ನೀವು ಎಂತಹ ನರಕದಲ್ಲಿ ಇದ್ದೀರಿ, ಇಂತಹ ಶಾಸಕರನ್ನು (Munirathnam Naidu) ಆಯ್ಕೆ ಮಾಡಿಕೊಂಡ ನಿಮ್ಮ ಪರಿಸ್ಥಿತಿ ಏನೆಂದು ನನಗೆ ಅರ್ಥವಾಗುತ್ತದೆ: ಡಿಸಿಎಂ ಡಿ.ಕೆ. ಶಿವಕುಮಾರ್(DK Shivakumar). ಆರ್ ಆರ್ ನಗರ ವಿಧಾನಸಭೆ ಕ್ಷೇತ್ರದ ಜನರ ಬಗ್ಗೆ ಡಿಸಿಎಂ ಅನುಕಂಪ, ಸೂಕ್ತ ಸಮಯದಲ್ಲಿ ಉತ್ತರ ನೀಡಲು ಜನರಿಗೆ ಕರೆ.

“ಇಲ್ಲಿನ ಜನಪ್ರತಿನಿಧಿ (MLA Munirathnam Naidu) ವರ್ತನೆ ನೋಡಿದರೆ, ನೀವು ಎಂತಹ ನರಕದಲ್ಲಿ ಬದುಕುತ್ತಿದ್ದೀರಿ ಎನಿಸುತ್ತಿದೆ. ಇಂತಹ ಶಾಸಕರನ್ನು ಆಯ್ಕೆ ಮಾಡಿಕೊಂಡ ನಿಮ್ಮ ಪರಿಸ್ಥಿತಿ ನನಗೆ ಅರ್ಥವಾಗುತ್ತದೆ” ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.
ಮತ್ತಿಕೆರೆಯ ಜೆ.ಪಿ. ಪಾರ್ಕ್ ನಲ್ಲಿ ಶನಿವಾರ ಬೆಂಗಳೂರು ನಡಿಗೆ ಕಾರ್ಯಕ್ರಮದ ಅಂಗವಾಗಿ ಸಾರ್ವಜನಿಕರ ಸಂವಾದ ವೇಳೆ ಶಿವಕುಮಾರ್ ಅವರು ಮಾತನಾಡಿದರು.

ಸಾರ್ವಜನಿಕರ ಜತೆ ತಾವು ನಡೆಸುತ್ತಿದ್ದ ಸಂವಾದ ಕಾರ್ಯಕ್ರಮಕ್ಕೆ ಮುನಿರತ್ನಂ ನಾಯ್ಡು ಮತ್ತವರ ಬೆಂಬಲಿಗರು ಅಡ್ಡಿಪಡಿಸಿದ ಬಗ್ಗೆ ಡಿಸಿಎಂ ಅವರು ತೀವ್ರ ಬೇಸರ ವ್ಯಕ್ತಪಡಿಸಿದರು.

“ಸ್ಥಳೀಯ ಶಾಸಕ ಮುನಿರತ್ನ ಅವರಿಗೆ ತಾಳ್ಮೆಯಿಲ್ಲ. ಅವರು ಕಾರ್ಯಕ್ರಮವನ್ನು ಹಾಳು ಮಾಡಬೇಕು ಎಂದೇ ಬಂದರೋ ಏನೋ. ಇದಕ್ಕೆ ನಾವು ತಲೆ ಕೆಡಿಸಿಕೊಳ್ಳುವುದಿಲ್ಲ, ನೀವೂ ತಲೆಕೆಡಿಸಿಕೊಳ್ಳಬೇಡಿ. ಇಂತಹವರನ್ನು ಆಯ್ಕೆ ಮಾಡಿಕೊಂಡಿರುವುದಕ್ಕೆ ನಿಮ್ಮ ಮನಸ್ಸಿಗೆ ಬಹಳ ನೋವಾಗುತ್ತಿದೆ ಎಂದು ನನಗೆ ಚನ್ನಾಗಿ ಗೊತ್ತಿದೆ. ಇದಕ್ಕೆಲ್ಲಾ ಸೂಕ್ತ ಸಮಯದಲ್ಲಿ ಉತ್ತರ ನೀಡಿ” ಎಂದು ಹೇಳಿದರು.

“ಇಂತಹ ಪ್ರತಿನಿಧಿಯನ್ನು (ಮುನಿರತ್ನಂ ನಾಯ್ಡು) ಇಟ್ಟುಕೊಳ್ಳುವುದೋ, ಬೇಡವೋ ಎಂಬುದನ್ನು ಜನ ತೀರ್ಮಾನ ಮಾಡಬೇಕು. ಇದರ ಬಗ್ಗೆ ನಾನು ಹೆಚ್ಚು ಮಾತನಾಡಲು ಹೋಗುವುದಿಲ್ಲ. ಜನಪ್ರತಿನಿಧಿಗಳಿಗೆ ಏನು ಗೌರವ ನೀಡಬೇಕು ಎನ್ನುವ ಅರಿವು ನನಗಿದೆ. ರಾಜಕಾರಣದಲ್ಲಿ ಸೋಲು, ಗೆಲುವು ಇದ್ದೇ ಇರುತ್ತದೆ ಯಾವುದೂ ಶಾಶ್ವತವಲ್ಲ” ಎಂದು ತಿಳಿಸಿದರು.










