ಬೆಳಗಾವಿ: ಸೋಮವಾರದಿಂದ ಶನಿವಾರದೊಳಗೆ (ಡಿಸೆಂಬರ್ 22 ರಿಂದ 27) ಗೃಹಲಕ್ಷ್ಮಿ ಯೋಜನೆಯ(Gruhalakshmi Yojana) 24ನೇ ಕಂತಿನ ಹಣವನ್ನು ಫಲಾನುಭವಿಗಳ ಖಾತೆಗೆ ಸಂದಾಯ ಮಾಡಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್( Lakshmi Hebbalkar) ಭರವಸೆ ನೀಡಿದ್ದಾರೆ.

ಬೆಳಗಾವಿಯ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, 24ನೇ ಕಂತಿನ ಹಣ ಬಿಡುಗಡೆಗೆ ಹಣಕಾಸು ಇಲಾಖೆಯವರು ಈಗಾಗಲೇ ಅನುಮತಿ ನೀಡಿದ್ದು, ಸೋಮವಾರದಿಂದ ಹಣ ಸಂದಾಯವಾಗಲಿದೆ ಎಂದರು.

ಸತ್ತವರ ಅಕೌಂಟ್ಗೂ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯ ಆಗುತ್ತಿರುವ ವಿಚಾರಕ್ಕೆ ಪ್ರತಿಕ್ರಿಯಿಸಿದ ಸಚಿವರು, ಈ ಸಂಬಂಧ ಮುಖ್ಯ ಕಾರ್ಯದರ್ಶಿಗಳ ನೇತೃತ್ವದಲ್ಲಿ ಈಗಾಗಲೇ ಎರಡು ಬಾರಿ ಸಭೆ ನಡೆಸಲಾಗಿದ್ದು, ಸತ್ತವರ ಅಕೌಂಟ್ಗೆ ಹಣ ಸಂದಾಯ ಆಗುವುದು ಗೊತ್ತಾಗುವುದಿಲ್ಲ. ಇದಕ್ಕಾಗಿ ಈಗ ಸಾಫ್ಟ್ವೇರ್ ಅಭಿವೃದ್ಧಿ ಮಾಡಿದ್ದು, ಅಂಗನವಾಡಿ ಕಾರ್ಯಕರ್ತರು ಪರಿಶೀಲನೆ ಮಾಡಲಿದ್ದಾರೆ. ಈ ಮೊತ್ತವನ್ನು ರಿಕವರಿ ಮಾಡುವ ಕುರಿತು ಬ್ಯಾಂಕ್ಗಳಿಗೆ ಸೂಚನೆ ಕೊಟ್ಟಿದ್ದೇವೆ ಎಂದು ಹೇಳಿದರು.

ನಾಯಕತ್ವ ಬದಲಾವಣೆ ಆಗುತ್ತಾ ಅಥವಾ ಸಚಿವ ಸಂಪುಟದ ವಿಸ್ತರಣೆ ಆಗುತ್ತಾ ಎಂಬ ವಿಚಾರಕ್ಕೆ ಪ್ರತಿಕ್ರಿಯಿಸಿದ ಸಚಿವರು, ಈ ಎರಡೂ ವಿಚಾರಗಳ ಬಗ್ಗೆ ನನಗೆ ಗೊತ್ತಿಲ್ಲ. ಎಲ್ಲವನ್ನೂ ಹೈಕಮಾಂಡ್ ನಿರ್ಧಾರ ಮಾಡುತ್ತದೆ. ನಾವು ಹೈಕಮಾಂಡ್ ತೀರ್ಮಾನಕ್ಕೆ ಬದ್ಧರಾಗಿದ್ದೇವೆ ಎಂದು ಸಚಿವೆ ಲಕ್ಷ್ಮೀ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು.

ವಸತಿ ಶಾಲೆ ಮುಚ್ಚಿಸಲು ಕ್ರಮ
ಬಾಗಲಕೋಟೆಯಲ್ಲಿ ಬುದ್ಧಿಮಾಂದ್ಯ ಬಾಲಕನ ಮೇಲೆ ನಡೆದ ಕ್ರೌರ್ಯ ಪ್ರಕರಣದ ಕುರಿತು ಪ್ರತಿಕ್ರಿಯಿಸಿದ ಅವರು, ಇದೊಂದು ಅಮಾನವೀಯ ಘಟನೆ, ಸರಿಯಾಗಿರುವ ಮಕ್ಕಳಿಗೆ ಹೊಡೆದರೇ ಅಪರಾಧ ಅಂತಾ ಹೇಳಿ ಶಿಕ್ಷೆ ಕೊಡುತ್ತೇವೆ. ಅಂತಹದರಲ್ಲಿ ಬುದ್ಧಿಮಾಂದ್ಯ ಮಕ್ಕಳಿಗೆ ಹಿಂಸೆ ಕೊಡುವುದನ್ನು ಸಹಿಸಲು ಸಾಧ್ಯವಿಲ್ಲ. ಸರ್ಕಾರದಿಂದ ಅನುಮತಿ ಪಡೆಯದೇ ಶಾಲೆಯನ್ನು ಅನಧಿಕೃತವಾಗಿ ತೆರೆಯಲಾಗಿದೆ. ಘಟನೆ ನಡೆದ ತಕ್ಷಣವೇ ಮಕ್ಕಳ ರಕ್ಷಣಾ ಅಧಿಕಾರಿಗಳನ್ನು ಸ್ಥಳಕ್ಕೆ ಕಳುಹಿಸಿಕೊಡಲಾಗಿದೆ. ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಜೊತೆ ಮಾತನಾಡಿದ್ದು, ತಕ್ಷಣವೇ ವಸತಿ ಶಾಲೆ ಮುಚ್ಚಿಸಲು ಕ್ರಮ ಕೈಗೊಳ್ಳುತ್ತೇವೆ ಎಂದು ಸಚಿವರು ಹೇಳಿದರು.




