ಪ್ರಸಕ್ತ ಸಾಲಿನ ರಾಜ್ಯ ಬಜೆಟ್ ಮಂಡನೆ ಮಾಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರವಾಸೋದ್ಯಮ ಕ್ಷೇತ್ರಕ್ಕೆ ಭರ್ಜರಿ ಅನುದಾನ ಘೋಷಣೆ ಮಾಡಿದ್ದಾರೆ.

ವಿಧಾನಸಭೆಯಲ್ಲಿ 16ನೇ ಬಾರಿ 2025-26ನೇ ಸಾಲಿನ ಬಜೆಟ್ (2025-26 Budget) ಮಂಡಿಸಿದ ಅವರು, ಮೊದಲಿಗೆ ನಮ್ಮ ಸಂಕಲ್ಪಗಳನ್ನು ಜನರ ಮುಂದಿಡುವ ದೊಡ್ಡ ಹೊಣೆಗಾರಿಕೆ ಮುಂದೆ ನಿಂತಿದ್ದೇನೆ. ನಾಳೆಗಳ ಬಗ್ಗೆ ಭರವಸೆ ಮೂಡಿಸುವ, ನಮ್ಮ ವಾಗ್ದಾನಗಳಲ್ಲಿ ಬಜೆಟ್ ಮಂಡಿಸುತ್ತಿದ್ದೇನೆ. ಬುದ್ಧ, ಬಸವ, ನಾರಾಯಣಗುರು ಅವರ ಆಶಯಗಳಿವೆ. ಕುವೆಂಪು ಅವರ ಕವನ ಹೇಳುವ ಮೂಲಕ ಕುಳಿತುಕೊಂಡು ಬಜೆಟ್ ಮಂಡಿಸಲು ಶುರು ಮಾಡಿದರು. ಬಳಿಕ ಪ್ರವಾಸೋದ್ಯಮ ಕ್ಷೇತ್ರಕ್ಕೆ ( tourism sector )
ಭರ್ಜರಿ ಅನುದಾನ ಘೋಷಿಸಿದರು.

ರಾಜ್ಯದಲ್ಲಿ ಪ್ರವಾಸೋದ್ಯಮ ವಲಯದ ವಿಪುಲ ಅವಕಾಶ ಮತ್ತು ಸಾಮರ್ಥ್ಯದ ಸದ್ಬಳಕೆ ಮಾಡಿಕೊಳ್ಳಲು ನೂತನ ಪ್ರವಾಸೋದ್ಯಮ ನೀತಿ 2024-29 ನ್ನು ಜಾರಿಗೊಳಿಸಲಾಗಿದೆ. ಪ್ರವಾಸೋದ್ಯಮ ಕ್ಷೇತ್ರವನ್ನು ಆಶಾದಾಯಕ ಮತ್ತು ಸುಸ್ಥಿರ ಅಭಿವೃದ್ಧಿಯ ಮೂಲಕ ಆದ್ಯತೆಯ ವಲಯವಾಗಿಸುವ ಉದ್ದೇಶ ಹೊಂದಿರುವ ಈ ನೀತಿಯಿಂದ ರಾಜ್ಯದಲ್ಲಿ 8,000 ಕೋಟಿ ರೂ. ಹೂಡಿಕೆಯ ನಿರೀಕ್ಷೆ ಹಾಗೂ 1.5 ಲಕ್ಷ ಉದ್ಯೋಗ ಸೃಜನೆಯ ಗುರಿ ಹೊಂದಿದ್ದೇವೆ.

1. ರಾಜ್ಯದ ಪ್ರಮುಖ ಧಾರ್ಮಿಕ ಸ್ಥಳವಾದ ಸವದತ್ತಿಯ ಶ್ರೀ ರೇಣುಕಾ ಯಲ್ಲಮ್ಮ ( Sri Renuka Yellamma ) ಕ್ಷೇತ್ರ ಹಾಗೂ ಬೆಂಗಳೂರಿನಲ್ಲಿರುವ ದೇವಿಕಾರಾಣಿ ರೋರಿಚ್ ಎಸ್ಟೇಟ್ ಅನ್ನು ವಿಶೇಷ ಬಂಡವಾಳ ಯೋಜನೆಯಡಿ ಒಟ್ಟಾರೆ 199 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾಗುವುದು.
2. ರಾಜ್ಯದ ಆಯ್ದ 10 ಜಿಲ್ಲೆಗಳಲ್ಲಿನ ಪ್ರವಾಸಿ ತಾಣಗಳನ್ನು ಅಭಿವೃದ್ಧಿಪಡಿಸಲು 2025-26ನೇ ಸಾಲಿನಲ್ಲಿ 50 ಕೋಟಿ ರೂ. ಅನುದಾನವನ್ನು ಒದಗಿಸಲಾಗುವುದು.
3. ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಕಡಲ ತೀರದ ಅಭಿವೃದ್ಧಿ ಹಾಗೂ ರಸ್ತೆಬದಿ ಸೌಲಭ್ಯಗಳನ್ನು (Highway Hubs) ಉನ್ನತೀಕರಿಸುವ ಮೂಲಕ ಶೈಕ್ಷಣಿಕ, ಆರೋಗ್ಯ, ಸಾಹಸ, ಪರಿಸರ, ಜಲಸಾರಿಗೆ ಹಾಗೂ ಕಡಲ ತೀರದ ಪ್ರವಾಸೋದ್ಯಮಗಳಿಗೆ ಲಭ್ಯವಿರುವ ಅವಕಾಶಗಳನ್ನು ಉಪಯೋಗಿಸಿಕೊಳ್ಳಲಾಗುವುದು.
4. UNESCO ಪಾರಂಪರಿಕ ಪ್ರವಾಸಿ ತಾಣಗಳ ಪಟ್ಟಿಗೆ ಸೇರ್ಪಡೆಗೊಂಡಿರುವ ಬೇಲೂರು-ಹಳೇಬೀಡು-ಸೋಮನಾಥಪುರ ಪ್ರವಾಸಿ ತಾಣಗಳಲ್ಲಿ ಮೂಲಸೌಲಭ್ಯಗಳನ್ನು ಅಭಿವೃದ್ಧಿಪಡಿಸಲಾಗುವುದು.
5. ಪ್ರವಾಸಿಗರ ಸುರಕ್ಷತೆಗಾಗಿ ಪ್ರವಾಸಿ ತಾಣಗಳಲ್ಲಿಕಾರ್ಯನಿರ್ವಹಿಸುತ್ತಿರುವ ಪ್ರವಾಸಿ ಮಿತ್ರರಿಗೆ ತರಬೇತಿ ನೀಡಿ ಅವರ ಸಂಖ್ಯೆಯನ್ನು 1,000 ಕ್ಕೆ ಹೆಚ್ಚಿಸಲಾಗುವುದು ಹಾಗೂ ಪ್ರವಾಸಿಗರಿಗೆ ಮಾಹಿತಿ ನೀಡಲು 24X7 ಪ್ರವಾಸಿ ಸಹಾಯವಾಣಿ ತೆರೆಯಲಾಗುವುದು.
6. ರಾಜ್ಯದ ಸ್ಮಾರಕಗಳ ಸಂರಕ್ಷಣೆಗೆ ಅಗತ್ಯವಾಗಿರುವ ಮೂಲಸೌಕರ್ಯಗಳನ್ನು ಸೃಷ್ಟಿಸಲು 25 ಸ್ಮಾರಕಗಳನ್ನು ದತ್ತು ನೀಡಲಾಗಿದೆ. ಮುಂದಿನ ಹಂತದಲ್ಲಿ ಇನ್ನೂ ಹೆಚ್ಚಿನ ಸ್ಮಾರಕಗಳನ್ನು ‘ನಮ್ಮ ಸ್ಮಾರಕ’ ಡಿಜಿಟಲ್ ವೇದಿಕೆಯ ಮುಖಾಂತರ ದತ್ತು ನೀಡಲು ಉದ್ದೇಶಿಸಲಾಗಿದೆ.
7. ರಾಜ್ಯದ ಪ್ರವಾಸಿ ತಾಣಗಳ ಸಮಗ್ರ ಮಾಹಿತಿಯನ್ನು ಸಂಗ್ರಹಿಸಲು ONE-TAC Digital Grid ಅನ್ನು ಉಪಯೋಗಿಸಲಾಗುವುದು.
8. ಐತಿಹಾಸಿಕ ಲಕ್ಕುಂಡಿಯಲ್ಲಿನ ಪಾರಂಪರಿಕ ದೇವಾಲಯಗಳನ್ನು ವಿಶ್ವ ಪಾರಂಪರಿಕ ತಾಣಗಳ ಪಟ್ಟಿಗೆ ಸೇರ್ಪಡೆಗೊಳಿಸಲು ಅಗತ್ಯ ಸೌಕರ್ಯಗಳನ್ನು ಒದಗಿಸಲಾಗುವುದು ಹಾಗೂ ಪ್ರಾಚ್ಯಾವಶೇಷಗಳ ಸಂರಕ್ಷಣೆಗಾಗಿ ಬಯಲುವಸ್ತು ಸಂಗ್ರಹಾಲಯವನ್ನು ಪ್ರಾರಂಭಿಸಲಾಗುವುದು.
9.ರಾಜ್ಯದ ಸಂಸ್ಕೃತಿ, ನಾಗರಿಕತೆಯ ಉಗಮ, ವಿಕಾಸಗಳೂ ಸೇರಿದಂತೆ ಐತಿಹಾಸಿಕ, ಸಾಮಾಜಿಕ ಸಂಗತಿಗಳನ್ನು ಬಿಂಬಿಸುವ ರಾಜ್ಯ ಮಟ್ಟದ ವಸ್ತು ಸಂಗ್ರಹಾಲಯವನ್ನು ಮೈಸೂರು ನಗರದ ಹಳೆ ಜಿಲ್ಲಾಧಿಕಾರಿಗಳ ಕಛೇರಿಯಲ್ಲಿ ಸ್ಥಾಪಿಸಲಾಗುವುದು.