ಹಾಸನ: ಜಿಲ್ಲಾ ಉಸ್ತವಾರಿ ಸಚಿವ ಕೆ.ಎನ್.ರಾಜಣ್ಣ ಅವರ ವಿರುದ್ಧ ಮಾಜಿ ಸಚಿವ ಬಿ.ಶಿವರಾಂ ಬೆಂಬಲಿಗರು ತಮ್ಮ ಅಸಮಾಧಾನ, ಆಕ್ರೋಶ ಮುಂದುವರಿಸಿದ್ದಾರೆ. ಇಂದು ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಕಾಂಗ್ರೆಸ್ ಮೂಖಂಡರು, ರಾಜಣ್ಣ ಅವರ ಉದ್ಧಟತನದ ಹೇಳಿಕೆಯನ್ನು ಖಂಡಿಸಿದರು.
ಹಳೇಬೀಡು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಆನಂದ್ ದೇಶಾಣಿ ಮಾತನಾಡಿ, ಸಚಿವರು ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಹಾಗೂ ಕಾಂಗ್ರೆಸ್ ಕಾರ್ಯಕರ್ತರನ್ನು ಕಡೆಗಣಿಸಿರುವುದು ಸತ್ಯ ಎಂದರು.
ಬಿ.ಶಿವರಾಂ ಅವರು 40 ವರ್ಷಗಳಿಂದ ಜಿಲ್ಲೆಯಲ್ಲಿ ಪಕ್ಷ ಕಟ್ಟಿ ಬೆಳೆಸಿದ್ದಾರೆ. ಹಿರಿಯರಿದ್ದಾರೆ. ಅವರ ಬಗ್ಗೆ ರಾಜಣ್ಣ ಅವರು ಏಕವಚನದಲ್ಲಿ ಮಾತನಾಡಿರುವುದು ಜಿಲ್ಲೆಯ ಕಾಂಗ್ರೆಸ್ ಕಾರ್ಯಕರ್ತರಿಗೆ ನೋವುಂಟಾಗಿದೆ ಎಂದರು. ಸಚಿವರ ಹೇಳಿಕೆಯನ್ನು ಜಿಲ್ಲಾ ಕಾಂಗ್ರೆಸ್ ಮುಖಂಡರು ಖಂಡಿಸುತ್ತಿದ್ದೇವೆ ಎಂದು ಹೇಳಿದರು.
ಶಿವರಾಂ ಅವರ ಬಗ್ಗೆ ಜಿಲ್ಲಾ ಉಸ್ತವಾರಿ ಸಚಿವರು ಏಕವಚನ ಪದ ಬಳಕೆ ಮಾಡಿರುವುದು ಸರಿಯಲ್ಲ ಎಂದರು. ಅದೂ ಜೆಡಿಎಸ್ ಶಾಸಕರನ್ನು ಪಕ್ಕದಲ್ಲೇ ಕೂರಿಸಿಕೊಂಡು ಹೀಗೆ ಮಾತನಾಡಿರುವುದು ವಿಷಾದನೀಯ.ಕೇವಲ ಶಾಸಕ ಶಿವಲಿಂಗೇಗೌಡ ಅವರ ಮಾತು ಕೇಳಿ ಉಳಿದವರನ್ನು ನಿರ್ಲಕ್ಷ್ಯ ಮಾಡುವುದು ಸರಿಯಲ್ಲ. ಕೂಡಲೇ ಅವರು ತಮ್ಮ ಹೇಳಿಕೆಗೆ ವಿಷಾದ ವ್ಯಕ್ತಪಡಿಸಬೇಕು ಎಂದು ಆಗ್ರಹಿಸಿದರು.
ಇನ್ನಾದರೂ ಸಚಿವರು ತಮ್ಮ ಧೋರಣೆ ತಿದ್ದುಕೊಳ್ಳಬೇಕು. ಹಿರಿಯರಿಗೆ ಗೌರವ ಕೊಡುವ ಕೆಲಸ ಮಾಡಬೇಕು. ಅದು ಆಗದೇ ಇದ್ದರೆ ಮುಖ್ಯಮಂತ್ರಿ ಅವರೊಂದಿಗೆ ಮಾತನಾಡಿ ಹಾಸನ ಜಿಲ್ಲಾ ಉಸ್ತುವಾರಿ ಬಿಟ್ಟು ಹೋಗಲಿ, ಇದು ಅವರಿಗೂ ಕ್ಷೇಮ, ಪಕ್ಷಕ್ಕೂ ಕ್ಷೇಮ ಎಂದು ಹೇಳಿದರು. ಇಲ್ಲವಾದರೆ ಮುಂದಿನ ಲೋಕಸಭಾ ಚುಣಾವಣೆಯಲ್ಲಿ ಕಷ್ಟವಾಗಲಿದೆ. ರಾಜ್ಯ ನಾಯಕರು ಈ ಬಗ್ಗೆ ಗಮನ ಹರಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿದರು. ಇಲ್ಲವಾದರೆ ನಾನು ಪ್ರತಿಭಟನೆಗೂ ಇಳಿಯಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು. ಪತ್ರಿಕಾಗೋಷ್ಟಿಯಲ್ಲಿ ಬೇಲೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನಿಶಾಂತ್, ಸಫಾಯಿ ಕರ್ಮಚಾರಿ ಆಯೋಗದ ಮಾಜಿ ಅಧ್ಯಕ್ಷ ಎಂ.ಆರ್. ವೆಂಕಟೇಶ್ ಮೊದಲಾದವರಿದ್ದರು.