ಹಾಸನ: ಲೋಕಸಭಾ ಚುನಾವಣೆ ವೇಳೆ ಪ್ರಮಾಣ ಪತ್ರದಲ್ಲಿ ಆಸ್ತಿ ವಿವರ ಮುಚ್ಚಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ನಲ್ಲಿ ಇಂದು ತೀರ್ಪು ಪ್ರಕಟವಾಗಲಿದೆ.
ಸಂಸದ ಪ್ರಜ್ವಲ್ ರೇವಣ್ಣ ಅವರು 2018ರ ಲೋಕಸಭಾ ಚುನಾವಣೆ ವೇಳೆ ಪ್ರಮಾಣ ಪತ್ರದಲ್ಲಿ ಆಸ್ತಿ ವಿವರ ಮುಚ್ಚಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಹೈಕೋರ್ಟ್ ಪ್ರಜ್ವಲ್ ರೇವಣ್ಣ ಅವರ ಸಂಸತ್ ಸ್ಥಾನ ಅಸಿಂಧುಗೊಳಿಸಿ ಆದೇಶ ಹೊರಡಿಸಿತ್ತು. ಹೈಕೋರ್ಟ್ ತೀರ್ಪು ಪ್ರಶ್ನಿಸಿ ಪ್ರಜ್ವಲ್ ರೇವಣ್ಣ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದರು. ಹೀಗಾಗಿ ಹೈಕೋರ್ಟ್ ಆದೇಶಕ್ಕೆ ಸುಪ್ರೀಂಕೋರ್ಟ್ ತಾತ್ಕಾಲಿಕ ತಡೆ ನೀಡಿತ್ತು.
ಈ ಸಂಬಂಧ ಇಂದು ಸರ್ವೋಚ್ಚ ನ್ಯಾಯಾಲಯ ತೀರ್ಪು ಪ್ರಕಟಿಸಲಿದ್ದು, ಪ್ರಜ್ವಲ್ ರೇವಣ್ಣ ಅವರ ಸದಸ್ಯತ್ವ ಅಸಿಂಧು ಬಳಿಕ ಇಂದಿನ ತೀರ್ಪು ಭಾರೀ ಕುತೂಹಲ ಮೂಡಿಸಿದೆ. ಲೋಕಸಭಾ ಚುನಾವಣೆ ಹೊಸ್ತಿಲಲ್ಲಿ ಇಂದಿನ ತೀರ್ಪು ಮಹತ್ವ ಪಡೆದುಕೊಂಡಿದೆ. ಇಂದು ಮಾಜಿ ಪ್ರದಾನಿ ದೇವೇಗೌಡರ ಮೊಮ್ಮಗನ ಭವಿಷ್ಯ ಏನಾಗಲಿದೆ ಎಂಬುದನ್ನು ಸುಪ್ರೀಂಕೋರ್ಟ್ ತೀರ್ಪು ನಿರ್ಧರಿಸಲಿದ್ದು, ಹೀಗಾಗಿ ಎಲ್ಲರ ಕುತೂಹಲ ಹೆಚ್ಚುವಂತೆ ಮಾಡಿದೆ.
ಒಂದೊಮ್ಮೆ ಹೈಕೋರ್ಟ್ ಆದೇಶವನ್ನು ಸುಪ್ರೀಂಕೋರ್ಟ್ ಕೂಡ ಎತ್ತಿ ಹಿಡಿದರೆ ಪ್ರಜ್ವಲ್ ರೇವಣ್ಣ ಅವರು ಆರು ವರ್ಷ ಚುನಾವಣೆಗೆ ಸ್ಪರ್ಧೆ ಮಾಡಲು ಅವಕಾಶವೇ ಸಿಗದ ಆತಂಕ ಎದುರಾಗಿದೆ. ಇಂದಿನ ತೀರ್ಪು ದೊಡ್ಡಗೌಡರ ಕುಟುಂಬದ ಪಾಲಿಗೆ ಮಹತ್ವ ಪಡೆದುಕೊಂಡಿದ್ದು, ಹೈಕೋರ್ಟ್ನಲ್ಲಿ ಪ್ರಜ್ವಲ್ ರೇವಣ್ಣ ವಿರುದ್ಧ ವಕೀಲ ದೇವರಾಜೇಗೌಡ ಕಾನೂನು ಹೋರಾಟ ನಡೆಸಿದ್ದರು.