ಬೆಂಗಳೂರು: ನಿಗಮ ಮಂಡಳಿ ಮತ್ತು ಪ್ರಾಧಿಕಾರಗಳ 54 ಅಧ್ಯಕ್ಷರಿಗೆ ರಾಜ್ಯ ಸಚಿವ ಸ್ಥಾನಮಾನ ನೀಡಿದ್ದ ರಾಜ್ಯ ಸರ್ಕಾರ, ಇದೀಗ ಭೂಕಾಂತ್ ಅವರಿಗೆ ನೀಡಿದ್ದ ಸ್ಥಾನಮಾನವನ್ನು ಹಿಂಪಡೆದಿದೆ.

ಕರ್ನಾಟಕ ರಾಜ್ಯ ಸಹಕಾರಿ ತೋಟಗಾರಿಕೆ ಮಾರಾಟ ಮಹಾಮಂಡಳಿಯ ಅಧ್ಯಕ್ಷರಾಗಿರುವ ಭೂಕಾಂತ್ ಅವರಿಗೆ ಸಚಿವ ಸ್ಥಾನಮಾನ ನೀಡಿದ್ದನ್ನು ಕಾಂಗ್ರೆಸ್ ಪಾಳಯದಿಂದಲೇ ತೀವ್ರ ವಿರೋಧ ವ್ಯಕ್ತವಾಗಿತ್ತು.

ಭೂಕಾಂತ್ ಬಿಜೆಪಿ ನಾಯಕರು ಹಾಗೂ ಅವರ ಪತ್ನಿಯೂ ಬಿಜೆಪಿಯಿಂದ ಜಿಲ್ಲಾ ಪಂಚಾಯತಿ ಸದಸ್ಯೆಯಾಗಿದ್ದರು. ಇಂತಹ ಸಂದರ್ಭದಲ್ಲಿ ಕಾಂಗ್ರೆಸ್ ಸರ್ಕಾರ ಬಿಜೆಪಿ ಮುಖಂಡನಿಗೆ ಸಚಿವ ಸ್ಥಾನಮಾನ ನೀಡಿರುವುದಕ್ಕೆ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದರು. ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ. ಶಿವಕುಮಾರ್ ವಿರುದ್ಧ ಅಸಮಾಧಾನ ವ್ಯಕ್ತವಾಗಿತ್ತು.

ಈವರೆಗೆ ಪ್ರಮುಖ ನಿಗಮಗಳ ಅಧ್ಯಕ್ಷರಾಗಿರುವ ಶಾಸಕರಿಗೆ ಮಾತ್ರ ಸಚಿವ ಸ್ಥಾನಮಾನ ದೊರೆಯುತ್ತಿತ್ತು. ಈ ಬಾರಿ ಎಲ್ಲಾ ನಿಗಮ, ಮಂಡಳಿ ಮತ್ತು ಪ್ರಾಧಿಕಾರಗಳ ಅಧ್ಯಕ್ಷರಿಗೆ ಸ್ಥಾನಮಾನ ವಿಸ್ತರಿಸಲಾಗಿತ್ತು. ಆದರೆ ಪಕ್ಷದ ಕಾರ್ಯಕರ್ತರ ಅಸಮಾಧಾನದ ಹಿನ್ನೆಲೆಯಲ್ಲಿ ಭೂಕಾಂತ್ ಅವರಿಗೆ ನೀಡಿದ್ದ ರಾಜ್ಯ ಸಚಿವ ಸ್ಥಾನಮಾನವನ್ನು ಸರ್ಕಾರ ಇದೀಗ ಹಿಂಪಡೆದಿದೆ.





