ಬೆಂಗಳೂರ: “ರಾಜಕೀಯವನ್ನು ಬೂತ್ ಮಟ್ಟದಲ್ಲಿ ಮಾಡೋಣ, ಈಗ ಎಲ್ಲಾ ಪಕ್ಷದ ನಾಯಕರು ಸೇರಿ ಬೆಂಗಳೂರನ್ನು ಕಟ್ಟೋಣ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಕರೆ ನೀಡಿದರು.
ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ “ನಾಗರೀಕರ ಧ್ವನಿ- ಅದೇ ಸರ್ಕಾರದ ಧ್ವನಿ” ಎಂಬ ಪರಿಕಲ್ಪನೆಯಡಿ ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆದ ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ನೇತೃತ್ವದಲ್ಲಿ ಬೆಂಗಳೂರಿನ ವಿವಿಧ ಯೋಜನೆಗಳ ಬಗ್ಗೆ ಬೆಂಗಳೂರಿನ ಸರ್ವ ಪಕ್ಷ ಶಾಸಕರುಗಳು ಹಾಗೂ ಜನಪ್ರತಿನಿಧಿಗಳ ಸಭೆಯನ್ನು ಶನಿವಾರ ನಡೆಸಲಾಯಿತು.ಈ ಸಭೆಯನ್ನು ಉದ್ದೇಶಿಸಿ ಪ್ರಾಸ್ತಾವಿಕವಾಗಿ ಮಾತನಾಡಿದ ಶಿವಕುಮಾರ್ ಅವರು, “ಗ್ರೇಟರ್ ಬೆಂಗಳೂರು ವಿಚಾರವಾಗಿ ಅಶ್ವಥ್ ನಾರಾಯಣ ಅವರು ಗಾಬರಿಯಾಗುವುದು ಬೇಡ, ವಿಧೇಯಕದ ಸಂಪೂರ್ಣ ಮಾಹಿತಿ ನಿಮ್ಮ ಕೈಯಲ್ಲಿದೆ. ಪ್ರತಿ ಪದವನ್ನೂ ಪರಿಶೀಲಿಸಿ.
ಬೆಂಗಳೂರಿನ ಭವಿಷ್ಯದ ಹಿತ ಕಾಯಲು ಅಗತ್ಯವಾದ ಎಲ್ಲಾ ಕ್ರಮಗಳನ್ನು ಗ್ರೇಟರ್ ಬೆಂಗಳೂರಿನಲ್ಲಿ ಕೈಗೊಂಡಿದ್ದೇವೆ. ನೀವು ಚರ್ಚೆ ಮಾಡಿ, ನಿಮ್ಮ ಸಲಹೆ ಸೂಚನೆ ಪರಿಗಣಿಸುತ್ತೇವೆ. ನಿಮ್ಮೆಲ್ಲರ ಒತ್ತಾಯದಂತೆ ಗ್ರೇಟರ್ ಬೆಂಗಳೂರು ವಿಚಾರವಾಗಿ ಸದನ ಸಮಿತಿ ರಚಿಸಲು ತೀರ್ಮಾನಿಸಿದ್ದೇವೆ” ಎಂದರು.”ವಿರೋಧ ಪಕ್ಷದ ನಾಯಕರು ಇಲ್ಲೇ ಇದ್ದು, ಅವರು ನಿಮ್ಮ ಪಕ್ಷದಿಂದ ಸಮಿತಿಗೆ ಹೆಸರು ಶಿಫಾರಸ್ಸು ಮಾಡಿದರೆ ಇಂದು ಸಂಜೆಯೇ ಸಮಿತಿ ರಚಿಸಿ ಅದನ್ನು ಅಧಿಕೃತವಾಗಿ ಘೋಷಣೆ ಮಾಡಬಹುದು.
ಇಂದು ಈ ಎಲ್ಲಾ ವಿಚಾರವಾಗಿ ಎಷ್ಟು ಹೊತ್ತು ಬೇಕಾದರೂ ಚರ್ಚೆ ಮಾಡಲು ಸಿದ್ಧ. ನಿಮ್ಮ ಅಭಿಪ್ರಾಯಗಳನ್ನು ಮುಕ್ತವಾಗಿ ತಿಳಿಸಿ” ಎಂದು ಹೇಳಿದರು.”ಬೆಂಗಳೂರು ನಗರಾಭಿವೃದ್ಧಿ ಇಲಾಖೆ ಬಹಳ ಸವಾಲಿನ ಇಲಾಖೆ. ಬೆಂಗಳೂರಿನ ಸಮಸ್ಯೆಗಳಿಗೆ ಹೊಸ ರೂಪ ನೀಡುವ ಪ್ರಯತ್ನ ಮಾಡುತ್ತಿದ್ದೇನೆ. ಕೇಂಪೇಗೌಡರು ಬೆಂಗಳೂರನ್ನು ಕಟ್ಟಿದರು.
ಕೆಂಗಲ್ ಹನುಮಂತಯ್ಯನವರು ಇಲ್ಲಿ ವಿಧಾನಸೌಧ ಕಟ್ಟಿಸಿದರು. ಎಸ್.ಎಂ ಕೃಷ್ಣ ಅವರು ಇದನ್ನು ಜಾಗತಿಕ ಮಟ್ಟಕ್ಕೆ ಕೊಂಡೋಯ್ದರು. ಬೆಂಗಳೂರು ಯೋಜಿತ ನಗರವಲ್ಲ. ನಾನು ಈ ಹಿಂದೆ ನಗರಾಭಿವೃದ್ಧಿ ಸಚಿವನಾಗಿದ್ದಾಗ ಬೆಂಗಳೂರಿನ ಜನಸಂಖ್ಯೆ 70 ಲಕ್ಷ ಇತ್ತು. ಈಗ ಅದು 1.40 ಕೋಟಿಗೆ ಏರಿಕೆಯಾಗಿದೆ. 1.04 ಕೋಟಿ ವಾಹನಗಳಿವೆ. ಪ್ರತಿನಿತ್ಯ ಹೆಚ್ಚಿನ ಸಂಖ್ಯೆಯಲ್ಲಿ ಬೆಂಗಳೂರಿಗೆ ಆಗಮಿಸುತ್ತಿದ್ದಾರೆ” ಎಂದು ತಿಳಿಸಿದರು.