ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ಅವರು ಲೋಕಸಭಾ ಚುನಾವಣೆಯಲ್ಲಿ (MP Election )ಹಣ ಪಡೆದು ಕಾಂಗ್ರೆಸ್ ಅಭ್ಯರ್ಥಿ ಪರವಾಗಿ ಕೆಲಸ ಮಾಡಿದ್ದಾರೆ ದಾಖಲೆ ಸಮೇತ ಬಹಿರಂಗಪಡಿಸಲು ಸಿದ್ದವಿದ್ದೇನೆ ಎಂದು ಚನ್ನಗಿರಿಯ ಕಾಂಗ್ರೆಸ್ ಶಾಸಕ ಶಿವಗಂಗಾ ಬಸವರಾಜು (MLA Shivaganga Basavaraj) ತಿಳಿಸಿದರು.

‘ಲೋಕಸಭಾ ಚುನಾವಣೆಗೆ ಬಿಜೆಪಿ ಅಭ್ಯರ್ಥಿ ಘೋಷಣೆಯಾದ ಬಳಿಕ ರೇಣುಕಾಚಾರ್ಯ (Renukacharya)ಕಾಂಗ್ರೆಸ್ ಬೆಂಬಲಿಸಲು ನಿರ್ಧರಿಸಿದ್ದರು. ಬಿಜೆಪಿ ಟಿಕೆಟ್ ಕೈತಪ್ಪಿದ್ದಕ್ಕೆ ಪಕ್ಷನಿಷ್ಠೆ ಮರೆತು ಕಾಂಗ್ರೆಸ್ ಅಭ್ಯರ್ಥಿ ಪರವಾಗಿ ಕೆಲಸ ಮಾಡಿದರು. ಇದಕ್ಕೆ ಸಂಬಂಧಿಸಿದ ದಾಖಲೆ ನನ್ನ ಬಳಿ ಇದೆ. ಸಮಯ ಬಂದಾಗ ಬಹಿರಂಗಪಡಿಸುವೆ’ ಎಂದು ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.

‘ನಾನು ಕಾನೂನು ಬಾಹಿರ ಚಟುವಟಿಕೆಯಲ್ಲಿ ತೊಡಗಿಲ್ಲ ಎಂಬುದಕ್ಕೆ ದೇವರ ಮುಂದೆ ಪ್ರಮಾಣ ಮಾಡಲು ಸಿದ್ಧ ಇದ್ದೇನೆ. ಕಾನೂನು ಬಾಹಿರ ಚಟುವಟಿಕೆಯಲ್ಲಿ ತೊಡಗಿರುವ ಬಗ್ಗೆ ಆರೋಪ ಮಾಡಿರುವ ರೇಣುಕಾಚಾರ್ಯ ಅವರು ಪ್ರಮಾಣ ಮಾಡಬೇಕು. ಇದಕ್ಕೆ ಸಿಗಂಧೂರು ಚೌಡೇಶ್ವರಿ(Sigandhur Chowdeshwari), ಕಟೀಲು ಪರಮೇಶ್ವರಿ (Kateelu Parameshwari) ಹಾಗೂ ಚನ್ನಗಿರಿ ತಾಲ್ಲೂಕಿನ ಮಾವಿನಹಳ್ಳಿ ಮಹಾರುದ್ರಸ್ವಾಮಿ (Mavinahalli Maharudraswamy) ದೇಗುಲಕ್ಕೆ ಬರಲು ಸಿದ್ದನಿದ್ದೇನೆ’ ಎಂದರು.

‘ರೇಣುಕಾಚಾರ್ಯ ಅವರು 2023ರಲ್ಲಿ ವಿಧಾನಸಭಾ ಚುನಾವಣೆಯಲ್ಲಿ ಸೋಲು ಕಂಡ ಬಳಿಕ ಬಿಜೆಪಿ(BJP) ತೊರೆದು ಕಾಂಗ್ರೆಸ್ (congress) ಸೇರ್ಪಡೆಯಾಗಲು ಮುಂದಾಗಿದ್ದರು. ಈ ಸಂಬಂಧ ಕೆಪಿಸಿಸಿ ಅಧ್ಯಕ್ಷರೂ ಅಗಿರುವ ಡಿ.ಕೆ. ಶಿವಕುಮಾರ್ (DK Shivakumar) ಭೇಟಿ ಮಾಡಿದ್ದರು. ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ (S S Mallikarjun) ಮನೆ ಬಾಗಿಲಿಗೂ ಬಂದಿದ್ದರು. ಬಿ.ವೈ. ವಿಜಯೇಂದ್ರ (BY Vijayendra) ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷರಾದ ಬಳಿಕ ನಿರ್ಧಾರ ಬದಲಿಸಿದರು’ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯೆ ನೀಡಿದರು.