ಬೆಂಗಳೂರು: ಬೆಂಗಳೂರು-ತುಮಕೂರು ರಾಷ್ಟ್ರೀಯ ಹೆದ್ದಾರಿಯ ನೆಲಮಂಗಲ ಸಮೀಪದ ಜಿಂದಾಲ್ ಪ್ರದೇಶದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಕಾರು ಮತ್ತು ಕೆಎಸ್ಆರ್ಟಿಸಿ ಬಸ್ ನಡುವೆ ನಡೆದ ಡಿಕ್ಕಿಯಲ್ಲಿ ಐವರು ಮೃತಪಟ್ಟಿದ್ದಾರೆ.

ಪ್ರತ್ಯಕ್ಷದರ್ಶಿಗಳು ನೀಡಿದ ಮಾಹಿತಿ ಪ್ರಕಾರ, ಅತೀವೇಗದಲ್ಲಿ ಸಂಚರಿಸುತ್ತಿದ್ದ ಕಾರು, ನಿಯಂತ್ರಣ ತಪ್ಪಿ ಡಿವೈಡರ್ ಹಾರಿ ಎದುರು ದಿಕ್ಕಿನಲ್ಲಿ ಬರುತ್ತಿದ್ದ ಕೆಎಸ್ಆರ್ಟಿಸಿ ಬಸ್ಗೆ ಮುಖಾಮುಖಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ಭೀಕರತೆಗೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಐವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಘಟನೆಯ ಕುರಿತು ಮಾಹಿತಿ ನೀಡಿದ ಕೆಎಸ್ಆರ್ಟಿಸಿ ಬಸ್ ಚಾಲಕ ಕೆಂಪರಾಜು ಅವರು, ʼಕಾರು ಡಿವೈಡರ್ ಹಾರಿ ಏಕಾಏಕಿ ಬಸ್ಗೆ ಡಿಕ್ಕಿ ಹೊಡೆದಾಗ ಜೋರಾದ ಸದ್ದು ಕೇಳಿಸಿತು. ಡಿಕ್ಕಿ ಹೊಡೆದ ಪರಿಣಾಮ ಬಸ್ನ ಮುಂಭಾಗದ ಗಾಜುಗಳು ಒಡೆದು ಹೋಗಿದೆ. ಬಸ್ ಪ್ರಯಾಣಿಕರಲ್ಲಿ ಕೆಲವರಿಗೆ ಸಣ್ಣಪುಟ್ಟ ಗಾಯಗಳಾಗಿವೆʼ ಎಂದು ವಿವರಿಸಿದ್ದಾರೆ.

ಅಪಘಾತ ಸಂಭವಿಸಿದ ವೇಳೆ ಬಸ್ನಲ್ಲಿ 43 ಮಂದಿ ಪ್ರಯಾಣಿಕರಿದ್ದರು. ಗಾಯಗೊಂಡವರಿಗೆ ತಕ್ಷಣವೇ ಪ್ರಾಥಮಿಕ ಚಿಕಿತ್ಸೆ ನೀಡಲಾಗಿದೆ. ಅಪಘಾತಕ್ಕೀಡಾದ ಬಸ್ ಹುಬ್ಬಳ್ಳಿಯತ್ತ ತೆರಳುತ್ತಿತ್ತು ಎಂದು ತಿಳಿದುಬಂದಿದೆ.

ಸ್ಥಳೀಯರು ಮತ್ತು ಪೊಲೀಸರು ತಕ್ಷಣವೇ ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ನಡೆಸಿದರು. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಸಮೀಪದ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಅಪಘಾತದಿಂದಾಗಿ ಕೆಲಕಾಲ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚಾರ ದಟ್ಟಣೆ ಉಂಟಾಯಿತು. ಘಟನೆ ಸಂಬಂಧ ನೆಲಮಂಗಲ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.






