ರಾಜ್ಯ ರಾಜಕೀಯದ ಗಮನ ಸೆಳೆದಿರುವ ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಕದನ ಇದೀಗ ಕ್ಲೈಮ್ಯಾಕ್ಸ್ ಹಂತ ತಲುಪಿದ್ದು, ಮತದಾನಕ್ಕೆ ಕ್ಷಣಗಣನೆ ಆರಂಭವಾಗಿದೆ. ಆಡಳಿತಾರೂಢ ಕಾಂಗ್ರೆಸ್ಗೆ ಪ್ರತಿಷ್ಠೆಯ ಪ್ರಶ್ನೆಯಾಗಿರುವ ಈ ಸಮರ, ಪ್ರತಿಪಕ್ಷ ಬಿಜೆಪಿ ಪಾಲಿಗೆ ಸವಾಲಿನ ಕಣವಾಗಿದೆ.ಮಂಗಳವಾರ ಸಂಜೆ 5.30ಕ್ಕೆ ಬಹಿರಂಗ ಪ್ರಚಾರಕ್ಕೆ ತೆರೆ ಬಿದ್ದಿದ್ದು, ಕಳೆದ ಕೆಲವು ದಿನಗಳಿಂದ ಕ್ಷೇತ್ರಗಳಲ್ಲಿ ತಂಗಿದ್ದ ರಾಜಕೀಯ ನಾಯಕರು ವಾಪಸ್ಸಾಗಿದ್ದಾರೆ. ಇಂದು ಅಭ್ಯರ್ಥಿಗಳು ಮನೆಮನೆ ಪ್ರಚಾರದಲ್ಲಿ ತೊಡಗಿಸಿಕೊಂಡಿದ್ದು, ನಾಳೆ ಬೆಳಗ್ಗೆ 7ರಿಂದ ಸಂಜೆ 6ರವರೆಗೆ ಮತದಾನ ನಡೆಯಲಿದೆ.

ಬಾಗಲಕೋಟೆ ನಗರ ಕ್ಷೇತ್ರದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ನೇರ ಪೈಪೋಟಿ ಏರ್ಪಟ್ಟಿದ್ದು, ಮತದಾನಕ್ಕೆ ಅಗತ್ಯವಿರುವ ಎಲ್ಲಾ ಸಿದ್ಧತೆಗಳನ್ನು ಪೂರ್ಣಗೊಳಿಸಲಾಗಿದೆ. ನವನಗರದ ಪ್ರಥಮ ದರ್ಜೆ ಕಾಲೇಜಿನಲ್ಲಿ ಮಸ್ಟರಿಂಗ್ ಕಾರ್ಯ ನಡೆಯಿದ್ದು, ಚುನಾವಣಾ ಸಿಬ್ಬಂದಿ ಮತಯಂತ್ರಗಳೊಂದಿಗೆ ತಮ್ಮ ತಮ್ಮ ಮತಗಟ್ಟೆಗಳತ್ತ ಪ್ರಯಾಣ ಬೆಳೆಸಿದ್ದಾರೆ.ಈ ಕ್ಷೇತ್ರದಲ್ಲಿ ಒಟ್ಟು 2,59,797 ಮತದಾರರಿದ್ದು, ಪುರುಷರು 1,26,999, ಮಹಿಳೆಯರು 1,32,775 ಹಾಗೂ ಇತರರು 23 ಮಂದಿ ಸೇರಿದ್ದಾರೆ. 170 ಅಂಚೆ ಮತದಾರರಿದ್ದಾರೆ. ಒಟ್ಟು 9 ಅಭ್ಯರ್ಥಿಗಳು ಕಣದಲ್ಲಿದ್ದು, 332 ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. 1,564 ಸಿಬ್ಬಂದಿಯನ್ನು ನಿಯೋಜಿಸಲಾಗಿದ್ದು, ಸೂಕ್ಷ್ಮ ಮತ್ತು ಅತಿಸೂಕ್ಷ್ಮ ಮತಗಟ್ಟೆಗಳನ್ನು ಗುರುತಿಸಲಾಗಿದೆ.

80 ವರ್ಷ ಮೇಲ್ಪಟ್ಟ ಮತದಾರರಿಗೆ ಮನೆಯಲ್ಲೇ ಮತದಾನ ಸೌಲಭ್ಯ ಕಲ್ಪಿಸಲಾಗಿದ್ದು, ಮತಗಟ್ಟೆಗಳಲ್ಲಿ ವ್ಹೀಲ್ಚೇರ್ ವ್ಯವಸ್ಥೆ ಮಾಡಲಾಗಿದೆ. ಯುವ ಮತದಾನ ಕೇಂದ್ರಗಳು ಮತ್ತು ಮಹಿಳೆಯರಿಗಾಗಿ ‘ಸಖಿ’ ಮತಗಟ್ಟೆಗಳು ವಿಶೇಷ ಆಕರ್ಷಣೆಯಾಗಿದೆ.ಮತದಾನ ಪ್ರಕ್ರಿಯೆ ಸುಗಮವಾಗಿರಲು ಬಿಗಿ ಪೊಲೀಸ್ ಭದ್ರತೆ ಕೈಗೊಳ್ಳಲಾಗಿದೆ. ಒಬ್ಬ ಎಸ್ಪಿ, ಇಬ್ಬರು ಎಎಸ್ಪಿ, 10 ಡಿವೈಎಸ್ಪಿ ಸೇರಿದಂತೆ ಸಿಎಪಿಎಫ್ ಪಡೆ ಸೇರಿ ಸುಮಾರು 2,500ಕ್ಕೂ ಹೆಚ್ಚು ಭದ್ರತಾ ಸಿಬ್ಬಂದಿ ನಿಯೋಜಿಸಲಾಗಿದೆ.

ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲೂ ಮುಕ್ತ ಮತ್ತು ಶಾಂತಿಯುತ ಮತದಾನಕ್ಕೆ ಎಲ್ಲಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಪಿಬಿ ರಸ್ತೆಯ ಡಿಆರ್ಆರ್ ಶಾಲೆಯಲ್ಲಿ ಮಸ್ಟರಿಂಗ್ ಕಾರ್ಯ ನಡೆಯುತ್ತಿದ್ದು, ಸಿಬ್ಬಂದಿ ಮತಯಂತ್ರಗಳನ್ನು ಪಡೆದು ಮತಗಟ್ಟೆಗಳತ್ತ ತೆರಳಿದ್ದಾರೆ. ಚುನಾವಣಾ ಕರ್ತವ್ಯಕ್ಕೆ ನಿಯೋಜಿತ ಸಿಬ್ಬಂದಿಗೆ ವೈದ್ಯಕೀಯ ಪರೀಕ್ಷೆಯೂ ನಡೆಸಲಾಗಿದೆ.ಈ ಕ್ಷೇತ್ರದಲ್ಲಿ ಒಟ್ಟು 284 ಮತಗಟ್ಟೆಗಳಿದ್ದು, ಅವುಗಳಲ್ಲಿ 76 ಸೂಕ್ಷ್ಮ ಮತಗಟ್ಟೆಗಳಾಗಿ ಗುರುತಿಸಲಾಗಿದೆ. 1,489 ಸಿಬ್ಬಂದಿ ಚುನಾವಣಾ ಕರ್ತವ್ಯ ನಿರ್ವಹಿಸಲಿದ್ದಾರೆ. ಮತಗಟ್ಟೆಗಳ ಸುತ್ತಮುತ್ತ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಎಲ್ಲ ಮತಗಟ್ಟೆಗಳಲ್ಲಿ ವೆಬ್ಕಾಸ್ಟಿಂಗ್ ವ್ಯವಸ್ಥೆ ಮಾಡಲಾಗಿದೆ.

ಒಟ್ಟು 2,31,072 ಮತದಾರರಿದ್ದು, ಮಹಿಳಾ ಮತದಾರರೇ ಹೆಚ್ಚು ಸಂಖ್ಯೆಯಲ್ಲಿ ಇದ್ದಾರೆ. 25 ಅಭ್ಯರ್ಥಿಗಳು ಕಣದಲ್ಲಿದ್ದು, ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಸಾವಿರಕ್ಕೂ ಹೆಚ್ಚು ಪೊಲೀಸರನ್ನು ಭದ್ರತೆಗೆ ನಿಯೋಜಿಸಲಾಗಿದೆ. ಎರಡು ಕ್ಷೇತ್ರಗಳಲ್ಲೂ ಕಾದು ನೋಡುವ ರಾಜಕೀಯ ಪೈಪೋಟಿ ತಾರಕಕ್ಕೇರಿದ್ದು, ಮತದಾರರ ತೀರ್ಪು ಯಾವ ಪಕ್ಷದ ಪಾಲಾಗಲಿದೆ ಎಂಬುದರ ಮೇಲೆ ರಾಜ್ಯ ರಾಜಕೀಯದ ಗಮನ ನೆಟ್ಟಿದೆ.






