
ದಕ್ಷಿಣ ಕನ್ನಡ ಸೇರಿದಂತೆ ಕರಾವಳಿ ಜಿಲ್ಲೆಗಳಲ್ಲಿ ಅಬ್ಬರಿಸುತ್ತಿರುವ ಮುಂಗಾರು ಮಳೆ ಅನೇಕ ಅವಾಂತರಗಳನ್ನು ಸೃಷ್ಟಿಸಿದೆ. ಮಲೆನಾಡಿನ ಭಾಗದಲ್ಲೂ ಭಾರೀ ಮಳೆ ಆಗುತ್ತಿದ್ದು, ನೂರಾರು ಮರಗಳು ಧರೆಗುರುಳಿವೆ. ಚಿಕ್ಕಮಗಳೂರು ಹಾಗೂ ಮಂಗಳೂರು ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿಯಲ್ಲಿ ಬೃಹತ್ ಮರಗಳು ಬಿದ್ದು ಅವಾಂತರವೇ ಆಗಿದೆ. NH-73 ಸಂಚಾರ ಸಂಪೂರ್ಣ ಬಂದ್ ಆಗಿದೆ. ಇದಿಷ್ಟೇ ಅಲ್ಲ, ಮರ ಬಿದ್ದಿದ್ದರಿಂದ ವಿದ್ಯುತ್ ಸಂಪರ್ಕವೂ ಕಡಿತಗೊಂಡಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ತಾಲೂಕಿನ ಜೋಕಟ್ಟೆ ಬಳಿ ಮನೆ ಪಕ್ಕದ ತಡೆಗೋಡೆ ಕುಸಿದು ಸಂಭವಿಸಿದ ಅವಘಡದಲ್ಲಿ ಮೂಲ್ಕಿ ಕೊಲ್ನಾಡಿನ ಲಿಂಗಪ್ಪಯ್ಯ ಕಾಡು ನಿವಾಸಿ ಶೈಲೇಶ್(17) ಮೃತಪಟ್ಟಿದ್ದಾರೆ.
ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಬಳ್ಕೂರಿನಲ್ಲಿ ಮನೆಯ ಮೇಲೆ ಮರ ಬಿದ್ದು ಹಾನಿಯಾಗಿದೆ. ಪರಿಣಾಮವಾಗಿ ಕುಟುಂಬಸ್ಥರು ಕಣ್ಣೀರು ಹಾಕುವಂತಾಗಿದೆ. ಹೇಗಾದರೂ ಮಾಡಿ ನಮಗೆ ಪರಿಹಾರ ಕೊಡಿಸಿ ಅಳಲು ತೋಡಿಕೊಳ್ಳುತ್ತಿದ್ದಾರೆ. ಇದಿಷ್ಟೇ ಅಲ್ಲ, ಇನ್ನೊಂದು ಮನೆಯ ಮೇಲೆ ಅಡಕೆ ಮರಗಳು ಬಿದ್ದು ಅವಾಂತರ ಆಗಿದೆ. ಮರ ಬಿದ್ದಿದ್ದರಿಂದ ಮನೆಯ ಪಕ್ಕದಲ್ಲಿರೋ ವಿದ್ಯುತ್ ಕಂಬಕ್ಕೂ ಹಾನಿಯಾಗಿದೆ. ಮನೆಯ ಕಾಂಪೌಂಡ್ ಕೂಡ ನಾಶವಾಗಿದೆ.












