ಹೊಂಬಾಳೆ ಫಿಲಂಸ್ ನ ಗೆಲುವಿನ ಓಟಕ್ಕೆ ಮತ್ತೊಂದು ಚಿತ್ರ ಸೇರ್ಪಡೆ .
ವಿಶ್ವವೇ ಕನ್ನಡ ಚಿತ್ರರಂಗದತ್ತ ತಿರುಗಿ ನೋಡುವಂತಹ ಕೆ.ಜಿ.ಎಫ್, ಕಾಂತಾರ, ರಾಜಕುಮಾರ ದಂತಹ ಯಶಸ್ವಿ ಚಿತ್ರಗಳ ನಿರ್ಮಾಣ ಸಂಸ್ಥೆ ಹೊಂಬಾಳೆ ಫಿಲಂಸ್ ಲಾಂಛದಡಿಯಲ್ಲಿ ವಿಜಯ್ ಕಿರಗಂದೂರ್ ನಿರ್ಮಿಸಿರುವ, ಸಂತೋಷ್ ಆನಂದರಾಮ್ ನಿರ್ದೇಶನದಲ್ಲಿ ಯುವ ರಾಜಕುಮಾರ್ ನಾಯಕರಾಗಿ ನಟಿಸಿರುವ ಮೊದಲ ಚಿತ್ರ “ಯುವ” ರಾಜ್ಯಾದ್ಯಂತ ಯಶಸ್ವಿಯಾಗಿ ಪ್ರದರ್ಶನವಾಗುತ್ತಿದೆ. ಈ ಮೂಲಕ ಹೊಂಬಾಳೆ ಫಿಲಂಸ್ ನ ಗೆಲುವಿನ ಓಟಕ್ಕೆ ಮತ್ತೊಂದು ಚಿತ್ರ ಸೇರ್ಪಡೆಯಾಗಿದೆ. ಈ ಯಶಸ್ಸಿನ ಸಂಭ್ರಮವನ್ನು ಸಂಭ್ರಮಿಸಲು ಚಿತ್ರತಂಡ ಪತ್ರಿಕಾಗೋಷ್ಠಿ ಆಯೋಜಿಸಿತ್ತು.

ರಾಜ್ಯದ ಜನತೆ “ಯುವ” ಚಿತ್ರವನ್ನು ಭರ್ಜರಿಯಾಗಿ ಸ್ವಾಗತಿಸಿದ್ದಾರೆ. ಚಿತ್ರ ಮೂರನೇ ವಾರಕ್ಕೆ ಕಾಲಿಟ್ಟಿದೆ. ಈಗಲೂ ಜನ ಕುಟುಂಬ ಸಮೇತ ಬಂದು ಸಿನಿಮಾ ನೋಡುತ್ತಿದ್ದಾರೆ. ಕನ್ನಡ ಕಲಾರಸಿಕರಿಗೆ, ಮಾಧ್ಯಮದವರಿಗೆ, ಹೊಂಬಾಳೆ ಫಿಲಂಸ್ ಸಂಸ್ಥೆಗೆ ಹಾಗೂ ನನ್ನ ಇಡೀ ಚಿತ್ರತಂಡಕ್ಕೆ ಈ ಸಂದರ್ಭದಲ್ಲಿ ಧನ್ಯವಾದ ತಿಳಿಸುತ್ತೇನೆ ಎಂದರು ನಿರ್ದೇಶಕ ಸಂತೋಷ್ ಆನಂದರಾಮ್.

ಜನರು ನನ್ನ ಮೊದಲ ಚಿತ್ರಕ್ಕೆ ತೋರುತ್ತಿರುವ ಒಲವಿಗೆ ಮನ ತುಂಬಿ ಬಂದಿದೆ ಎಂದು ಮಾತನಾಡಿದ ನಾಯಕ ಯುವ ರಾಜಕುಮಾರ್, ಪ್ರಥಮವಾಗಿ ನಾನು ನನಗೆ ಅವಕಾಶ ನೀಡಿದ ಹೊಂಬಾಳೆ ಸಂಸ್ಥೆಯ ವಿಜಯ್ ಕಿರಗಂದೂರ್ ಅವರಿಗೆ, ನಿರ್ದೇಶಕ ಸಂತೋಷ್ ಆನಂದರಾಮ್ ಅವರಿಗೆ ಕೃತಜ್ಞತೆ ತಿಳಿಸುತ್ತೇನೆ. ನನ್ನ ಸಹ ಕಲಾವಿದರ ಹಾಗೂ ತಂತ್ರಜ್ಞರ ಪ್ರೋತ್ಸಾಹವನ್ನು ಈ ಸಮಯದಲ್ಲಿ ನೆನೆಯುತ್ತೇನೆ. ಮೊದಲ ಚಿತ್ರದಲ್ಲಿ ನನ್ನಿಂದೇನಾದರೂ ಸಣ್ಣಪುಟ್ಟ ತಪ್ಪಾಗಿದ್ದರೆ ಮುಂದಿನ ಚಿತ್ರಗಳಲ್ಲಿ ಸರಿ ಪಡಿಸಿಕೊಳ್ಳುತ್ತೇನೆ. ಜನ ಫ್ಯಾಮಿಲಿ ಸಮೇತ ಬಂದು ಚಿತ್ರವನ್ನು ನೋಡುತ್ತಿರುವುದು ಬಹಳ ಖುಷಿಯಾಗಿದೆ. ಈ ಮೂಲಕ ರಾಜ್ಯದ ಜನತೆಗೆ ವಿಶೇಷ ಧನ್ಯವಾದ ತಿಳಿಸುತ್ತೇನೆ ಎಂದರು.

ನನ್ನ ಮಗನ ಮೊದಲ ಚಿತ್ರವನ್ನು ನಿರ್ಮಾಣ ಮಾಡಿದ ಹೊಂಬಾಳೆ ಸಂಸ್ಥೆಗೆ ಮೊದಲು ಧನ್ಯವಾದ ಹೇಳುತ್ತೇನೆ. ನಂತರ ನನ್ನ ಮಗನ ಒಂದು ಬ್ರಾಂಡ್ ಗೆ ಸೀಮಿತ ಮಾಡದೆ ಎಲ್ಲಾ ರೀತಿಯ ನಟನೆಯನ್ನು ಅವನಿಂದ ಎಲ್ಲಾ ರೀತಿಯ ನಟನೆಯನ್ನು ಮಾಡಿಸಿರುವ ನಿರ್ದೇಶಕ ಸಂತೋಷ್ ಆನಂದರಾಮ್ ಅವರಿಗೂ ಧನ್ಯವಾದ ಹೇಳುತ್ತಾ, ಯುವನ ಸಿನಿಮಾ ಹಾದಿ ಈಗಷ್ಟೇ ಆರಂಭವಾಗಿದೆ. ಮುಂದೆ ಬೇರೆಬೇರೆ ಪಾತ್ರಗಳಲ್ಲಿ ಅವನು ನಟಿಸಿ ಜನರಿಂದ ಸೈ ಎನಿಸಿಕೊಳ್ಳಬೇಕು ಎಂದು ರಾಘವೇಂದ್ರ ರಾಜಕುಮಾರ್ ತಿಳಿಸಿದರು.

ಒಳ್ಳೆಯ ಪಾತ್ರ ನೀಡಿದ್ದಕ್ಕೆ ನಾಯಕಿ ಸಪ್ತಮಿ ಗೌಡ ನಿರ್ಮಾಪಕರಿಗೆ ಹಾಗೂ ನಿರ್ದೇಶಕರಿಗೆ ಧನ್ಯವಾದ ಹೇಳಿದರು


ಚಿತ್ರದಲ್ಲಿ ಅಭಿನಯಿಸಿರುವ ಅಚ್ಯುತಕುಮಾರ್, ಸುಧಾರಾಣಿ, ಗೋಪಾಲಕೃಷ್ಣ ದೇಶಪಾಂಡೆ, ರವಿಶಂಕರ್ ಗೌಡ, ರಾಘು ಶಿವಮೊಗ್ಗ ಹಾಗೂ ಛಾಯಾಗ್ರಾಹಕ ಶ್ರೀಶ ಕುದುವಳ್ಳಿ “ಯುವ” ಚಿತ್ರದ ಗೆಲುವನ್ನು ತಮ್ಮ ಮಾತುಗಳ ಮೂಲಕ ಹಂಚಿಕೊಂಡರು.








