀಡುತ್ತಿದ್ದಾರೆ. ವರ್ಗಾವಣೆಗೆ ನಿಮ್ಮ ಟಿಕ್ಕುಗಳ ಲೆಕ್ಕ ಹೇಳಬೇಕಾ ಟಿಕ್ ಟಿಕ್ ಸಿದ್ಧರಾಮನಯ್ಯನವರೇ?” ಎಂದು ಲೇವಡಿ ಮಾಡಿದ್ದಾರೆ.
“ಮಂತ್ರಿಗಳ ಮಾನಗೇಡಿ ಕೃತ್ಯಗಳನ್ನೂ ಸಮರ್ಥನೆ ಮಾಡಿಕೊಳ್ಳುವ ಲಜ್ಜೆಗೇಡಿ ಮುಖ್ಯಮಂತ್ರಿ ಈ ರಾಜ್ಯಕ್ಕೆ ವಕ್ಕರಿಸಿದ್ದಾರೆ. ಸಚಿವರ ಸುಲಿಗೆಯನ್ನೇ ಸಿಗ್ಗಿಲ್ಲದೆ ಸಮರ್ಥನೆ ಮಾಡಿಕೊಳ್ಳುವ ಸಿದ್ದಕಲೆ ಅಸಹ್ಯ ಮತ್ತು ವಾಕರಿಕೆ ತರಿಸುತ್ತಿದೆ” ಎಂದು ಎಚ್.ಡಿ.ಕುಮಾರಸ್ವಾಮಿ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಸುದ್ದಿ ಓದಿದ್ದೀರಾ? ಸಚಿವ ಚಲುವರಾಯಸ್ವಾಮಿ ವಿರುದ್ಧ ಲಂಚ ಆರೋಪ | ರಾಜ್ಯಪಾಲರಿಗೆ ದೂರು
“ಅಧಿಕಾರಿಗಳ ದೂರಿನ ಪತ್ರ ನಕಲಿ ಎಂದಾದರೆ ರಾಜ್ಯಪಾಲರ ಕಾರ್ಯಾಲಯ ನಕಲಿ ಎಂದಾಗುತ್ತದೆ. ಪತ್ರದ ಮೇಲೆ ಕ್ರಮ ಜರುಗಿಸಿ ಎಂದು ರಾಜ್ಯಪಾಲರಿಗೆ ಹೇಳುವುದು ಸರಿಯಲ್ಲ. ರಾಜಧರ್ಮದ ಪ್ರವಚನಕಾರರೇ ರಾಜಭವನದ ಪಾವಿತ್ರ್ಯವನ್ನೇ ಶಂಕಿಸುವುದು ತರವೇ? ಸ್ವಯಂ ಘೋಷಿತ ನಕಲಿ ಸಂವಿಧಾನ ತಜ್ಞನಿಗೆ ಇದು ಭೂಷಣವಲ್ಲ” ಎಂದು ಕುಮಾರಸ್ವಾಮಿ ಅವರು ಚಾಟಿ ಬೀಸಿದ್ದಾರೆ.
“ನಿಮ್ಮ ಕಾಂಗ್ರೆಸ್ ಶಾಸಕರೇ ಬರೆದ ಪತ್ರವನ್ನು ನಕಲಿ ಎಂದು ನೀವು ಬಿಂಬಿಸಿದಿರಿ. ಶಾಸಕಾಂಗ ಪಕ್ಷದಲ್ಲಿ ಶಾಸಕರು ಈ ಬಗ್ಗೆ ಹೇಳಿದಾಗ ಆ ಪತ್ರವನ್ನು ಅಸಲಿಯಾಯಿತು” ಎಂದು ಎಚ್.ಡಿ.ಕುಮಾರಸ್ವಾಮಿ ಕುಹಕವಾಡಿದರು.