
ಬೆಂಗಳೂರು: ರಾಜ್ಯದ ಖಾಸಗಿ ಉದ್ಯಮಗಳ ಉದ್ಯೋಗದಲ್ಲಿ ಕನ್ನಡಿಗರಿಗೆ ಮೀಸಲಾತಿ ನೀಡುವ ಮಸೂದೆಯನ್ನು ಮಂಡಿಸಿ ಜಾರಿ ಮಾಡಲು ಹೊರಟಿದ್ದ ರಾಜ್ಯ ಸರ್ಕಾರವು ಒಂದೇ ದಿನದಲ್ಲಿ ‘ಯೂ ಟರ್ನ್’ ತೆಗೆದುಕೊಂಡು ಮಸೂದೆ ತಡೆ ಹಿಡಿದಿರುವುದನ್ನು ಹಲವು ಸಂಘಟನೆಗಳು ಖಂಡಿಸಿವೆ. ಕನ್ನಡಿಗರ ಹಿತ ಕಾಪಾಡಲು ಆಗ್ರಹಿಸಿವೆ.
ಕರವೇ: ಮಸೂದೆ ತಡೆಹಿಡಿದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯರ ಕ್ರಮವನ್ನು ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ ವಿರೋಧಿಸಿದ್ದಾರೆ. 15 ದಿನಗಳ ಒಳಗೆ ಸಚಿವ ಸಂಪುಟ ಸಭೆ ನಡೆಸಿ ಕನ್ನಡಿಗರ ಪರ ನಿರ್ಧಾರ ಕೈಗೊಳ್ಳದೇ ಹೋದರೆ ರಾಜ್ಯದಾದ್ಯಂತ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಸಿದ್ದಾರೆ.ಈ ಬಗ್ಗೆ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ‘ಖಾಸಗಿ ಕೈಗಾರಿಕೆಗಳು ಮತ್ತು ಇತರೆ ಸಂಸ್ಥೆಗಳಲ್ಲಿ ಕನ್ನಡಿಗರಿಗೆ ಆಡಳಿತ್ಮಾತಕ ಹುದ್ದೆಗಳಿಗೆ ಶೇ 50 ಹಾಗೂ ಆಡಳಿತಾತ್ಮಕವಲ್ಲದ ಹುದ್ದೆಗಳಿಗೆ ಶೇ 75ರಷ್ಟು ಮೀಸಲಾತಿ ನಿಗದಿಪಡಿಸಿದ್ದ ಮಸೂದೆಗೆ ಸೋಮವಾರ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿತ್ತು.
ಬಳಿಕ ಕಾರ್ಪೋರೇಟ್ಗಳ ಒತ್ತಡಕ್ಕೆ ಮಣಿದ ಸರ್ಕಾರವು ಮಸೂದೆಯನ್ನು ತಡೆಹಿಡಿಯುವ ಆತ್ಮಘಾತುಕ ನಿರ್ಧಾರ ಮಾಡಿದೆ’ ಎಂದು ಟೀಕಿಸಿದ್ದಾರೆ.ಮಸೂದೆ ವಿರೋಧಿಸುವ ನೆಪದಲ್ಲಿ ಉದ್ಯಮಿ ಮೋಹನ್ದಾಸ್ ಪೈ ಸೇರಿದಂತೆ ಕೆಲವು ಉದ್ಯಮಿಗಳು ಕನ್ನಡಿಗರಿಗೆ ಕೌಶಲ ಇಲ್ಲ, ಅರ್ಹತೆ ಇಲ್ಲ ಎಂದೆಲ್ಲ ಹೇಳಿಕೆ ನೀಡುತ್ತಿದ್ದಾರೆ. ಕನ್ನಡಿಗರ ಅವಹೇಳನ ಮುಂದುವರಿಸಿದರೆ ಅವರಿಗೆ ಪಾಠ ಕಲಿಸಬೇಕಾಗುತ್ತದೆ’ ಎಂದು ಎಚ್ಚರಿಸಿದರು.ವಿಕಾಸ ರಂಗ: ಕೇರಳ, ತಮಿಳುನಾಡು, ಪಂಜಾಬ್, ಮಹಾರಾಷ್ಟ್ರ, ಗುಜರಾತ್, ಆಂಧ್ರಪ್ರದೇಶಗಳಲ್ಲಿ ಖಾಸಗಿ ಸಂಸ್ಥೆಗಳಲ್ಲಿ ಸ್ಥಳೀಯರಿಗೆ ಮೀಸಲಾತಿ ಇದೆ. ಕರ್ನಾಟಕದಲ್ಲಿ ಖಾಸಗಿ ಸಂಸ್ಥೆಗಳ ಮಾಲೀಕರು ಸರ್ಕಾರಕ್ಕೆ ಬೆದರಿಕೆ ಒಡ್ಡುತ್ತಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಕನ್ನಡಿಗರ ಪರ ಬರೀ ಮಾತನಾಡಿದರೆ ಸಾಲದು. ಮಸೂದೆ ಅಂಗೀಕರಿಸಿ ಅನುಷ್ಠಾನಕ್ಕೆ ತರಬೇಕು ಎಂದು ಕರ್ನಾಟಕ ವಿಕಾಸ ರಂಗದ ಅಧ್ಯಕ್ಷ ವ.ಚ. ಚನ್ನೇಗೌಡ ಆಗ್ರಹಿಸಿದ್ದಾರೆ.ಮಹಿಷಿ ವರದಿ ಅನುಷ್ಠಾನಗೊಳಿಸಿ: ಬಿಳಿಮಲೆ:’ಕನ್ನಡಿಗರಿಗೆ ಖಾಸಗಿ ವಲಯದಲ್ಲಿ ಉದ್ಯೋಗಾವಕಾಶ ಒದಗಿಸುವ ಸಂಬಂಧ ಸರೋಜಿನಿ ಮಹಿಷಿ ವರದಿಯನ್ನು ಅನುಷ್ಠಾನಗೊಳಿಸಬೇಕು’ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪುರುಷೋತ್ತಮ ಬಿಳಿಮಲೆ ಮನವಿ ಮಾಡಿದ್ದಾರೆ. ‘ರಾಜ್ಯದಲ್ಲಿ ಕೇಂದ್ರೋದ್ಯಮಗಳು ಸಾರ್ವಜನಿಕ ಹಾಗೂ ಖಾಸಗಿ ಉದ್ಯಮಗಳಿದ್ದರೂ ಕನ್ನಡಿಗರಿಗೆ ಸೂಕ್ತ ಪ್ರಮಾಣದಲ್ಲಿ ಉದ್ಯೋಗಾವಕಾಶ ದೊರೆಯುತ್ತಿಲ್ಲ.
ಕನ್ನಡಿಗರಿಗೆ ಉದ್ಯೋಗದಲ್ಲಿ ಅವಕಾಶ ಸಿಗುವಂತೆ ಮಾಡಲು ಸರ್ಕಾರವು 1981ರಿಂದಲೂ ಪ್ರಯತ್ನ ನಡೆಸಿದೆ. ಅಂದಿನ ಸರ್ಕಾರ ಸರೋಜಿನಿ ಮಹಿಷಿ ನೇತೃತ್ವದಲ್ಲಿ ಸಮಿತಿ ರಚನೆ ಮಾಡಿತ್ತು. ‘ಸ್ಥಳೀಯರಿಗೆ ಉದ್ಯೋಗ’ ಶಿಫಾರಸು ಇರುವ ಸಮಿತಿ ವರದಿಯನ್ನು ನೀಡಿತ್ತು. ಈ ವರದಿಯನ್ನು ಗಮನಿಸಿ ಬೇರೆ ರಾಜ್ಯಗಳು ಕಾನೂನು ರಚಿಸಿವೆ. ರಾಜ್ಯದಲ್ಲಿ ಮಹಿಷಿ ವರದಿಯನ್ನು ಜಾರಿ ಮಾಡಬೇಕು’ ಎಂದು ಒತ್ತಾಯಿಸಿದ್ದಾರೆ.




