ಬೆಂಗಳೂರು: ಬೆಂಗಳೂರು-ತುಮಕೂರು ಮೆಟ್ರೋ ಯೋಜನೆಗೆ ಸಂಸದ ತೇಜಸ್ವಿ ಸೂರ್ಯ ಆಕ್ಷೇಪ ವ್ಯಕ್ತಪಡಿಸಿದ್ದಕ್ಕೆ ಗೃಹ ಸಚಿವ ಪರಮೇಶ್ವರ್ ತಿರುಗೇಟು ನೀಡಿದ್ದಾರೆ.

ನಗರದಲ್ಲಿ ಮಾತನಾಡಿದ ಪರಮೇಶ್ವರ್, ಅನೇಕ ವಿಚಾರಗಳು ಸಂಸದ ತೇಜಸ್ವಿಸೂರ್ಯ ಅವರ ಗಮನದಲ್ಲಿಲ್ಲ. ಇದೇ ಕಾರಣದಿಂದ ಯೋಜನೆಯ ಬಗ್ಗೆ ಆತಂಕ ವ್ಯಕ್ತಪಡಿಸಿದ್ದಾರೆ. ಪ್ರತಿನಿತ್ಯ ತುಮಕೂರಿನಿಂದ ಸಾವಿರಾರು ಜನರು ಪ್ರಯಾಣ ಮಾಡುತ್ತಾರೆ. ನೆಲಮಂಗಲ, ದಾಬಸ್ಪೇಟೆ, ಕ್ಯಾತ್ಸಂದ್ರ ಭಾಗ ವೇಗವಾಗಿ ಬೆಳೆಯುತ್ತಿವೆ. ಕೈಗಾರಿಕೆ ಉದ್ದೇಶದಿಂದ ಜನರ ಜೀವನ ಹೆಚ್ಚಾಗುತ್ತಿದೆ. ಬೆಂಗಳೂರಿನಲ್ಲಿ ಒತ್ತಡ ಜಾಸ್ತಿ ಇದೆ. ನೀರಿಗೆ ಕಷ್ಟ, ಓಡಾಡೋಕೆ ಟ್ರಾಫಿಕ್ ಸಮಸ್ಯೆ ಇದೆಲ್ಲ ನೋಡಿಕೊಂಡು ಆ ಕಡೆ ಜೀವನ ನಡೆಸುತ್ತಿದ್ದಾರೆ.
![]()
ತುಮಕೂರಿನಲ್ಲಿ 20 ಸಾವಿರ ಎಕರೆಯಲ್ಲಿ ಏಷ್ಯಾದ ಅತಿದೊಡ್ಡ ಕೈಗಾರಿಕಾ ಪ್ರದೇಶ ನಿರ್ಮಿಸಲಾಗಿದೆ. ಈಗಾಗಲೇ 200 ಕೈಗಾರಿಕೆಗಳು ಬಂದಿವೆ. ಫುಡ್ಪಾರ್ಕ್, ಟೈಮೆಕ್ ಜಪಾನೀಸ್ ಫ್ಯಾಕ್ಟರಿ, ಜಪನೀಸ್ ಟೌನ್ಶಿಪ್ಗೆ ಜಾಗ ಕೊಟ್ಟಿದ್ದೇವೆ. ಇಷ್ಟು ವೇಗವಾಗಿ ಬೆಳೆಯುತ್ತಿರುವಾಗ ಸಂಪರ್ಕ ವ್ಯವಸ್ಥೆ ಬೇಕಲ್ಲವೇ ಎಂದು ಪ್ರಶ್ನಿಸಿದ್ದಾರೆ.
ಇನ್ನು ರಸ್ತೆ, ಮೆಟ್ರೋ, ರೈಲು ಸಂಪರ್ಕ ಇದ್ದರೆ ಬೆಂಗಳೂರಿನ ಮೇಲಿನ ಒತ್ತಡ ಕಡಿಮೆಯಾಗುತ್ತದೆ ಎಂಬುದು ಉದ್ದೇಶ. ರಾಮನಗರ, ಕೋಲಾರ, ತುಮಕೂರು ನಗರಗಳನ್ನು ಬೆಳೆಸಿದರೆ ಬೆಂಗಳೂರಿನ ಮೇಲಿನ ಒತ್ತಡ ಕಡಿಮೆಯಾಗುತ್ತದೆ. ಎರಡು ವರ್ಷದ ಹಿಂದೆಯೇ ತುಮಕೂರಿಗೆ ಮೆಟ್ರೋ ಯೋಜನೆ ತೆಗೆದುಕೊಂಡು ಹೋಗಬೇಕು ಎಂದು ಪ್ರಸ್ತಾಪ ಮಾಡಿದ್ದೆ. ಮುಖ್ಯಮಂತ್ರಿಗಳು ಫಿಸಿಬಲಿಟಿ ಸ್ಟಡಿ ಮಾಡುವುದಾಗಿ 2024ರ ಬಜೆಟ್ನಲ್ಲಿ ಘೋಷಿಸಿದ್ದರು. ಫಿಸಿಬಲಿಟಿ ವರದಿಯಲ್ಲಿ ತುಮಕೂರು ಮೆಟ್ರೋ ಯೋಜನೆ ಬಗ್ಗೆ ಪಾಸಿಟಿವ್ ಆಗಿ ಕೊಟ್ಟಿದ್ದಾರೆ. ಎಲ್ಲರೊಂದಿಗೆ ಚರ್ಚೆ ಮಾಡಿ ಡಿಪಿಆರ್ ಮಾಡಲು ಅನುಮತಿ ಕೊಟ್ಟಿದ್ದಾರೆ ಎಂದರು.

ಎರಡು-ಮೂರು ಕಂಪನಿಗಳು ಪಿಪಿಪಿ ಮಾದರಿಯಲ್ಲಿ ಹೂಡಿಕೆ ಮಾಡಲು ಮುಂದೆ ಬಂದಿವೆ. ಹೂಡಿಕೆ ಮಾಡಲು ಸಿದ್ಧರಿದ್ದೇವೆ ಎಂಬುದಾಗಿ ಕತಾರ್ ಮೂಲದ ಕಂಪನಿಯವರು ಮುಖ್ಯಮಂತ್ರಿಯವರಿಗೆ ಅಧಿಕೃತವಾಗಿ ಪತ್ರ ನೀಡಿದ್ದಾರೆ. ಇಷ್ಟೆಲ್ಲ ಆಗಿರುವಾಗ, ಸಂಸದ ತೇಜಸ್ವಿ ಸೂರ್ಯ ಏನು ಅರಿಯದೆ, ಯಾವ ಉದ್ದೇಶಕ್ಕಾಗಿ ಆ ರೀತಿಯಾಗಿ ಮಾತಾಡಿದ್ದಾರೆ ಎಂಬುದು ಗೊತ್ತಾಗುತ್ತಿಲ್ಲ. ಈ ಬಗ್ಗೆ ನಾನು ಅವರೊಂದಿಗೆ ಮಾತಾಡುತ್ತೇನೆ. ಇದು ಸಂಘರ್ಷದ ಪ್ರಶ್ನೆಯಲ್ಲ. ‘ನಮಗೆ ಬೇಕು, ನಿಮಗೆ ಬೇಡ. ನಮಗೆ ಬೇಡ, ನಿಮಗೆ ಬೇಕು’ ಎಂಬ ಪ್ರಶ್ನೆಯೂ ಅಲ್ಲ. ರಾಜ್ಯದ ಅಭಿವೃದ್ಧಿಯ ದೃಷ್ಟಿಯಿಂದ ನಾವು ಯೋಚನೆ ಮಾಡಬೇಕು ಎಂದು ಹೇಳಿದರು.

ನಾನು ಅನೇಕ ದೇಶಗಳಿಗೆ ಹೋಗಿದ್ದೇನೆ. ಟೋಕಿಯೋದಲ್ಲಿ ನರೀಟ ಏರ್ಪೋರ್ಟ್ 70 ಕಿ.ಮೀ. ದೂರದಲ್ಲಿದೆ. ಮಲೇಷ್ಯಾದಲ್ಲಿ ಕೌಲಲಾಂಪುರಗೆ 20 ನಿಮಿಷದಲ್ಲಿ ಹೋಗುತ್ತಾರೆ. ಆ ರೀತಿ ಪಾಸಿಟಿವ್ ಆಗಿ ಯೋಚಿಸಬೇಕು. ನೆಗಿಟಿವ್ ಆಗಿ ಯೋಚಿಸಬೇಕಿಲ್ಲ ಎಂದರು.











