ಐಟಿ ದಾಳಿ ನಡೆಯುತ್ತಿರುವ ಸಂದರ್ಭದಲ್ಲೇ ಆತ್ಮಹತ್ಯೆಗೆ ಶರಣಾಗಿ ಭಾರೀ ಚರ್ಚೆಗೆ ಕಾರಣವಾಗಿದ್ದ ಕಾನ್ಫಿಡೆಂಟ್ ಗ್ರೂಪ್ ಸಂಸ್ಥೆಯ ಮುಖ್ಯಸ್ಥ ಸಿಜೆ ರಾಯ್ ಪ್ರಕರಣದ ತನಿಖೆ ಇದೀಗ ಅಂತಿಮ ಹಂತ ತಲುಪಿದೆ. ವಿಶೇಷ ತನಿಖಾ ದಳ (ಎಸ್ಐಟಿ) ನಡೆಸಿದ ಪರಿಶೀಲನೆಯಲ್ಲಿ ಆತ್ಮಹತ್ಯೆಗೆ ಮಾನಸಿಕ ಖಿನ್ನತೆಯೇ ಪ್ರಮುಖ ಕಾರಣವೆಂದು ತಿಳಿದುಬಂದಿದೆ.

ಜನವರಿ 30ರಂದು ಬೆಂಗಳೂರಿನ ರಿಚ್ಮಂಡ್ ರಸ್ತೆಯಲ್ಲಿರುವ ತಮ್ಮ ಕಚೇರಿಯಲ್ಲಿ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸುತ್ತಿದ್ದ ವೇಳೆ, ಸಿಜೆ ರಾಯ್ ತಮ್ಮ ಕೊಠಡಿಗೆ ತೆರಳಿ ಪಿಸ್ತೂಲಿನಿಂದ ಗುಂಡು ಹೊಡೆದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು. ಈ ಘಟನೆ ದೇಶಾದ್ಯಂತ ಸಂಚಲನ ಮೂಡಿಸಿತ್ತು.ಘಟನೆಯ ನಂತರ, ಐಟಿ ಅಧಿಕಾರಿಗಳ ಒತ್ತಡವೇ ಆತ್ಮಹತ್ಯೆಗೆ ಕಾರಣ ಎಂಬ ಆರೋಪಗಳು ಕೇಳಿಬಂದಿದ್ದವು. ಈ ಹಿನ್ನೆಲೆ ಸರ್ಕಾರ ಪ್ರಕರಣವನ್ನು ಎಸ್ಐಟಿ ತನಿಖೆಗೆ ಒಪ್ಪಿಸಿತ್ತು.

ತನಿಖೆ ವೇಳೆ ಸಿಜೆ ರಾಯ್ ಕಳೆದ ಕೆಲವು ತಿಂಗಳುಗಳಿಂದ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದುದಾಗಿ ಮತ್ತು ಚಿಕಿತ್ಸೆ ಪಡೆಯುತ್ತಿದ್ದುದಾಗಿ ಪತ್ತೆಯಾಗಿದೆ. ಆದರೆ, ಇತ್ತೀಚಿನ ತಿಂಗಳುಗಳಲ್ಲಿ ಅವರು ಚಿಕಿತ್ಸೆ ನಿಲ್ಲಿಸಿದ್ದರೆಂಬ ಮಾಹಿತಿಯೂ ಹೊರಬಂದಿದೆ.ಎಸ್ಐಟಿ ಮೂಲಗಳ ಪ್ರಕಾರ, ಆತ್ಮಹತ್ಯೆಗೆ ನೇರವಾಗಿ ಐಟಿ ಅಧಿಕಾರಿಗಳ ಒತ್ತಡ ಕಾರಣವಾಗಿರುವುದಕ್ಕೆ ಸ್ಪಷ್ಟ ಸಾಕ್ಷ್ಯ ಸಿಕ್ಕಿಲ್ಲ. ಬದಲಾಗಿ, ವೈಯಕ್ತಿಕ ಮಾನಸಿಕ ಆರೋಗ್ಯ ಸಮಸ್ಯೆಗಳೇ ಈ ದುರ್ಘಟನೆಯ ಪ್ರಮುಖ ಕಾರಣ ಎಂದು ತನಿಖೆ ಸೂಚಿಸಿದೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ ಶೀಘ್ರದಲ್ಲೇ ನ್ಯಾಯಾಲಯಕ್ಕೆ ಚಾರ್ಜ್ಶೀಟ್ ಸಲ್ಲಿಸುವ ನಿರೀಕ್ಷೆಯಿದೆ. ಈ ವರದಿ ಬಹಿರಂಗವಾದ ಬಳಿಕ ಪ್ರಕರಣದ ಕುರಿತ ಹಲವು ಅನುಮಾನಗಳಿಗೆ ತೆರೆ ಬೀಳುವ ಸಾಧ್ಯತೆ ಇದೆ.






