ಬಳ್ಳಾರಿ: ಬಳ್ಳಾರಿ ನಗರದಲ್ಲಿ ಬ್ಯಾನರ್ ಅಳವಡಿಕೆ ವಿಚಾರವಾಗಿ ಉಂಟಾದ ಗಲಾಟೆ ಇದೀಗ ತೀವ್ರ ರಾಜಕೀಯ ಸಂಘರ್ಷದ ರೂಪ ಪಡೆದುಕೊಂಡಿದೆ. ಈ ಪ್ರಕರಣದಲ್ಲಿ ಶಾಸಕ ಭರತ್ ರೆಡ್ಡಿ (Nara Bharath Reddy) ಸೇರಿದಂತೆ ಒಟ್ಟು 22 ಜನರ ವಿರುದ್ಧ ಬ್ರೂಸ್ ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ನಿವಾಸಕ್ಕೆ ಅತಿಕ್ರಮ ಪ್ರವೇಶ ಮಾಡಿರುವುದು, ಜಾತಿನಿಂದನೆ ನಡೆಸಿರುವುದು, ಅವಾಚ್ಯ ಶಬ್ದಗಳಿಂದ ನಿಂದಿಸಿರುವುದು ಹಾಗೂ ಹಲ್ಲೆಗೆ ಯತ್ನಿಸಿರುವ ಆರೋಪಗಳಡಿ ಪ್ರಕರಣ ದಾಖಲಿಸಲಾಗಿದೆ. ಶಾಸಕ ಭರತ್ ರೆಡ್ಡಿ ಅವರ ಆಪ್ತರಾದ ಸತೀಶ್ ರೆಡ್ಡಿ, ಚಾನಾಳ ಶೇಖರ್, ಲೋಕೇಶ್ ಅಂಬಾವಿ, ಗಂಗಾಧರ ಸೇರಿದಂತೆ ಹಲವು ಬೆಂಬಲಿಗರು ಈ ಪ್ರಕರಣದಲ್ಲಿ ಆರೋಪಿಗಳಾಗಿದ್ದಾರೆ.

ಈ ಗಲಾಟೆಗೆ ಸಂಬಂಧಿಸಿದಂತೆ ನಿನ್ನೆ ಶಾಸಕ ಭರತ್ ರೆಡ್ಡಿ ಬೆಂಬಲಿಗ ಚಾನಾಳ ಶೇಖರ್ ಅವರು ಜನಾರ್ದನ ರೆಡ್ಡಿ ಬೆಂಬಲಿಗರ ವಿರುದ್ಧ ಮೊದಲು ದೂರು ದಾಖಲಿಸಿದ್ದರು. ಬ್ಯಾನರ್ ತೆರವು ವಿಚಾರವಾಗಿ ತಮ್ಮ ಮೇಲೆ ಹಲ್ಲೆ ಹಾಗೂ ಬೆದರಿಕೆ ನಡೆದಿದೆ ಎಂದು ಅವರು ಆರೋಪಿಸಿದ್ದರು. ಇದಕ್ಕೆ ಪ್ರತಿಯಾಗಿ ಇಂದು ಮಾಜಿ ಸಚಿವ ಜನಾರ್ದನ ರೆಡ್ಡಿ ಪರವಾಗಿ ಅವರ ನಿವಾಸದ ಮ್ಯಾನೇಜರ್ ನಾಗರಾಜ್ ಬ್ರೂಸ್ ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರತಿದೂರು ದಾಖಲಿಸಿದ್ದಾರೆ. ಜನಾರ್ದನ ರೆಡ್ಡಿ ಮನೆಗೆ ಅಕ್ರಮವಾಗಿ ನುಗ್ಗಿ ಗಲಾಟೆ ನಡೆಸಲಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಜನಾರ್ದನ ರೆಡ್ಡಿ ಸೇರಿ ಎರಡು ಪ್ರತ್ಯೇಕ ದೂರು
ಈ ಪ್ರಕರಣಕ್ಕೆ ಸಂಬಂಧಿಸಿ ಗಾಲಿ ಜನಾರ್ದನ ರೆಡ್ಡಿ ಸ್ವತಃ ಒಂದು ದೂರು ದಾಖಲಿಸಿದ್ದು, ಜೊತೆಗೆ ಅವರ ಮನೆಯಲ್ಲಿ ಕೆಲಸ ಮಾಡುತ್ತಿರುವ ನಾಗರಾಜ್ ಮತ್ತೊಂದು ಪ್ರತ್ಯೇಕ ದೂರು ನೀಡಿದ್ದಾರೆ. ಬ್ಯಾನರ್ ವಿಚಾರ ನೆಪ ಮಾಡಿಕೊಂಡು ಮನೆಯಲ್ಲಿ ಭೀತಿ ಉಂಟುಮಾಡಲಾಗಿದೆ ಎಂದು ದೂರಿನಲ್ಲಿ ಹೇಳಲಾಗಿದೆ. ಪ್ರಕರಣದ ಗಂಭೀರತೆಯನ್ನು ಗಮನಿಸಿದ ಪೊಲೀಸರು ಹೆಚ್ಚುವರಿ ಎಸ್ಪಿ ನೇತೃತ್ವದಲ್ಲಿ ಜನಾರ್ದನ ರೆಡ್ಡಿ ಮನೆಗೆ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಬಳ್ಳಾರಿಗೆ ಭೇಟಿ ನೀಡಿದ ಸಂದರ್ಭದಲ್ಲಿ ದೂರುಗಳನ್ನು ಅಧಿಕೃತವಾಗಿ ಸ್ವೀಕರಿಸಲಾಗಿದೆ.






