
‘ಲೋಕ’ ಎಲೆಕ್ಷನ್ ಹತ್ತಿರವಾಗ್ತಿದ್ದಂತೆ ನಾಯಕರ ನಡುವಿನ ವಾಕ್ಸಮರ ಜೋರಾಗಿದೆ. ಸಿಎಂ ಸಿದ್ದು ನೇತೃತ್ವದ ಕಾಂಗ್ರೆಸ್ ಸರ್ಕಾರದ ವಿರುದ್ಧ ಮಾಜಿ ಸಚಿವ ಸಿಟಿ ರವಿ ಹರಿಹಾಯ್ದಿದ್ದಾರೆ. ಜನರ ಹಿತ ಮತ್ತು ರಾಜ್ಯದ ನೆಮ್ಮದಿಗಿಂತ ಕಾಂಗ್ರೆಸ್ಗೆ ವೋಟ್ ಬ್ಯಾಂಕ್ ರಾಜಕಾರಣವೇ ಮುಖ್ಯವಾಗಿದೆ. ತಾಲಿಬಾನ್ ಆಡಳಿತದ ಟ್ರೇಲರ್ ರಾಜ್ಯದಲ್ಲಿ ಬಿಡುಗಡೆ ಮಾಡುತ್ತಿರುವ ಕಾಂಗ್ರೆಸ್ ಪಕ್ಷ ಸಂವೇದನಾ ರಹಿತವಾಗಿ ವರ್ತಿಸುತ್ತಿದೆ. ಇಂತಹ ಪರಿಸ್ಥಿತಿಯಲ್ಲಿ ಕರ್ನಾಟಕದಲ್ಲಿ ಸರ್ವ ಜನಾಂಗದ ಶಾಂತಿಯ ತೋಟ ಎಲ್ಲಿದೆ ಎಂದು ಮಾಜಿ ಸಚಿವ ಸಿ.ಟಿ.ರವಿ ಪ್ರಶ್ನಿಸಿದರು. ಒಂದೆಡೆ ಪ್ರಧಾನಿ ಮೋದಿಯವರು ಅಭಿವೃದ್ಧಿಯ ಟ್ರೇಲರ್ ಮಾದರಿಯನ್ನು ಮುಂದಿಟ್ಟಿದ್ದಾರೆ. ಆದರೆ, ಚುನಾವಣೆ ಗೆಲ್ಲುವ ಕರ್ಯಿತಂತ್ರಕಷ್ಟೇ ಸೀಮಿತವಾಗಿರುವ ಕಾಂಗ್ರೆಸ್ನ ಓಲೈಕೆ ರಾಜನೀತಿಯ ಪರಿಣಾಮ ರಾಜ್ಯದಲ್ಲಿನ ಆಡಳಿತವು ತಾಲಿಬಾನ್ ಮಾದರಿಯ ಆಡಳಿತವನ್ನು ನೆನಪಿಸುತ್ತಿದೆ ಎಂದು ನಗರದ ಖಾಸಗಿ ಹೋಟೆಲ್ನಲ್ಲಿ ಮಂಗಳವಾರ ನಡೆದ ಸುದ್ದಿಗೋಷ್ಠಿಯಲ್ಲಿ ಅವರು ಆತಂಕ ವ್ಯಕ್ತಪಡಿಸಿದರು. ಹನುಮಾನ್ ಚಾಲೀಸಾ ಹಾಕಿದ್ದಕ್ಕೆ ಯುವಕನನ್ನು ಅಂಗಡಿಯಿಂದ ಹೊರಗೆ ಎಳೆದೊಯ್ದು ಹಲ್ಲೆ ನಡೆಸಲಾಗಿದೆ. ಜೈಶ್ರೀರಾಮ್ ಘೋಷಣೆ ಕೂಗಿದ್ದಕ್ಕೆ ಕಾರು ಪ್ರಯಾಣಿಕರನ್ನು ಅಡ್ಡಗಟ್ಟಿ ಹಲ್ಲೆ ಮಾಡಲಾಗಿದೆ. ಮೋದಿ ಪರ ರೀಲ್ಸ್ ಮಾಡಿದ್ದಕ್ಕೆ ಮೈಸೂರಿನಲ್ಲಿ ಯುವಕನ ಮೇಲೆ ಮೂತ್ರ ವಿಸರ್ಜಿಸಿ ಮಾರಣಾಂತಿಕ ಹಲ್ಲೆ ನಡೆಸಲಾಗಿದೆ. ವಿದ್ಯಾರ್ಥಿನಿ ನೇಹಾ ಹಿರೇಮಠ ಅವರನ್ನು ಕಾಲೇಜು ಆವರಣದಲ್ಲೇ ಬರ್ಬರವಾಗಿ ಕೊಲೆ ಮಾಡಲಾಗಿದೆ. ಕೇಸರಿ ಶಾಲು ಹಾಕಿದ್ದಕ್ಕೆ ಯುವಕನ ಮೇಲೆ ಕಾರು ಹರಿಸಿ ಕೊಲೆ ಮಾಡಲಾಗಿದೆ. ಯಾದಗಿರಿಯಲ್ಲಿ ದಲಿತ ಯುವಕನ ಹತ್ಯೆ ನಡೆದಿದೆ. ಇದೇನಾ ಸರ್ವ ಜನಾಂಗದ ಶಾಂತಿಯ ತೋಟ? ಇಂತಹ ಸಂದಿಗ್ಧ ಪರಿಸ್ಥಿತಿಯಲ್ಲಿ ರಾಜ್ಯ ಸರ್ಕಾರ ಹೇಗೆ ನಡೆದುಕೊಳ್ಳುತ್ತಿದೆ ಎಂದು ಮರು ಪ್ರಶ್ನೆ ಮಾಡಿದರು.